ಕರ್ನಾಟಕ ಬಂದ್ಗೆ ಸಿದ್ಧತೆ ಮಾಡುತ್ತಿದ್ದೇವೆ; ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಸೆಪ್ಟೆಂಬರ್ 25: ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಶುಕ್ರವಾರ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿಯೂ ರೈತರು ಹೆದ್ದಾರಿ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Recommended Video
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ, ಜೈಲ್ ಭರೋ ನಡೆಸಲಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಕಳೆದ ಐದು ದಿನಗಳಿಂದ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ಗೆ ಸಹ ಕರೆ ನೀಡಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ರೈತರ ಪ್ರತಿಭಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರೈತರ ನಿಯೋಗವನ್ನು ಕರೆತರಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆದರೆ ರೈತರನ್ನು ವಶಕ್ಕೆ ಪಡೆಯಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದ ಬಣ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಬಣ ಮೈಸೂರು ಬ್ಯಾಂಕ್ ವೃತ್ತಕ್ಕೆ ಬಂದು ಸೇರಿದೆ.

ನಮಗೂ ಇದಕ್ಕೂ ಸಂಬಂಧವಿಲ್ಲ
"ಎರಡೆರಡು ಕಾರ್ಯಕ್ರಮಗಳನ್ನು ಮಾಡುವ ಅವಶ್ಯಕತೆ ಇಲ್ಲ. ಇಂದು ನಡೆಯುತ್ತಿರುವ ಪ್ರತಿಭಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಆದರೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇವೆ" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಶುಕ್ರವಾರ ಬೆಂಗಳೂರಿನಲ್ಲಿ ಹೇಳಿದರು.

ರಸ್ತೆ ತಡೆ ನಮ್ಮ ಹೋರಾಟವಲ್ಲ
"ಇಂದು ರಸ್ತೆ ತಡೆ ಮಾಡುವ ಕಾರ್ಯಕ್ರಮ ನಮ್ಮದಲ್ಲ. ಹೆದ್ದಾರಿ ತಡೆ ಮಾಡಿದರೆ ಅರ್ಧ ಕರ್ನಾಟಕ ಬಂದ್ ಆಗಲಿದೆ. ಆದ್ದಿರಿಂದ, ರಸ್ತೆ ತಡೆಯಲ್ಲಿ ನಾವು ಪಾಲ್ಗೊಳ್ಳುತ್ತಿಲ್ಲ. ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಪಾಲ್ಗೊಂಡಿದ್ದೇವೆ" ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ದೊಡ್ಡ ಸಂಖ್ಯೆಯಲ್ಲಿ ಬಂದ್ ಮಾಡುತ್ತೇವೆ
"ನಾವು ಸೆಪ್ಟೆಂಬರ್ 28ರ ಕರ್ನಾಟಕ ಬಂದ್ಗೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಬಹಳ ದೊಡ್ಡ ಸಂಖ್ಯೆಯಲ್ಲಿ ಬಂದ್ ಮಾಡಲಿದ್ದೇವೆ. ಹಲವಾರು ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲವನ್ನು ನೀಡಿವೆ" ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿವರಣೆ ನೀಡಿದರು.

ಸರ್ಕಾರಕ್ಕೆ ಎಚ್ಚರಿಕೆ
"ಸರ್ಕಾರ ರೈತರ ಹೋರಾಟವನ್ನು ನಿರ್ಲಕ್ಷ್ಯ ಮಾಡಿದರೆ ಬಹಳ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಕನಿಷ್ಠ ಸೌಜನ್ಯಕ್ಕೂ ಸರ್ಕಾರ ರೈತರನ್ನು ಕರೆದು ಮಾತನಾಡಿಸಿಲ್ಲ" ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications