ಬೆಂಗಳೂರಲ್ಲಿ ಮಳೆಯಿಲ್ಲ, ನೀರಿಲ್ಲ: ಆದರೂ ತಮಿಳುನಾಡಿಗೆ ಕಾವೇರಿ ನೀರು! ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು?


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಕೊರತೆಯಿಂದಾಗಿ ಎಲ್ಲೆಡೆ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಉಂಟಾಗಿರುವ ಈ ಸಂಧರ್ಭದಲ್ಲಿ, ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದ ರೈತರ ಹಿತರಕ್ಷಣೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಕೋರ್ಟ್ ಆದೇಶವನ್ನು ಪಾಲನೆ ಮಾಡುವ ಅನಿವಾರ್ಯತೆಯನ್ನು ವಿವರಿಸಿದ್ದಾರೆ.

Advertisement

"ಕಾವೇರಿ ಜಲ ವಿವಾದದಲ್ಲಿ ನಾವು ನಮ್ಮ ರಾಜ್ಯದ ರೈತರನ್ನು ಮೊದಲು ಬದುಕಿಸಬೇಕು. ಜನರಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಅದೇ ಸಮಯದಲ್ಲಿ ತಮಿಳುನಾಡು ಪಾಲಿನ ನೀರು ಹರಿಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನೂ ಗೌರವಿಸಿ ಪಾಲನೆ ಮಾಡಬೇಕಿದೆ," ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

Advertisement

ಮಂಡ್ಯ ಭಾಗದ ಶಾಸಕರು ಕಾವೇರಿ ನೀರು ಬಿಡುವಂತೆ ಮಾಡಿರುವ ಮನವಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಮಂಡ್ಯ ಹಾಗೂ ಶ್ರೀರಂಗಪಟ್ಟಣದ ಶಾಸಕರು ಮತ್ತು ಜಿಲ್ಲಾ ಸಚಿವರು ಬಂದು ನನ್ನನ್ನು ಭೇಟಿ ಮಾಡಿದ್ದಾರೆ. ಜುಲೈ 15ರಂದು ನಡೆಯಲಿರುವ ಕಾವೇರಿ ಮಂಡಳಿ ಸಭೆಯಲ್ಲಿ ನಮ್ಮ ರಾಜ್ಯದಲ್ಲಿರುವ ಸ್ಥಿತಿ ಹಾಗೂ ವಾದವನ್ನು ಮಂಡಿಸುತ್ತೇವೆ. ಸಭೆಯ ನಂತರ ಅಂತಿಮ ತೀರ್ಮಾನವನ್ನು ಜನತೆಗೆ ತಿಳಿಸುತ್ತೇವೆ" ಎಂದರು.

ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು

ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಈ ಬಗ್ಗೆ ರಾಜ್ಯಪಾಲರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ನಿಯಮಗಳ ಪ್ರಕಾರ, ಅಮಾನತುಗೊಂಡಿರುವ ಅಧ್ಯಕ್ಷರ ನಂತರ ಆಯೋಗದಲ್ಲಿ ಯಾರು ಅತ್ಯಂತ ಹಿರಿಯ ಸದಸ್ಯರಿದ್ದಾರೋ ಅವರಿಗೆ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸುವಂತೆ ನಾನು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ" ಎಂದರು.

Advertisement

ತಿರುಪತಿಯಲ್ಲಿ ಆಗುವ ಮೊದಲ ಆರತಿ ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ

ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗೆ ಎಂಬ ತೀರ್ಮಾನದ ಬಗ್ಗೆ ಕೇಳಿದಾಗ, "ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿ‌ನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ" ಎಂದು ತಿಳಿಸಿದರು.

Advertisement

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ

"ಸಚಿವ ಸಂಪುಟ ಸಭೆ ಯಾವಾಗ, ದೆಹಲಿಗೆ ಹೋಗುವುದು ಯಾವಾಗ ಎಂದು ಕೇಳಿದಾಗ, "ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ" ಎಂದು ಮಾಹಿತಿ ನೀಡಿದರು.

"ಮಾಜಿ ಸಂಸದರಾದ ಹೆಚ್ ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ರೈಲ್ವೇ ಆಯೋಗಕ್ಕೆ ಅಧ್ಯಕ್ಷರಾಗಿದ್ದರು. 45 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದರು. ನಮ್ಮ ಪಕ್ಷದ ಉಪಾಧ್ಯಕ್ಷರಾಗಿ, ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ನಾನು, ಕೆಪಿಸಿಸಿ ಅದ್ಯಕ್ಷರಾದ ಬಿ ಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್, ಸಚಿವರಾದ ಮುನಿಯಪ್ಪ ಅವರು ಅವರಿಗೆ ಅಂತಿಮ ನಮನ ಸಲ್ಲಿಸಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯ ಹಾಗೂ ರಾಷ್ಟ್ರದ ಸಮಸ್ಯೆಗಳಿಗೆ ಮಾರ್ಗದರ್ಶನ ಕೊಟ್ಟ ಹಿರಿಯ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ" ಎಂದು ತಿಳಿಸಿದರು.

English Summary

Despite the severe water crisis and lack of rain in Bengaluru, CM DK Shivakumar has addressed the issue of releasing Cauvery water to Tamil Nadu.