ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ; ರೈತರಿಗೆ ಉಚಿತವಾಗಿ ಔಷಧಿ
ಬೆಂಗಳೂರು, ಸೆಪ್ಟೆಂಬರ್ 16; ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದೆ. ರೋಗದ ನಿರ್ವಹಣೆ ಕುರಿತು ಆರಗ ಜ್ಞಾನೇಂದ್ರ ಸಭೆ ನಡೆಸಿದರು. ಈ ಸಮಸ್ಯೆ ಹತೋಟಿಗೆ ತರಲು ರೈತರಿಗೆ ಉಚಿತ ಔಷಧಿ ಹಾಗೂ ಇತರ ಸಹಾಯವನ್ನು ಸರ್ಕಾರದಿಂದ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ತೋಟಗಾರಿಕಾ ಸಚಿವ ಮುನಿರತ್ನ ಜೊತೆ ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ ಸಭೆ ನಡೆಸಿದರು. ಮೀನುಗಾರಿಕಾ ಸಚಿವ ಎಸ್. ಅಂಗಾರ, ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಲೆನಾಡಿನಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ತೋಟಗಾರಿಕಾ ಸಚಿವ ಮುನಿರತ್ನ ಅವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಹಾನಿಗೊಳಗಾದ ರೈತರಿಗೆ ಆರ್ಥಿಕ ಪರಿಹಾರ, ರೋಗದ ಹತೋಟಿ ಬಗ್ಗೆ ಚರ್ಚೆಯಾಯಿತು. ಬೆಳೆ ಹಾನಿ ಸಮೀಕ್ಷೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.
ಎಲೆ ಚುಕ್ಕಿ ರೋಗದಿಂದಾಗಿ ಮಲೆನಾಡು, ಕರಾವಳಿಯ ಜಿಲ್ಲೆಗಳ ಅಡಿಕೆ ತೋಟಗಳಲ್ಲಿ ಮರಗಳಿಗೆ ಹಾನಿಯಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಆತಂಕಗೊಂಡಿದ್ದಾರೆ. ಈ ವರ್ಷ ಮಳೆಯೂ ಹೆಚ್ಚಾಗಿದ್ದು, ಕೊಳೆ ರೋಗ ಸಹ ಅಡಿಕೆಯನ್ನು ಕಾಡುತ್ತಿದೆ.

ಎಲೆ ಚುಕ್ಕೆ ರೋಗ ಹತೋಟಿ ಕ್ರಮಗಳು
ಅಡಿಕೆ ಬೆಳೆಯಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗದ ಲಕ್ಷಣಗಳು, ಕಾರಣವಾದ ಅಂಶಗಳು ಹಾಗೂ ಹತೋಟಿ ಕ್ರಮಗಳ ಬಗ್ಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಮಳಲೂರಿನ ಅರೇಹಳಿ ಗ್ರಾಮದಲ್ಲಿ ರೋಗದ ಹತೋಟಿ ಕುರಿತು ತರಬೇತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿವಿಯ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ. ನಾಗರಾಜಪ್ಪ ಅಡಿವಪ್ಪರ್ ರೈತರಿಗೆ ರೋಗದ ಕುರಿತು ಮಾಹಿತಿ ನೀಡಿದರು.

ಎಲೆ ಚುಕ್ಕೆ ರೋಗದ ಲಕ್ಷಣಗಳು
ಎಲೆ ಚುಕ್ಕೆ ರೋಗ ಬಾಧಿತ ಮರಗಳ ಕೆಳಗಿನ ಸೋಗೆಗಳ ಮೇಲ್ಭಾಗದಲ್ಲಿ ಹಳದಿ ಮತ್ತು ಕಪ್ಪು ಬಣ್ಣದ ಚುಕ್ಕೆಗಳು ಕಾಣಿಸುತ್ತವೆ. ಮುಂದುವರೆದು ಈ ಚುಕ್ಕೆಗಳು ಶೀಘ್ರವಾಗಿ ಒಂದಕ್ಕೊಂದು ಕೂಡಿಕೊಂಡು ಪೂರ್ತಿ ಹೆಡೆಗಳನ್ನು ಆವರಿಸುತ್ತವೆ, ನಂತರ ಹೆಡೆಗಳು ಒಣಗಲಾರಂಭಿಸುತ್ತವೆ. ಇಂತಹ ಒಣಗಿದ ಎಲ್ಲಾ ಹೆಡೆಗಳು ಜೋತು ಬಿದ್ದು ಮರ ಶಕ್ತಿಕಳೆದುಕೊಂಡು ಇಳುವರಿ ಕುಂಠಿತಗೊಳ್ಳುತ್ತದೆ.
ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಬಗ್ಗೆ ಸಭೆ ನಡೆಸಿದರು. ರೋಗದ ನಿರ್ವಹಣೆ ಕುರಿತು ಚರ್ಚೆ ನಡೆಸಿದರು.

ರೋಗಕ್ಕೆ ಕಾರಣವಾದ ಅಂಶಗಳು
ಈ ರೋಗವು ಕೊಲ್ಲೆಟೋಟ್ರೈಕಮ್ ಗ್ಲೀಯೋಸ್ಪೊರೈಡ್ಸ್ ಮತ್ತು ಫಿಲ್ಲೊಸ್ಟಿಕ್ಟ ಅರಕೆ ಎಂಬ ಎರಡು ಶಿಲೀಂಧ್ರಗಳಿಂದ ಉಂಟಾಗುತ್ತದೆ. ಶಿಲೀಂಧ್ರವು ಬಿದ್ದ ಗರಿಗಳಲ್ಲಿ ವಾಸಿಸುವುದು, ಮಳೆಹನಿಗಳು ಚಿಮ್ಮುವುವಿಕೆಯಿಂದ ಶಿಲೀಂಧ್ರದ ಕಣಗಳು ಗಾಳಿಯಲ್ಲಿ ಸೇರಿ ಗರಿಗಳನ್ನು ತಲುಪುತ್ತವೆ.
ಹಾಗೆಯೇ ತೇವಭರಿತ ಬಿಸಿಲಿನ ವಾತಾವರಣ, ಕಡಿಮೆ ಉಷ್ಣಾಂಶ (180 ರಿಂದ 240 ಸೆ) ಮತ್ತು ಹೆಚ್ಚಿನ ಆದ್ರತೆ (80 ರಿಂದ 90%) ಈ ರೋಗದ ತೀವ್ರತೆ ಮತ್ತು ಹರಡುವಿಕೆಗೆ ಪೂರಕವಾದ ಅಂಶಗಳಾಗಿರುತ್ತವೆ. ರೋಗವು ವರ್ಷ ಪೂರ್ತಿ ಕಂಡುಬಂದರೂ ಸಹ ಮಾರ್ಚ್ ನಿಂದ ಸೆಪ್ಟಂಬರ್ ತಿಂಗಳ ವರೆಗೂ ಹೆಚ್ಚಾಗಿ ಬಾಧೆಯನ್ನು ಉಂಟುಮಾಡುತ್ತದೆ.

ರೋಗದ ನಿರ್ವಹಣೆ ಹೇಗೆ?
ರೋಗ ಬಾಧಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.
ರೋಗ ಲಕ್ಷಣದ ಪ್ರಾರಂಭದಲ್ಲಿ ಮುಂಜಾಗ್ರತವಾಗಿ ಶಿಲೀಂಧ್ರನಾಶಕಗಳಾದ ಮ್ಯಾಂಕೋಜೆಬ್ (2.5 ಗ್ರಾಂ) ಅಥವಾ ಸಾಫ್ (ಮ್ಯಾಂಕೋಜೆಂಬ್ ಶೇ 63 ಕಾರ್ಬೆನ್ಡೈಜೀಮ್ ಶೇ 12) 2 ಗ್ರಾಂ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು ಅಥವಾ ಹೆಕ್ಸಕೊನಜೋಲ್ ಶೇ 5 ಎಸ್.ಸಿ ಅಥವಾ ಪ್ರೊಪಿಕೊನಜೋಲ್ ಶೇ 25 ಇ.ಸಿ ಅಂತರವ್ಯಾಪಿ ಶಿಲೀಂಧ್ರನಾಶಕಗಳನ್ನು 1 ಮಿ.ಲೀ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಅಂಟು ದ್ರಾವಣದ (1 ಮಿ.ಲೀ) ಜೊತೆಗೆ ಸಿಂಪಡಿಸಬೇಕು.












Click it and Unblock the Notifications