‘ಕಠಿಣ ನಿರ್ಧಾರ’ದ ಮುಂದೆ ಕನಿಷ್ಠ ಯೋಚನೆಗಳಿಗೆ ಸಲಾಂ!
ವಿಶ್ವೇಶ್ವರ
ಭಟ್ [email protected] |
ಇನ್ನೊಂದು ರೀತಿಯ ಜನರಿರುತ್ತಾರೆ. ಅವರು ಪರಿಣಾಮದ ಬಗ್ಗೆ ಯೋಚನೆಯನ್ನೇ ಮಾಡುವುದಿಲ್ಲ. ತಮ್ಮ ನಿರ್ಧಾರದಿಂದ ತೊಂದರೆ ಬರುವುದು ಗ್ಯಾರಂಟಿಯೆಂಬುದು ಗೊತ್ತಿದ್ದರೆ ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ತಮಗನಿಸಿದ್ದನ್ನು ಹೇಳಲು, ಮಾಡಲು ಹಿಂದೆ ಮುಂದೆ ನೋಡುವುದಿಲ್ಲ. ಯಾರು ಏನೇ ಹೇಳಲಿ, ಹಳಿಯಲಿ ಅವರು ದರಕರಿಸುವುದಿಲ್ಲ. ಮನಸ್ಸಿನಲ್ಲಿದ್ದುದನ್ನು ಕಾಣಾಕಾಣ ಬಿಚ್ಚಿಡಲು ಅವರು ಯಾರ ಮರ್ಜಿ ಕಾಯುವುದಿಲ್ಲ.
ಇನ್ನು ಕೆಲವರಿರುತ್ತಾರೆ. ಅವಗೆ ನಿರ್ಧಾರ ತೆಗೆದುಕೊಳ್ಳುವುದೆಂದರೆ ಅದು ಬೇರೆಯವರನ್ನು ಮೆಚ್ಚಿಸಲಿಕ್ಕೆ ಮಾತ್ರ ಎಂದು ಭಾವಿಸುತ್ತಾರೆ. ಬೇರೆಯವರನ್ನು ಎದುರು ಹಾಕಿಕೊಂಡು ನಿರ್ಧಾರ ತೆಗೆದುಕೊಳ್ಳುವ ಛಾತಿ ಅವರಲ್ಲಿರುವುದಿಲ್ಲ.
ಪರಿಣಾಮದ ಬಗ್ಗೆ ಯೋಚಿಸದೇ ಕಠಿಣ ನಿರ್ಧಾರ ತೆಗೆದುಕೊಳ್ಳುವವರು ಸಿಗುವುದು ಅಪರೂಪ. ಬೇರೆಯವರನ್ನು ಸಂಪ್ರೀತಗೊಳಿಸುವುದಕ್ಕೆ ಕಾರ್ಯತತ್ಪರರಾಗುವವರು ಎಲ್ಲೆಡೆಯೂ ಸಿಗುತ್ತಾರೆ. ಮೊದಲ ವರ್ಗಕ್ಕೆ ಸೇರಿದವರು ನಾಯಕರೆಂದು ಎನಿಸಿಕೊಳ್ಳುತ್ತಾರೆ. ಎರಡನೆಯವರು ಬಾಲ ಬಡುಕರು. ‘ರಾಜ್ಯದ ಎಲ್ಲ ರೈತರಿಗೆ ನಾಳೆಯಿಂದ ಪುಕ್ಕಟೆ ವಿದ್ಯುತ್ ಕೊಡಲಾಗುವುದು’ ಎಂದು ಯಾವ ಮುಖ್ಯಮಂತ್ರಿ ಬೇಕಾದರೂ ಘೋಷಿಸಬಹುದು. ಈ ನಿರ್ಧಾರ ತೆಗೆದುಕೊಳ್ಳಲು ಯಾವ ಎದೆಗಾರಿಕೆಯೂ ಬೇಕಾಗಿಲ್ಲ. ಇನ್ನು ಮೂರು ವರ್ಷ ಸರಕಾರಿ ನೌಕರರಿಗೆ ತುಟ್ಟಿಭತ್ತೆ ನೀಡಲಾಗುವುದಿಲ್ಲ, ನಾನು ಅಧಿಕಾರದಲ್ಲಿರುವಷ್ಟು ದಿನ ರೈತರಿಗೆ ಪುಕ್ಕಟೆ ವಿದ್ಯುತ್ ನೀಡಲಾಗುವುದಿಲ್ಲ, ಸಾಲ ಮನ್ನಾ ಮಾಡುವುದಿಲ್ಲ ಎಂದು ಯಾವನಾದರೂ ಘೋಷಿಸಿದರೆ ಆ ಮುಖ್ಯಮಂತ್ರಿಯ ಎದೆಗಾರಿಕೆಯನ್ನು ಮುಟ್ಟಿ ನೋಡಬೇಕಾಗುತ್ತದೆ. ಇಂಥ ನಿರ್ಧಾರ ತೆಗೆದುಕೊಳ್ಳಲು ಗುಂಡಿಗೆ ಗಟ್ಟಿಯಾಗಿರಬೇಕು. ಇಂಥ ನಿರ್ಧಾರಕ್ಕೆ ಯಾವನು ಮುಂದಾಗುತ್ತಾನೋ ಅವನು ಕೇವಲ ಮುಖ್ಯಮಂತ್ರಿ ಎಂದು ಕರೆಸಿಕೊಳುವುದಿಲ್ಲ. ಮಹಾನ್ ನಾಯಕನೆನಿಸಿಕೊಳ್ಳುತ್ತಾನೆ. ಅದಕ್ಕಾಗಿಯೇ ಈ ದೇಶದಲ್ಲಿ ಹುಡುಕಿದರೆ ನೂರು ಮಾಜಿ ಮುಖ್ಯಮಂತ್ರಿಗಳು ಸಿಕ್ಕಾರು. ಆದರೆ ಒಬ್ಬ ಮಹಾನ್ ನಾಯಕನಿಗೆ ನಾವು ಈಗಲೂ ಹುಡುಕಬೇಕಾದ ಪರಿಸ್ಥಿತಿ ಇದೆ.
ಈ ಮಾತನ್ನು ಹೇಳುವಾಗ ಅಬ್ರಹಾಂ ಲಿಂಕನ್ ನೆನಪಾಗುತ್ತಾನೆ. ಕೇವಲ ಅಮೆರಿಕದಲ್ಲಿ ಮಾತ್ರವಲ್ಲ. ಇಡೀ ವಿಶ್ವವೇ ಮಹಾನ್ ಎಂದು ಒಪ್ಪಿಕೊಂಡ ನಾಯಕನೀತ. 1861ರಲ್ಲಿ ಲಿಂಕನ್ ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾಗಿ ನಾಲ್ಕೈದು ತಿಂಗಳಿಗೆ ಅತಿ ತೀವ್ರ ಬಿಕ್ಕಟ್ಟನ್ನು ಎದುರಿಸಿದ. ಗುಲಾಮಗಿರಿಗೆ ಸಂಬಂಧಿಸಿದಂತೆ ದಕ್ಷಿಣ ಭಾಗದ ರಾಜ್ಯಗಳು ಪ್ರತ್ಯೇಕತೆಯ ಕೂಗನ್ನೆಬ್ಬಿಸಿದವು. ಪ್ರತ್ಯೇಕ ದೇಶದ ಬೇಡಿಕೆ ದಿನದಿಂದ ದಿನಕ್ಕೆ ಕಾವು ಪಡೆಯಲಾರಂಭಿಸಿತು. ಲಿಂಕನ್ಗೆ ಈ ವಿವಾದ ಪಡೆಯಬಹುದಾದ ಸ್ವರೂಪದ ಬಗ್ಗೆ ಸ್ಪಷ್ಟ ಅರಿವಿತ್ತು. ಪ್ರತ್ಯೇಕತೆಯ ಹೋರಾಟದಲ್ಲಿರುವವರ ಜೊತೆ ಷಾಮೀಲಾದರೆ ತನ್ನ ಅಧಿಕಾರವನ್ನು ಬೆಚ್ಚಗೆ ಇಟ್ಟುಕೊಳ್ಳಬಹುದೆಂಬ ರಾಜಕೀಯ ಲೆಕ್ಕಾಚಾರವನ್ನು ಅವನಿಗೆ ಯಾರೂ ಕಲಿಸಿಕೊಡಬೇಕಾಗಿರಲಿಲ್ಲ. ಆದರೆ ಲಿಂಕನ್ ಹಾಗೆ ಮಾಡಲಿಲ್ಲ. ಪ್ರತ್ಯೇಕ ದೇಶದ ಬೇಡಿಕೆ ಮುಂದಿಟ್ಟವರ ಮೇಲೆ ಯುದ್ಧ ಘೋಷಿಸಿಬಿಟ್ಟ !
ಲಿಂಕನ್ ಇಂಥ ನಿರ್ಧಾರ ತೆಗೆದುಕೊಳ್ಳಬಹುದೆಂದು ಯಾರೂ ಊಹಿಸಿರಲಿಲ್ಲ. ಅಮೆರಿಕದ ಸೈನಿಕರು ಅಮೆರಿಕನ್ನರ ಮೇಲೇ ಯುದ್ಧಕ್ಕೆ ನಿಂತರು. ಅಲ್ಲಿನ ಸೈನಿಕರು ತಾಯ್ನಾಡಿನ ಜನರನ್ನೇ ಬಂದೂಕಿನ ಬಾಯಿಗೆ ಇಟ್ಟು ಇರಿದರು, ಸುಟ್ಟರು. ಯುದ್ಧ ನಾಲ್ಕು ವರ್ಷಗಳವರೆಗೆ ನಡೆಯಿತು. ಯುದ್ಧದ ಬಿಸಿ ಲಿಂಕನ್ನ ಕುರ್ಚಿಯಡಿಯಲ್ಲಿ ನಿಗಿನಿಗಿಯಾಗಿತ್ತು. ಯಾಕಾದರೂ ಯುದ್ಧ ಸಾರಿದೆನೋ ಎಂದು ಅವನಿಗೆ ಅನಿಸಲಾರಂಭಿಸಿತು. ಆದರೆ ಲಿಂಕನ್ ಛಲ ಹಾಗಿತ್ತು. ಹಿಂದೆ ಹೆಜ್ಜೆ ಹಾಕಲಿಲ್ಲ. ಈ ಯುದ್ಧದಲ್ಲಿ ಸುಮಾರು ಎರಡು ಲಕ್ಷ ಜನ ಹತರಾದರು. ಎರಡು ಮಹಾ ಯುದ್ಧಗಳಲ್ಲಿ ಅಮೆರಿಕದ ಇಷ್ಟೊಂದು ಜನ ಸತ್ತಿರಲಿಲ್ಲ. ಯುದ್ಧ ಮುಗಿಯುವ ಹೊತ್ತಿಗೆ ತನ್ನ ಜೀವಕ್ಕೆ ಸಂಚಕಾರವಿದೆಯೆಂಬುದು ಲಿಂಕನ್ಗೆ ಗೊತ್ತಾಗಿತ್ತು. ಗೂಢ ಚರ್ಯೆ ವಿಭಾಗದವರು ಈ ಕುರಿತು ಲಿಂಕನ್ನನ್ನು ಎಚ್ಚರಿಸಿದ್ದರು. ಯುದ್ಧ ಮುಗಿದ ಆರನೇ ದಿನಕ್ಕೆ ಲಿಂಕನ್ ಹತ್ಯೆಗೊಳಗಾದ.
ಆದರೆ ಅಮೆರಿಕ ಬಚಾವ್ ಆಯಿತು!
ಅಂದು ಲಿಂಕನ್ ಈ ಪರಿ ಕಠಿಣ ನಿರ್ಧಾರ ತೆಗೆದು ಕೊಳ್ಳದಿದ್ದರೆ ಇಂದಿದ್ದ ಅಮೆರಿಕ ಮೂರ್ನಾಲ್ಕು ದೇಶಗಳಾಗಿ ವಿಭಜನೆಯಾಗಿ ಭೂಪಟದಲ್ಲಿ ಕಂಗೊಳಿಸುತ್ತಿತ್ತು. ಲಿಂಕನ್ಗೆ ತನ್ನ ನಿರ್ಧಾರ ಜೀವಕ್ಕೆ ಮುಳುವಾಗಬಹುದೆಂಬ ಸಂಗತಿಯೂ ಗೊತ್ತಿತ್ತು. ಆದರೆ ಅವನು ತನ್ನ ನಿರ್ಧಾರದಿಂದ ಸ್ವಲ್ಪವೂ ವಿಮುಖನಾಗಲಿಲ್ಲ. ಲಿಂಕನ್ ರೀತಿ ನಮ್ಮ ರಾಜಕಾರಣಿಗಳೇನಾದರೂ ಯೋಚಿಸಿದ್ದರೆ ನಮ್ಮ ಉತ್ತರ ಕರ್ನಾಟಕ, ಕೊಡಗು ಮುಂತಾದೆಡೆಯೆದ್ದ ಪ್ರತ್ಯೇಕತೆಯ ಬೇಡಿಕೆಗೆ ಉತ್ತರ ಸಿಗುತ್ತಿತ್ತು.
ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಸಣ್ಣ ಮಾತಲ್ಲ. ಅದಕ್ಕೆ ಎದೆಯಲ್ಲಿ ಜಗಜಟ್ಟಿ ಮಲಗಿರಬೇಕಾಗುತ್ತದೆ. ಜನರ ಹೇಳುವ ಕೊಂಕು ಮಾತಿಗೆ, ಚುಚ್ಚು ನುಡಿಗೆ ಶಟಗೊಳ್ಳುವವ ಒಂದು ಸಣ್ಣ ನಿರ್ಧಾರಕ್ಕೆ ಬರಲಾರ.
ಸಿಖ್ ಉಗ್ರಗಾಮಿಗಳು ಅಮೃತ್ಸರದ ಸ್ವರ್ಣ ಮಂದಿರವನ್ನು ಸುತ್ತುವರಿದ ಸಂದರ್ಭ. ಇಂದಿರಾ ಗಾಂಧಿಯೇ ಸಾಕಿದ ಬಿಂದ್ರನ್ವಾಲೆಯ ಮಂದಿಯೇ ಅಕೆಗೆ ತಿರುಗಿ ಬಿದ್ದಿದ್ದರು. ಸ್ವರ್ಣಮಂದಿರದೊಳಗಿನ ಅಕಾಲ್ತಖ್ತ್ ಅನ್ನು ಸ್ವಾಧೀನಪಡಿಸಿಕೊಂಡಿದ್ದರು. ಯಾವುದೇ ಗುಂಡಿನ ಚಕಮಕಿಗೆ ಅವಕಾಶವಿರಲಿಲ್ಲ. ಇನ್ನು ಸ್ವಲ್ಪ ಕಾಲಾವಕಾಶವನ್ನು ನೀಡಿದ್ದರೆ ಅವರು ಇಡೀ ಸ್ವರ್ಣ ಮಂದಿರವನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳುತ್ತಿದ್ದರು. ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿದರೆ ಸಿಖ್ರ ಪವಿತ್ರ ಕ್ಷೇತ್ರ ಹತ್ಯೆಯಿಂದ ಅಪವಿತ್ರವಾಗಿ ಧಾರ್ಮಿಕ ಭಾವನೆಯ ಮೇಲೆ ಹೊಡೆತ ಬೀಳಬಹುದೆಂದು ಭಾವಿಸಿದ ಅಂದಿನ ಸೇನಾ ಮುಖ್ಯಸ್ಥ ಜನರಲ್ ವೈದ್ಯ ಇಂದಿರಾಗಾಂಧಿ ಆದೇಶಕ್ಕಾಗಿ ಪರಿಸ್ಥಿತಿಯ ಸೂಕ್ಷ್ಮವನ್ನು ವಿವರಿಸಿದ. ಸೈನಿಕರಿಗೆ ಉಗ್ರಗಾಮಿಗಳನ್ನು ಹೊಡೆದುರುಳಿಸುವುದು ದೊಡ್ಡ ಮಾತಾಗಿರಲಿಲ್ಲ. ಆದರೆ ಗುಂಡು ಹಾರಿಸುವ ತಾಣ ಅದಾಗಿರಲಿಲ್ಲ. ಅಲ್ಲದೇ ಸಿಖ್ರ ಪರಮ ಪವಿತ್ರ ಗ್ರಂಥ ಗ್ರಂಥಾ ಸಾಹಿಬ್ಅನ್ನು ಇಟ್ಟ ತಾಣ ಬೇರೆ. ಈ ಎಲ್ಲ ಸಂಗತಿಗಳನ್ನು ಅರಿತೇ ಜನರಲ್ ವೈದ್ಯ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ಇಂದಿರಾ ಗಾಂಧಿಯೆಡೆಗೆ ಮುಖ ಮಾಡಿದ್ದ.
ಇಂದಿರಾ ಜಾಗದಲ್ಲಿ ಬೇರೆ ಯರೇ ಅಗಿದ್ದರೂ ಅಂಥ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ. ಯಾವಾಗ ಜನರಲ್ ವೈದ್ಯ ಪರಿಸ್ಥಿತಿಯನ್ನು ವಿವರಿಸಿದನೋ ಕಾದು ನೋಡಲು ಸಮಯವೇ ಇರಲಿಲ್ಲ. ಇಂದಿರಾ ತಟ್ಟನೆ ಹೇಳಿದರು- ಉಗ್ರಗಾಮಿಗಳನ್ನು ಮುಗಿಸಿಬಿಡಿ. ಅಕಾಲಿ ತಖ್ತ್ನೊಳಗೆ ಸೈನಿಕರನ್ನು ನುಗ್ಗಿಸಿ ಉಗ್ರರೆಲ್ಲರನ್ನೂ ಖತಂ ಮಾಡಿಬಿಡಿ’. ಇದಾಗಿ ಅರ್ಧ ಗಂಟೆಯಾಳಗೆ ಮುನ್ನೂರಕ್ಕೂ ಹೆಚ್ಚು ಉಗ್ರರು ಹೆಣವಾಗಿ ಬಿದ್ದಿದ್ದರು. ಸ್ವರ್ಣ ಮಂದಿರದ ಪ್ರಾಂಗಣ ರಕ್ತ ರಕ್ತ ! ಇಂದಿರಾಗೆ ತಾನೆಂಥ ಕಠಿಣ ನಿರ್ಧಾರಕ್ಕೆ ಮುಂದಡಿಯಿಡುತ್ತಿದ್ದೇನೆಂಬ ಕಲ್ಪನೆಯಿತ್ತು. ಸಿಖ್ ಉಗ್ರರು ಅವರನ್ನು ಹಿಂಬಾಲಿಸುವ ಸಣ್ಣ ವಾಸನೆ ಸಹ ಹೊಡೆದಿತ್ತು. ಕೊನೆಗೆ ಅವರಿಂದಲೇ ಹತ್ಯೆಯೂ ಆಯಿತು. ಒಂದು ವೇಳೆ ಆ ದಿನ ಆ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಇಡೀ ಸ್ವರ್ಣಮಂದಿರ ಉಗ್ರರ ಅಡಗುತಾಣವಾಗುತ್ತಿತ್ತು. ಅವರು ಅಲ್ಲಿಯೇ ಟಂಬು ಹೂಡಿ ಅಟಕಾಯಿಸುತ್ತಿದ್ದರು.
ಜನತಾ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಬಾಬು ಜಗಜೀವನ್ ರಾಂ ಮಗ ಸುರೇಶ್ ರಾಂ ಲೈಂಗಿಕ ಹಗರಣವೊಂದರಲ್ಲಿ ಸಿಕ್ಕಿಬಿದ್ದಿದ್ದ. ಸುಷ್ಮಾ ಚೌಧುರಿಯೆಂಬ ಕಾಲೇಜು ಹುಡುಗಿಯಾಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಇಪ್ಪತ್ತು ಚಿತ್ರಗಳು ಇಂದಿರಾ ಗಾಂಧಿ ಒಡೆತನದಲ್ಲಿದ್ದ ಖುಷ್ವಂತ್ ಸಿಂಗ್ ಸಂಪಾದಕತ್ವದ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯನ್ನು ಸೇರಿದ್ದವು. ಈ ಸಂಗತಿ ಜಗಜೀವನ್ ರಾಂಗೆ ತಿಳಿಯಿತು. ಆತ ಪ್ರಧಾನಿ ಮೊರಾರ್ಜಿಯನ್ನು ಸಂಪರ್ಕಿಸಿ, ‘ಹೇಗಾದರೂ ಮಾಡಿ ನನ್ನ ಮಾನ ಉಳಿಸಿ. ಸಂಪಾದಕರಿಗೆ ಫೋನ್ ಮಾಡಿ ಫೋಟೋ ಪ್ರಕಟವಾಗದಂತೆ ಮಾಡಿ. ಇಲ್ಲದಿದ್ದರೆ ನಾನು ಇಂದಿರಾ ಗಾಂಧಿ ಸೇರುವ ವಾಗ್ದಾನದೊಂದಿಗೆ ಫೋಟೋಗಳು ಪ್ರಕಟವಾಗದಂತೆ ತಡೆ ಹಿಡಿಯಬೇಕಾಗುತ್ತದೆ’ ಎಂದು ಒತ್ತಡ ಹೇರಿದ. ಮೊರಾರ್ಜಿ ಒಂದೇ ಮಾತು ಹೇಳಿದ-‘ಈ ಕಾರಣಕ್ಕಾಗಿ ಸರ್ಕಾರ ಬಿದ್ದು ಹೋಗುವುದಿದ್ದರೆ ಹೋಗಲಿ’. ಆ ಎಲ್ಲ ಚಿತ್ರಗಳು ಪ್ರಕಟವಾದವು! ಮೊರಾರ್ಜಿಯೇನಾದರೂ ಅಂದು ಜಗಜೀವನ ರಾಂನ ಒತ್ತಡಕ್ಕೆ ಮಣಿದಿದ್ದರೆ, ಪ್ರಧಾನಿಯನ್ನು ಹರಾಜು ಹಾಕುತ್ತಿದೆನೆಂದು ಖುಶವಂತ್ ಸಿಂಗ್ ತಮ್ಮ ಆತ್ಮಕಥೆಯಲ್ಲಿ ಬರೆದುಕೊಂಡಿದ್ದಾರೆ. ಅಂದು ಮೊರಾರ್ಜಿಗೆ ಸರ್ಕಾರದ ಮುಖ್ಯಸ್ಥನಾಗಿ ತನ್ನ ಮಾನ, ಘನತೆ ಕಾಪಾಡಿಕೊಳ್ಳುವ ದರ್ದು ಇತ್ತು. ಸಂಪುಟ ಸಹೋದ್ಯೋಗಿಯ ಮಗನ ಮರ್ಯಾದೆ ಉಳಿಸುವುದು ಮುಖ್ಯವಾಗಿರಲಿಲ್ಲ . ಮೊರಾರ್ಜಿ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಪ್ರಧಾನಿ ಕಾರ್ಯಾಲಯದಿಂದ ಸಂಪಾದಕರಿಗೊಂದು ಫೋನ್ ಕರೆ ಹೋಗುತ್ತಿತ್ತು.
ಕೆಲವರ ನಿರ್ಧಾರವೇ ಹಾಗಿರುತ್ತದೆ. ಅಲ್ಲಿ ತರ್ಕ, ದಯೆ, ಕರುಣೆ, ಸಹಾನುಭೂತಿಗೆ ಅವಕಾಶವೇ ಇರುವುದಿಲ್ಲ. ಯಾಕಪ್ಪ ಈ ಯಪ್ಪ ಈ ರೀತಿ ಕಠಿಣ, ಕಠೋರ ಎಂದು ಎದುರಿದ್ದವನಿಗೆ ಅನಿಸುತ್ತದೆ. ಆದರೆ ಅವನ ನಿರ್ಧಾರವನ್ನು ಮಾತ್ರ ಕದಲಿಸಲಿಕ್ಕೆ ಆಗುವುದಿಲ್ಲ. ಸೇಠ್ ರತನ್ ಭಯ್ಯಾ ಸಿಂಗ್ ಎಂಬ ಲೇವಾದೇವಿಗಾರ ಮುಂಬೈಯಲ್ಲಿದ್ದ. ಆತನ ಮುಂದೆ ಏನನ್ನಾದರೂ ಗಿರವಿಗೆ ಇಡಬಹುದಾಗಿತ್ತು. ಹೆಂಡತಿಯನ್ನು ಸಹ. ಸಾವಿರಾರು ಕೋಟಿ ರೂ ಸಂಪಾದಿಸಿದ ಶ್ರೀಮಂತ. ಆತನಿಗೆ ದುಡ್ಡೆಂದರೆ ಮುಗೀತು. ಆತನ ಮನೆಯಲ್ಲಿ ನಾಲ್ಕು ನಾಯಿಗಳನ್ನು ಸಾಕಿದ್ದ. ಅವುಗಳೆಂದರೆ ಅವನಿಗೆ ಪಂಚಪ್ರಾಣ. ಬರು ಬರುತ್ತಾ ಎರಡು ನಾಯಿಗಳು ತಿಂದುಂಡು ಹಾಯಾಗಿದ್ದವೇ ಹೊರತು ಕೂಗುತ್ತಿರಲಿಲ್ಲ. ಒಳಗಡೆ ಹೋಗಿ ಬಂದೂಕು ತಂದು ಎರಡೂ ನಾಯಿಗಳನ್ನು ಢಂ ಢಂ ಎಂದು ಸುಟ್ಟುಬಿಟ್ಟ. ‘ಯೇ ಸಬ್ ಕ್ಯಾ ಸೇಠ್?’ ಎಂದು ಅವನ ಗೆಳೆಯ ಕೇಳಿದ. ಅದಕ್ಕೆ ಸೇಠ್ ಹೇಳಿದ- ಕೂಗದಿದ್ದರೆ ಈ ನಾಯಿಗಳೇಕೆ ಬೇಕು? ಪ್ರೀತಿ ಮಾಡಲು ನನಗೆ ನೂರಾರು ನಾಯಿಗಳಿವೆ. ಕೇವಲ ಕೂಗಲಿಲ್ಲವೆನ್ನುವ ಕಾರಣಕ್ಕೆ ಸಾಕಿದ ನಾಯಿಯನ್ನು ಗುಂಡಿಕ್ಕಿ ಸಾಯಿಸುವುದಕ್ಕೆ ನಿರ್ದಯಿ ಹೃದಯ ಬೇಕು. ಇದೇನು ಸಣ್ಣ ಮಾತಲ್ಲ. ನಾಯಿ ಸಾಕಿದವರಿಗೆ ಗೊತ್ತು ಅದೆಂಥ ಕಠಿಣ ನಿರ್ಧಾರ ಎಂದು.
ಹ್ಯಾರಿ ಟ್ರೂಮನ್ ಅಮೆರಿಕ ಅಧ್ಯಕ್ಷನಾಗಿದ್ದಾಗ ಜನರಲ್ ಡಗ್ಲಾಸ್ ಮ್ಯಾಕ್ ಅರ್ಥರ್ ಸೇನಾ ಮುಖ್ಯಸ್ಥನಾಗಿದ್ದ. ಜೀವನವಿಡೀ ಸೇನೆಯಲ್ಲಿದ್ದವ. ಆತ ಅದೆಷ್ಟು ಜನಪ್ರಿಯನಾಗಿದ್ದನೆಂದರೆ, ಆತ ‘ಅಧ್ಯಕ್ಷನಾಗುವುದಕ್ಕೆ ಲಾಯಕ್ಕಾದವ’ ಎಂದೇ ಪರಿಗಣಿತನಾಗಿದ್ದ. ಕೊರಿಯಾ ಯುದ್ಧದ ನಂತರ ಅವನ ಜನಪ್ರಿಯತೆ ಉತ್ತುಂಗಕ್ಕೇರಿತು. ಒಮ್ಮೆ ಮ್ಯಾಕ್ ಅರ್ಥರ್, ಟ್ರೂಮನ್ನ ನಿರ್ಧಾರಕ್ಕೆ ಬಹಿರಂಗವಾಗಿ ಅಸಮ್ಮತಿ ಸೂಚಿಸಿದ. ಟ್ರೂಮನ್ ಮ್ಯಾಕ್ ಅರ್ಥರ್ನನ್ನು ಕರೆದು ಎಚ್ಚರಿಕೆ ಕೊಟ್ಟಿದ್ದರೆ ಅಲ್ಲಿಗೆ ಕಥೆ ಮುಗಿಯುತ್ತಿತ್ತು. ಆದರೆ ಟ್ರೂಮನ್ ಮ್ಯಾಕ್ ಅರ್ಥರ್ನನ್ನು ಸೇವೆಯಿಂದ ವಜಾಗೊಳಿಸಿಬಿಟ್ಟ ! ದೇಶಾದ್ಯಂತ ಕೋಲಾಹಲವೆದ್ದಿತು. ಕಾಂಗ್ರೆಸ್ ಸದಸ್ಯರು ಟ್ರೂಮನ್ ವಾಗ್ದಂಡನೆಗೆ ಒತ್ತಾಯಿಸಿದರು. ಟ್ರೂಮನ್ ಕ್ಯಾರೇ ಎನ್ನಲಿಲ್ಲ. ಅಮೆರಿಕದ ಅಧ್ಯಕ್ಷನೊಬ್ಬ ತಳೆದ ಅತಿ ಧೀರೋದಾತ್ತ , ಕಠಿಣ ನಿಲುವು ಎಂದು ಈಗಲೂ ಟ್ರೂಮನ್ನ ಈ ಕ್ರಮವನ್ನು ಪ್ರಶಂಸಿಸಲಾಗುತ್ತದೆ. ಆ ಕಾರಣಕ್ಕೇ ಆತ ‘ಮಹಾನ್ ಅಧ್ಯಕ್ಷ’ ನಾಗಿದ್ದಾನೆ.
ಕೆಲವರು ತಮ್ಮ ನೌಕರಿ, ಸಂಪತ್ತು, ಸುಖ, ನೆಮ್ಮದಿ, ಜೀವನ ಎಲ್ಲವನ್ನೂ ಪಕ್ಕಕ್ಕಿಟ್ಟು ಕಠಿಣ ನಿರ್ಧಾರಕ್ಕೆ ನಿಲ್ಲುತ್ತಾರೆ. ತಾವು ನಂಬಿದ ನಂಬಿಕೆಗಾಗಿ ಸರಕಾರದ ವಿರುದ್ಧವೇ ಮೇಲಕ್ಕೇರಿಸಿರುತ್ತಾರೆ. ಎದುರು ಹಾಕಿಕೊಂಡವರ ಎದುರು ಕೈ ಜೋಡಿಸಿದರೆ ಎಲ್ಲ ಸಲೀಸು. ಊಹುಂ.. ಅದು ಅವರಿಗೆ ಬೇಡ.
ಇಂಥವರನ್ನು ಜನ ಸ್ಮರಿಸುತ್ತಾರೆ. ಕಾರಣ ಇಂಥವರು ನಾಯಕರಾಗುತ್ತಾರೆ. ಉಳಿದವರು ಹಿಂಬಾಲಕರಾಗುತ್ತಾರೆ ಅಷ್ಟೆ.
‘ಇಲ್ಲ’ವೆಂಬುದನ್ನು ‘ಇಲ್ಲ’ ಎಂದು ಹೇಳಲು ಸಹ ಧೈರ್ಯ ಬೇಕು ಕಣ್ರೀ.
(ಸ್ನೇಹ ಸೇತು: ವಿಜಯ ಕರ್ನಾಟಕ)