ದಾವಣಗೆರೆ: ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ಜಿಲ್ಲಾ ಉಸ್ತುವಾರಿ ಸಚಿವರ ಪ್ಲಾನ್ ಏನು?
ದಾವಣಗೆರೆ, ಮಾರ್ಚ್, 05: ಮುಂದಿನ ದಿನಗಳಲ್ಲಿ ಕಾಲುವೆಗೆ ನೀರು ಹರಿಸುವ ವೇಳೆ ಎಲ್ಲಾ ಅನಧಿಕೃತ ಪಂಪ್ಸೆಟ್ಗಳ ತೆರವು ಮಾಡಿ ಕೊನೆ ಭಾಗದ ರೈತರಿಗೆ ನೀರು ಕೊಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದರು.
ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾ ಅಡಳಿತ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ದೊಡ್ಡಬಾತಿ ಹಾಗೂ ಹಳೆಬಾತಿ ಗ್ರಾಮ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರಿಂದ ಅಹವಾಲು ಸ್ವೀಕಾರ, ವಿವಿಧ ಸರ್ಕಾರಿ ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭದ್ರಾ ಬಲದಂಡೆ ನಾಲೆಯಿಂದ ಕಾಲುವೆಗಳಿಗೆ ಫೆಬ್ರವರಿ 16ರಿಂದ 28ರ ವರೆಗೆ ನೀರು ಹರಿಸಿದ ವೇಳೆ ಕಾಲುವೆಯಲ್ಲಿ ಅನಧಿಕೃತ ಪಂಪ್ಸೆಟ್ ಅಳವಡಿಸಿದ ಕಾರಣ ಕೊನೆ ಭಾಗದ ರೈತರಿಗೆ ನೀರು ತಲುಪಲು ಸಾಧ್ಯವಾಗಿಲ್ಲ. ಆದರೂ ಸಹ ಅಧಿಕಾರಿಗಳು ತೆರವು ಕಾರ್ಯಾಚರಣೆ ಮಾಡಿ ನೀರು ತಲುಪಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಅನಧಿಕೃತ ಪಂಪ್ಸೆಟ್ ತೆರವು ಕಾರ್ಯಾಚರಣೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಮುಲಾಜಿಗೆ ಮಣಿಯದೇ ನೀರಿನ ಸೋರಿಕೆಗೆ ಕಡಿವಾಣ ಹಾಕುವ ಮೂಲಕ ಕೊನೆ ಭಾಗದ ರೈತರಿಗೆ ನೀರು ತಲುಪಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಬರ ನಿರ್ವಹಣೆ: ಮುಂಗಾರು, ಹಿಂಗಾರು ಮಳೆಯ ಕೊರತೆ ಮತ್ತು ಜಲಾಶಯದಲ್ಲಿ ನೀರಿನ ಸಂಗ್ರಹದ ಕೊರತೆಯ ಕಾರಣದಿಂದ ಸುಡು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯವಿದ್ದಲ್ಲಿ ಹೊಸ ಕೊಳವೆಬಾವಿ ಕೊರೆಸಲು ಮತ್ತು ಬಾಡಿಗೆ ಆಧಾರದ ಮೇಲೆ ಕೊಳವೆ ಬಾವಿಗಳನ್ನು ಪಡೆಯುವ ಮೂಲಕ ಬೇಸಿಗೆ ನಿರ್ವಹಣೆ ಮಾಡಬೇಕಾಗಿದೆ ಎಂದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಅಭಾವ ಇದೆ ಎಂದು ದೂರುಗಳು ಬರಬಾರದು. ಚನ್ನಗಿರಿ, ಜಗಳೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ನಿರೀಕ್ಷೆ ಇದ್ದು, ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಕೆಲಸ ಮಾಡಬೇಕು ಎಂದರು. ಇನ್ನು ಜನಪರ, ಹಾಗೂ ಅಭಿವೃದ್ದಿಪರ ಹಾಗೂ ಬಡವರ ಪರವಾದ ಸರ್ಕಾರವಾಗಿದೆ ಎಂದರು.
ಜನರಿಗೆ ಬೇಕಾದ ಆಹಾರ ಧವಸ, ಆರೋಗ್ಯ ರಕ್ಷಣೆ, ಕುಡಿಯುವ ನೀರು ಪೂರೈಕೆ, ವಸತಿ, ಶಿಕ್ಷಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುನ್ನುಗ್ಗುತ್ತಿದೆ. ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಹೆಚ್ಚುವರಿಯಾಗಿ 100 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಕಾಡಜ್ಜಿ ಮತ್ತು ಆವರಗೊಳ್ಳಕ್ಕೆ ಹೊಸದಾಗಿ ಪಶು ಆಸ್ಪತ್ರೆ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಬಾತಿ ಕೆರೆ ಅಭಿವೃದ್ದಿ ಮಾಡಿ ಈ ಭಾಗದ ಹಾಗೂ ಸುತ್ತಮುತ್ತಲಿನ ಜನರಿಗೆ ಮತ್ತು ಗ್ರಾಮಗಳಿಗೆ ನೀರಿನ ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಕಡ್ಲೆಬಾಳು ಗ್ರಾಮದಲ್ಲಿ ಮೊದಲ ಜನತಾ ದರ್ಶನ ಕಾರ್ಯಕ್ರಮ ಮಾಡಿದ್ದು, ಇಲ್ಲಿ ಸ್ವೀಕರಿಸಲಾದ ಅರ್ಜಿಗಳಲ್ಲಿ ಶೇಕಡಾ 98ರಷ್ಟು ವಿಲೇ ಮಾಡಲಾಗಿದೆ. ಕೆಲವು ಕೌಟುಂಬಿಕ ಸಮಸ್ಯೆ, ವ್ಯಾಜ್ಯಗಳ ಕಾರಣ ಕೆಲವೊಂದು ಅರ್ಜಿಗಳ ಇತ್ಯರ್ಥ ಮಾಡಲು ಸಾಧ್ಯವಾಗಿಲ್ಲ. ಅಮೃತ ನಗರದಲ್ಲಿ
ಅನೇಕ ವರ್ಷಗಳಿಂದ ಮನೆಗಳಿಗೆ ಹಕ್ಕುಪತ್ರಗಳನ್ನು ಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಜನತಾ ದರ್ಶನದಲ್ಲಿ ಇತ್ಯರ್ಥ ಮಾಡಿ ಎಲ್ಲಾ ಮನೆ ಮಾಲಿಕರಿಗೆ ಇ-ಸ್ವತ್ತು ದಾಖಲೆ ವಿತರಿಸಲಾಗಿದೆ ಎಂದು ಹೇಳಿದರು.
ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ.ಡಿ ಇವರು ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ಎ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕರಿಬಸಪ್ಪ, ಗಿರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.












Click it and Unblock the Notifications