Union Budget 2026: ಕೇಂದ್ರ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ನಾನು ಕೇಂದ್ರ ಬಜೆಟ್ ನೋಡಿದೆ, ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಬಜೆಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ರಾಜ್ಯದ ನಿರೀಕ್ಷೆಗಳು ಹುಸಿಯಾಗಿವೆ. ಕೇಂದ್ರ ಬಜೆಟ್ನಿಂದ ಕರ್ನಾಟಕ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಪ್ರಮುಖ ಪಾಲು ಸಿಗುವುದಿಲ್ಲ. ಕೇಂದ್ರ ಬಜೆಟ್ನಿಂದ ಬೆಂಗಳೂರಿಗೆ ನಿರೀಕ್ಷೆಗಳಿದ್ದವು. ಪ್ರಧಾನಿ ನರೇಂದ್ರ ಮೋದಿ ಇದನ್ನು ಜಾಗತಿಕ ನಗರ ಎಂದು ಕರೆದಿದ್ದಾರೆ. ಆದರೆ, ಕೇಂದ್ರ ಸರ್ಕಾರ ಅದಕ್ಕಾಗಿ ಏನು ಮಾಡಿದೆ. ಸಿಲಿಕಾನ್ ಸಿಟಿ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಯನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ನಿರ್ಧಾರಗಳು ಅಥವಾ ಕ್ರಮಗಳ ಕೊರತೆಯಿಂದಾಗಿ ಸಕ್ಕರೆ ಕಾರ್ಖಾನೆಗಳು, ವಿಶೇಷವಾಗಿ ಸಹಕಾರಿ ವಲಯದ ಕಾರ್ಖಾನೆಗಳು ತೊಂದರೆ ಎದುರಿಸುತ್ತಿವೆ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸುವ ಹಕ್ಕು ಕೇಂದ್ರಕ್ಕೆ ಇದೆ. ರೈತರಿಗೆ ಸಹಾಯ ಮಾಡಲು ಅವರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಬಜೆಟ್ನ ಅಂಶಗಳನ್ನು ಗಮನಿಸಿದ್ದೇನೆ, ಆದರೆ ಸಂಪೂರ್ಣ ವಿವರಗಳನ್ನು ಇನ್ನೂ ಪರಿಶೀಲಿಸಬೇಕಿದೆ. ಮೇಲ್ನೋಟಕ್ಕೆ ನಮ್ಮ ರಾಜ್ಯಕ್ಕೆ ಇದರಿಂದ ಯಾವುದೇ ದೊಡ್ಡ ಪಾಲು ಸಿಕ್ಕಿಲ್ಲ. ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಿಸಿರುವುದನ್ನು ಉಲ್ಲೇಖಿಸಿದ ಅವರು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ 'ವಿಬಿ-ಜಿ ರಾಮ್ ಜಿ' (VB-G RAM G) ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಶೇ. 60:40 ಅನುಪಾತದ ನಿಧಿ ಹಂಚಿಕೆಯ ಸೂತ್ರವಿದ್ದು, ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಹಕಾರಿ ವಲಯದ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೇಂದ್ರವು ಯಾವುದೇ ಪರಿಹಾರ ಸೂಚಿಸಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವ ಅಧಿಕಾರ ಕೇಂದ್ರಕ್ಕಿದೆ, ರೈತರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.












Click it and Unblock the Notifications