ರಾಜ್ಯದಲ್ಲಿ ನೂತನ ಡಿಜಿಟಲೀಕರಣ ನೀತಿ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಆ. 23: ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡಲು ಶಿಕ್ಷಣ ಸಂಸ್ಥೆಗಳು, ಸಂಶೊಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಹಾಗೂ ಉದ್ಯಮಗಳನ್ನು ಬೆಸೆಯುವ 'ಸಂಶೋಧನೆ ಮತ್ತು ಅಭಿವೃದ್ಧಿ ನೀತಿ'ಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಚಾಲನೆ, 2021-22ನೇ ಸಾಲಿನ ಉನ್ನತ ಶಿಕ್ಷಣ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ. ಇದಕ್ಕೆ ಕರ್ನಾಟಕಕ್ಕಿಂತ ಉತ್ತಮ ತಾಣ ಇನ್ನೊಂದಿಲ್ಲ. ದೇಶದಲ್ಲಿ ಅತಿ ಹೆಚ್ಚು ಅಂತರರಾಷ್ಟ್ರೀಯ ಮಾನ್ಯತೆ ಪಡೆದ 180 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ಶಿಕ್ಷಣ ಸಂಸ್ಥೇಗಳು ಇಂತಹ ಸಂಶೋಧನಾ ಸಂಸ್ಥೆಗಳು ಹಾಗೂ ಉದ್ಯಮದೊಂದಿಗೆ ಪರಸ್ಪರ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಉದ್ದೇಶದಿಂದ ಈ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮಕ್ಕಳಿಗೆ ಕೋವಿಡ್ನಿಂದ ಸ್ವಾತಂತ್ರ್ಯ ದೊರೆತಿದೆ
"ವಿದ್ಯಾರ್ಥಿಗಳಿಗೆ ಇಂದು ನಿಜವಾದ ಸ್ವಾತಂತ್ರ್ಯ ದಿನ. ಇಂದು ಶಾಲೆ ಪ್ರಾರಂಭವಾಗಿದ್ದು, ಮಕ್ಕಳಿಗೆ ಕೋವಿಡ್ ನಿಂದ ಸ್ವಾತಂತ್ರ್ಯ ದೊರೆತಿದೆ. ಅಂತೆಯೇ ಈ ಸಮಾರಂಭದಲ್ಲಿ ಜಡ್ಡುಗಟ್ಟಿದ ವ್ಯವಸ್ಥೆ ಮತ್ತು ನೀತಿಯಿಂದ ಉನ್ನತ ಶಿಕ್ಷಣಕ್ಕೆ ಮುಕ್ತಿ ದೊರೆತಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಇದು ಕೇವಲ ಇಂದಿಗಲ್ಲ. ಮುಂದಿನ ಜನಾಂಗಕ್ಕೆ ಸ್ವಾತಂತ್ರ್ಯದ ದಿನ. ಇದು ಯಶಸ್ವಿಯಾದರೆ, ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಮಾಡುವಂತೆ ಆಗಸ್ಟ್ 23 ರಂದು ಶಿಕ್ಷಣ ದಿನ ಆಚರಿಸಬೇಕಾಗುವುದು. ಇದನ್ನು ಯಶಸ್ವಿಗೊಳಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣ ವ್ಯವಸ್ಥೆಯನ್ನು ಎಲ್ಲ ಬಂಧ, ಚೌಕಟ್ಟುಗಳಿಂದ ಮುಕ್ತಗೊಳಿಸಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುತ್ತದೆ. ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವಿಭಜನೆ ಇರಬಾರದು. ಶಿಕ್ಷಣ ವ್ಯವಸ್ಥೆಯ ಬಂಧಗಳಿಂದಾಗಿ, ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳೆಸಲು ಸಾಧ್ಯವಾಗುತ್ತಿಲ್ಲ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯ ಸ್ವಾತಂತ್ರ್ಯ ಮಾತ್ರವಲ್ಲ, ಅವರ ಕ್ರಿಯಾಶೀಲತೆಯ ಬೆಳವಣಿಗೆಯ ಸ್ವಾತಂತ್ರ್ಯವನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಆಯ್ಕೆ, ಅವಕಾಶ ಒದಗಿಸುವ ಶಿಕ್ಷಣ ನೀತಿ
"ವಿದ್ಯಾರ್ಥಿ ಪಡೆದ ಶಿಕ್ಷಣವನ್ನು ಸಮಾಜ ಗುರುತಿಸಬೇಕೆನ್ನುವ ದೃಷ್ಟಿಯಿಂದ ಸರ್ಕಾರ ಗುರುತಿಸುತ್ತದೆ ಹಾಗೂ ಪ್ರತಿ ವರ್ಷದ ಶಿಕ್ಷಣ ಪೂರ್ಣಗೊಳಿಸಿದ್ದಕ್ಕೆ ಪ್ರಮಾಣ ಪತ್ರ ನೀಡುತ್ತದೆ. ವಿದ್ಯಾರ್ಥಿಗಳಿಗೆ ಆಯ್ಕೆ ಮತ್ತು ಅವಕಾಶಗಳನ್ನು ಒದಗಿಸುವ ಶಿಕ್ಷಣ ನೀತಿ ಇದಾಗಿದೆ. ಬದಲಾವಣೆ ಸ್ವಲ್ಪ ಕಷ್ಟಕರ. ಆದ್ದರಿಂದ ಶಿಕ್ಷಣ ನೀತಿಯ ಪರಿಕಲ್ಪನೆಯು ಜನರ ಮನದಾಳದಲ್ಲಿ ಘನೀಭವಿಸುವಂತೆ ಮಾಡಬೇಕು. ಈ ಸವಾಲಿನ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವಿದೆ" ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಡಿಜಿಟಲೀಕರಣ ನೀತಿ ಜಾರಿಗೆ
ನೂತನ ಶಿಕ್ಷಣ ನೀತಿಯ ಯಶಸ್ವಿ ಅನುಷ್ಠಾನದಲ್ಲಿ ಡಿಜಿಟಲೀಕರಣ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ಕೇವಲ ಆಡಳಿತಕ್ಕೆ ಮಾತ್ರವಲ್ಲ, ವ್ಯವಹಾರ, ಶಿಕ್ಷಣಕ್ಕೂ ಡಿಜಿಟಲೀಕರಣ ಅತಿ ಮುಖ್ಯ. ಈ ಹಿನ್ನೆಲೆಯಲ್ಲಿ ಸಂಪೂರ್ಣ ನೆಟ್ವರ್ಕಿಂಗ್ ಪ್ರತಿ ಗ್ರಾಮಕ್ಕೆ ತಲುಪುವಂತಾಗಲು ನೂತನ ಡಿಜಿಟಲೀಕರಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ತಜ್ಞರ ಮಾರ್ಗದರ್ಶನ ನೀಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಇದರೊಂದಿಗೆ ವಿದ್ಯಾರ್ಥಿಗಳಿಗೆ ಆನ್ಲೈನ್ ಕಲಿಕೆಗೆ ಅನುಕೂಲವಾಗುವಂತೆ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐ ಪ್ಯಾಡ್ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.












Click it and Unblock the Notifications