ಭಾರತದ ಒಗ್ಗಟ್ಟಿಗೆ ಒಂದೇ ಭಾಷೆ ಇರಬೇಕೆ?
ಸಂವಿಧಾನದ 343ನೇ ವಿಧಿಯಿಂದ 351ನೇ ವಿಧಿಯವರೆಗೆ ಹಿಂದೀಯನ್ನು ಆಡಳಿತ ಭಾಷೆಯಾಗಿಸಿದ ಬೆನ್ನಲ್ಲೇ ಆಡಳಿತ ಭಾಷಾ ಇಲಾಖೆ, ಆಡಳಿತ ಭಾಷಾ ನಿಯಮ, ಆಡಳಿತ ಭಾಷಾ ಕಾಯ್ದೆಗಳು ಜನ್ಮತಳೆದವು. ಇದರ ಅಂಗವಾಗಿ ಹಿಂದೀಯನ್ನು ಭಾರತದ ಎಲ್ಲೆಡೆ ಹರಡಲು ಒತ್ತಾಯ, ಆಮಿಷ ಮತ್ತು ವಿಶ್ವಾಸಗಳನ್ನು ಬಳಸುವುದು ಭಾರತ ಸರ್ಕಾರದ ನೀತಿಯೆಂದು ಘೋಷಿಸಲಾಯಿತು. ದೇಶದ ಉದ್ದಗಲಕ್ಕೆ ಹಿಂದೀ ಪ್ರಚಾರಕ್ಕೆ ಕೇಂದ್ರಸರ್ಕಾರ ಮುಂದಾಯಿತು.
ಹಿಂದೀಯನ್ನು ಒಪ್ಪಿಸಲು ಹಿಂದೀ ಭಾರತದ ಸಂಪರ್ಕ ಭಾಷೆ ಎನ್ನಲಾಯಿತು. ಬಹುಮುಖ್ಯವಾಗಿ ಹಿಂದೀಯನ್ನು ಆಡಳಿತ ಭಾಷೆಯಾಗಿಸಲು ಕೊಡಲಾದ ಕಾರಣ ಅದು ಭಾರತೀಯ ಭಾಷೆಯೆನ್ನುವುದು ಮತ್ತು ಭಾರತದಲ್ಲಿ ಹೆಚ್ಚು ಜನರಿಗೆ ಅರ್ಥವಾಗುತ್ತದೆ ಎನ್ನುವುದು. ಹಿಂದೀಯನ್ನು ಒಪ್ಪಿಸಲು ಬಳಸಿದ ಕಾರಣಗಳು ಮುಂದಾಲೋಚನೆ, ಪರಿಣಾಮಗಳ ಬಗ್ಗೆ ಆಲೋಚನೆ ಮತ್ತು ವಾಸ್ತವಗಳ ಅರಿವಿಗಿಂತಾ ಹೆಚ್ಚಾಗಿ ಭಾವುಕತೆಯನ್ನು ಆಧರಿಸಿತ್ತು ಎಂದರೆ ತಪ್ಪಾಗಲಾರದು.
ಭಾರತ ಪರಾಧೀನವಾಗಲು ಒಗ್ಗಟ್ಟಿಲ್ಲದ್ದು ಕಾರಣ. ಒಗ್ಗಟ್ಟಿಗೆ ಒಂದೇ ಭಾಷೆ ಇರುವುದು ಅತ್ಯಗತ್ಯ, ರಾಜ್ಯರಾಜ್ಯಗಳ ನಡುವಿನ ಸಂಪರ್ಕಕ್ಕೆ, ಕೇಂದ್ರ-ರಾಜ್ಯಗಳ ಸಂಪರ್ಕಕ್ಕೆ ಒಂದು ಭಾರತೀಯ ಭಾಷೆಯೇ ಇರಬೇಕು, ಇದಕ್ಕೆ ಸೂಕ್ತವಾದ ಭಾಷೆ ಹಿಂದೀ, ಸ್ವಾತಂತ್ರ ಹೋರಾಟದಲ್ಲಿ ಜನರ ಭಾಷೆ ಹಿಂದೀಯಾಗಿತ್ತು, ಹಾಗಾಗಿ ಹಿಂದೀಯೆಂದರೆ ದೇಶಪ್ರೇಮದ ಸಂಕೇತ, ಹಿಂದೀಯೆಂದರೆ ಭಾರತದ ಒಗ್ಗಟ್ಟಿನ ಸಾಧನ, ಪ್ರಪಂಚಕ್ಕೆ ತೋರಿಸಿಕೊಳ್ಳಲು ದೇಶಕ್ಕೆ ಒಂದು ಭಾಷೆ ಇರಬೇಕು ಎಂಬ ಅನಿಸಿಕೆಗಳು ಇಂತಹ ನಿಲುವಿಗೆ ಕಾರಣವಾಯಿತು.
ಈ ಅನಿಸಿಕೆಗಳು ಕಾಂಗ್ರೆಸ್ಸಿನ ಮಹಾತ್ಮಾಗಾಂಧಿಯವರಂತಹ ರಾಷ್ಟ್ರೀಯ ನಾಯಕರುಗಳಿಗೇ ಇದ್ದುದ್ದರಿಂದ ಅವರ ಅನುಯಾಯಿಗಳೆಲ್ಲಾ ಕಣ್ಣುಮುಚ್ಚಿ ತಮ್ಮ ತಮ್ಮ ರಾಜ್ಯಗಳಲ್ಲಿ ಹಿಂದೀ ಜಾರಿಗೆ ಪಣತೊಟ್ಟರು. ಇಂದಿಗೂ ಭಾರತದ ರಾಷ್ಟ್ರೀಯ ಪಕ್ಷಗಳ ಆಶಯವು 'ಒಂದು ದೇಶ, ಒಂದು ಭಾಷೆ ಎನ್ನುವಂತೆಯೇ ಇದೆಯೆಂದರೆ ಅಚ್ಚರಿಯಾಗುತ್ತದೆ.