ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನ ನಾಡಿನ ಜನರಿಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ ಬೊಮ್ಮಾಯಿ!
ಬೆಂಗಳೂರು, ಆ. 15: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಮೊದಲ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ಹಲವು ನೂತನ ಯೋಜನೆಗಳನ್ನು ಘೋಷಣೆ ಮಾಡುತ್ತಾರೆ ಎಂಬ ಮಾಹಿತಿಯಿತ್ತು. ಆದರೆ ನಿರೀಕ್ಷೆಗೂ ಮೀರಿ ಒಟ್ಟು 11 ಹೊಸ ಯೋಜನೆಗಳನ್ನು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ನಮ್ಮ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ತಮ್ಮ ಭಾಷಣದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಹೊಸ ಯೋಜನೆಳನ್ನು ಜಾರಿಗೆ ತಂದಿರುವುದು ವಿಶೇಷ. ಹೊಸ ಯೋಜನೆಗಳು ಯಾವವು? ಯಾರಿಗೆ ಯೋಜನೆಗಳಿಂದ ಅನುಕೂಲವಾಗಲಿದೆ? ಎಂಬುದು ಮುಂದಿದೆ.

ಗ್ರಾಮೀಣ ಭಾಗದ ಜನರಿಗೆ ಹೊಸ ಯೋಜನೆಗಳು
1. ಅಮೃತ ಗ್ರಾಮ ಪಂಚಾಯತಿಗಳು
ಅಮೃತ ಗ್ರಾಮ ಪಂಚಾಯತಿ ಯೋಜನೆಯಡಿ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
2. ಅಮೃತ ಗ್ರಾಮೀಣ ವಸತಿ ಯೋಜನೆ
ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ವಸತಿ ರಹಿತ ಮತ್ತು ಆಶ್ರಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ಜಾರಿಯಲ್ಲಿರುವ ವಸತಿ ಯೋಜನೆಗಳೊಂದಿಗೆ ಈ ಹೊಸ ಯೋಜನೆಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಗ್ರಾಮೀಣ ಭಾಗದವರಿಗೆ ಅನುಕೂಲವಾಗುವ ಮತ್ತೊಂದು ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದಾರೆ.
3. ಅಮೃತ ರೈತ ಉತ್ಪಾದಕ ಸಂಸ್ಥೆಗಳು
ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಅಮೃತ ರೈತ ಉತ್ಪಾದಕ ಸಂಸ್ಥೆಗಳು ಯೋಜನೆ ಮೂಲಕ ನೇಕಾರರು ಹಾಗೂ ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟ ಎರಡೂ ಈ ಯೋಜನೆ ಮೂಲಕ ಆಗಲಿವೆ.

ನಗರ ಪ್ರದೇಶದ ಜನರಿಗಾಗಿ ಹೊಸ ಯೋಜನೆ!
4. ಅಮೃತ ನಿರ್ಮಲ ನಗರ
ನಗರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ನಂತೆ 75 ಕೋಟಿ ರೂ. ಗಳನ್ನು ಒದಗಿಸುವ ಘೊಷಣೆಯನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ. ಈ ಯೋಜನೆಯೊಂದಿಗೆ ಅಮೃತ ಶಾಲಾ ಯೋಜನೆಯನ್ನೂ ಘೋಷಣೆ ಮಾಡಿದ್ದಾರೆ.
5. ಅಮೃತ ಶಾಲಾ ಸೌಲಭ್ಯ ಯೋಜನೆ
ಅಮೃತ ಶಾಲಾ ಯೋಜನೆಯಡಿ ನಾಡಿನ ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಲು ಹೊಸ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ.
6. ಅಮೃತ ಅಂಗನವಾಡಿ ಕೇಂದ್ರಗಳು
ಅಮೃತ ಅಂಗನವಾಡಿ ಕೇಂದ್ರಗಳು ಯೋಜನೆಯಡಿ ಅಂಗನವಾಡಿಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ. ನಂತೆ ಒಟ್ಟು 7.5 ಕೋಟಿ ರೂ. ಹಣ ವಿನಿಯೋಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಅದರೊಂದಿಗೆ ಸಣ್ಣ ಉದ್ಯಮ ಸ್ಥಾಪಿಸಲು ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದೆ.

ಸಣ್ಣ ಉದ್ಯಮ ಆರಂಭಿಸಲು ಹೊಸ ಯೋಜನೆ!
7. ಅಮೃತ ಸ್ವಸಹಾಯ ಕಿರು ಉದ್ದಿಮೆಗಳು
ಸಣ್ಣ ಉದ್ಯಮಗಳನ್ನು ಆರಂಭಿಸಲು ಅಮೃತ ಸ್ವಸಹಾಯ ಕಿರು ಉದ್ದಿಮೆಗಳು ಯೋಜನೆಯಡಿ ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ (Micro Enterprises) ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು (ಸೀಡ್ಮನಿ) ಒದಗಿಸಲಾಗುವುದು. ಈ ಯೋಜನೆ ಮೂಲಕ ಉದ್ಯಮ ಆರಂಭಿಸಲು ಸಹಾಯಕವಾಗಲಿದೆ.
8. ಅಮೃತ ಸಮುದಾಯ ಅಭಿವೃದ್ಧಿ ಯೋಜನೆ
ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತೊಡಗಿಸಿಕೊಂಡು ಸಮುದಾಯದ ಅಭಿವೃದ್ಧಿ ಮಾಡುವುದು ಸಿಎಂ ಬೊಮ್ಮಾಯಿ ಅವರ ಗುರಿಯಾಗಿದೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಾಯಕಲ್ಪ ಕೊಡಲು ಯೋಜನೆ ಘೋಷಣೆ ಮಾಡಿದ್ದಾರೆ.

ಕ್ರೀಡಾ ಕ್ಷೇತ್ರಕ್ಕೆ ವಿನೂತನ ಯೋಜನೆ ಜಾರಿಗೆ
9. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ
ಕೊರೊನಾ ವೈರಸ್ ಸೇರಿದಂತೆ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಲು ಸಿಎಂ ಬೊಮ್ಮಾಯಿ ತೀರ್ಮಾನಿಸಿದ್ದಾರೆ. ಹೀಗಾಗಿ ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
10. ಅಮೃತ ಕೌಶಲ್ಯ ತರಬೇತಿ ಯೋಜನೆ
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 12 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ಈ ಸಲದ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪುಟಗಳ ಉತ್ತಮ ಪ್ರದರ್ಶನದಿಂದ ಸಿಎಂ ಬೊಮ್ಮಾಯಿ ಹೊಸ ಯೋಜನೆ ಘೋಷಣೆ ಮಾಡಿದ್ದಾರೆ.
11. ಅಮೃತ ಕ್ರೀಡಾ ದತ್ತು ಯೋಜನೆ
ಟೋಕಿಯೋ ಒಲಂಪಿಕ್ಸ್ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯ ಬಜೆಟ್ ಮಂಡನೆಗೆ ಇನ್ನೂ ಆರು ತಿಂಗಳುಗಳ ಕಾಲಾವಕಾಶವಿದೆ. ಹೀಗಾಗಿ ಈ ಯೋಜನೆಗಳ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ತೆತೆದುಕೊಂಡು ಹೋಗಲು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಆದರೆ ಸ್ವಾತಂತ್ರ್ಯ ದಿನದಂದು ಘೋಷಣೆ ಮಾಡಿರುವ ಯೋಜನೆಗಳು ಅತ್ಯಂತ ಪರಿಣಾಮಕಾರಿಯಾಗಿ ಜಾರಿಯಾಗಲಿದೆ ಎಂಬುದು ನಾಡಿನ ಜನರ ಒತ್ತಾಯ!












Click it and Unblock the Notifications