ಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು!

* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು
ಭಾರತದ ರಾಜಕಾರಣಿಗಳು ವಿಶ್ವದಲ್ಲೇ ಅತ್ಯಂತ ಶ್ರೇಷ್ಠರು. ರೂಢಿಯೊಳಗುತ್ತಮರು. 'ದಾಸನಂತಾಗುವೆನು ಧರೆಯೊಳಗೆ ನಾನು', ಎಂಬ ದಾಸವಾಣಿಯಂತೆ ನಡೆಯುವವರು ಇವರು. ಚುನಾವಣೆ ಎದುರಿರುವಾಗ ಇವರು ನಮ್ಮ ಮನೆಬಾಗಿಲಿಗೆ ಬಂದು ನಮ್ಮ ದಾಸಾನುದಾಸರಂತೆ ಕೈಮುಗಿದು, ಹಲ್ಲು ಕಿರಿದು, ಎಲ್ಲ ಸುಖ-ಕಷ್ಟ ವಿಚಾರಿಸಿ, 'ಇಲ್ಲಿರುವುದು ಸುಮ್ಮನೆ, ಅಲ್ಲಿ ಡೆಲ್ಲಿಯಲ್ಲಿರುವುದು ಪಾರ್ಲಿಮೆಂಟ್ ಎಂಬ ನಮ್ಮನೆ', ಎಂದು ನುಡಿದು, ಪೆಪ್ಪರಮಿಂಟ್ ತಿಂದವರಂತೆ ಜೊಲ್ಲು ಸುರಿಸುತ್ತ ಮುಂದಿನ ಮನೆಬಾಗಿಲಿಗೆ ಬಿಜಯಂಗೈಯುವವರು.
'ದಾಸನ ಮಾಡಿಕೊ ಎನ್ನ, ಸ್ವಾಮಿ, ಸಾಸಿರ ನಾಮದ ವೋಟರ್ ಪ್ರಭುವೆ', ಎನ್ನುವ ಇವರ ಆ ವಿನಯ.. ಆಹಾ! ಮತದಾರನ ಮನೆಯೇನಾದರೂ ಒಳಗಿನಿಂದ ಬೋಲ್ಟಿಸಲ್ಪಟ್ಟಿದ್ದರೆ ಆಗ ಈ ಜನಸೇವಕರು, 'ಪೂಜಿಸಲೆಂದೇ ಹೂನಗೆ ತಂದೆ, ದರುಶನ ಕೋರಿ ನಾ ನಿಂದೆ, ತೆರೆಯೋ ಬಾಗಿಲನು', ಎಂದು ಗಾರ್ದಭರಾಗದಲ್ಲಿ ಹಾಡಿ ಬಾಗಿಲು ತೆರೆಸಿ, ಪಾಂಪ್ಲೆಟ್ ನೀಡಿ, "ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ನಾಣ್ಣುಡಿಯಂತೆ ನಾವಿವತ್ತು ನಿಮ್ಮ ಕಾಲು ಹಿಡೀಲಿಕ್ಕೆ ಬಂದಿದ್ದೀವಿ, ನಮಗೇ ವೋಟ್ ಹಾಕಿ", ಎಂದು ಮುವ್ವತ್ತೆರಡೂ ಹಲ್ಲುಗಳನ್ನು (ಸದಾನಂದಗೌಡರಂತೆ) ಪ್ರದರ್ಶಿಸುತ್ತಾರೆ.
ಇವರ ಈ ವಿನಯ ಅಂಥಿಂಥದೇ? ಚಾಲಾ ಗೊಪ್ಪದಿ! 'ಭಕುತರ ಸೇವೆಯ ಕೊಡು ಕಂಡ್ಯ, ನಿನ್ನ ಭಕುತರ ಸಂಗವ ಕೊಡು ಕಂಡ್ಯ', ಎಂದು ಈ ದೈವಭಕ್ತಶಿಖಾಮಣಿಗಳು ಚುನಾವಣೆಯ ಸಂದರ್ಭದಲ್ಲಿ ಕಂಡಕಂಡ ದೇವರುದಿಂಡಿರಿಗೆಲ್ಲ ಮೊರೆಹೊಗುವ ಪರಿಯನ್ನೆಂತು ಬಣ್ಣಿಸಲಿ! 'ಕಂಡುಕಂಡು ನೀ ಎನ್ನ ಕೈಬಿಡುವರೇ ಪ್ರಭುವೆ, ಉಂಡು ಮಲಗದೆ ಅಂದು ಮತ ನೀಡು ಒಡೆಯಾ', ಎಂದು ಮತದಾರನನ್ನು ಇವರು ಬೇಡಿಕೊಳ್ಳುವ ಪರಿಯೂ ಅನನ್ಯ!
ನಮ್ಮೀ ರಾಜಕಾರಣಿಗಳು ಅತ್ಯಂತ ಪ್ರಾಮಾಣಿಕರು. ಸತ್ಯಸಂಧರು. ಸಿದ್ಧಾಂತಬದ್ಧರು. ನಿಷ್ಪೃಹರು. ಅತಿ ವಿಧೇಯರು. ಮತ್ತು ಜಾತ್ಯತೀತರು. ಇವರ ಚುನಾವಣಾ ಭಾಷಣಗಳೇ ನನ್ನ ಈ ಮಾತಿಗೆ ಸಾಕ್ಷಿ. ವಿರೋಧಿಗಳ ಟೀಕೆಯೇ ತುಂಬಿರುವ ತಮ್ಮ ಭಾಷಣದಲ್ಲಿ ಇವರು, ಒಂದುವೇಳೆ ತಾವು ಆರಿಸಿಬಂದರೆ ತಮ್ಮ ಕ್ಷೇತ್ರಕ್ಕೆ ಏನೇನು ಕೆಲಸಕಾರ್ಯಗಳನ್ನು ಮಾಡಲಿದ್ದೇವೆಂಬುದನ್ನು ಎಂದಿಗೂ ತಿಳಿಸುವುದಿಲ್ಲ. ಏಕೆಂದರೆ, ಆರಿಸಿಬಂದಮೇಲೆ ಇವರು ಕ್ಷೇತ್ರಕ್ಕಾಗಿ ಯಾವ ಕೆಲಸವನ್ನೂ ಮಾಡುವವರಲ್ಲ. ಅಂದಮೇಲೆ ಇವರದು ಅತ್ಯಂತ ಪ್ರಾಮಾಣಿಕ ಭಾಷಣವಲ್ಲವೆ? ಪ್ರತಿಯೊಂದು ಪಕ್ಷದವರೂ ತಮ್ಮ ವಿರೋಧಿಗಳ ಭ್ರಷ್ಟಾಚಾರವನ್ನೂ ಅನಾಚಾರವನ್ನೂ ಚುನಾವಣಾ ಭಾಷಣದಲ್ಲಿ ಬಣ್ಣಿಸುತ್ತಾರಷ್ಟೆ. ನಾವು ಎಲ್ಲರ ಭಾಷಣಗಳನ್ನೂ ಹಂಡ್ರೆಡ್ ಪರ್ಸೆಂಟ್ ನಂಬುತ್ತೇವೆ. ಎಲ್ಲರೂ ಸತ್ಯವನ್ನೇ ಹೇಳುತ್ತಿದ್ದಾರೆಂಬುದು ಇವರ ಹಾವ-ಭಾವ, ಉದ್ರೇಕ-ಉನ್ಮಾದ, ಕೋಪ-ತಾಪ ಮತ್ತು ಇವರು (ಭಾಷಣಗಳಲ್ಲಿ ಹಾಗೂ ಪತ್ರಿಕಾಗೋಷ್ಠಿಗಳಲ್ಲಿ) ಪ್ರದರ್ಶಿಸುವ ಕಾಗದ-ಪತ್ರ-ಪತ್ರಿಕೆಗಳು ಇವುಗಳಿಂದ ಗೊತ್ತಾಗುತ್ತದೆ.
ನಮ್ಮೀ ರಾಜಕಾರಣಿಗಳು ಸಿದ್ಧಾಂತಬದ್ಧರು. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಿಟ್ಟಿಸುವುದು, ಯೇನಕೇನ ಪ್ರಕಾರೇಣ ಗೆಲ್ಲುವುದು ಮತ್ತು ಗೆದ್ದಮೇಲೆ ಮಂತ್ರಿಗಿರಿ/ನಿಗಮ/ಮಂಡಳಿ ಯಾವುದಾದರೊಂದು ಕುರ್ಚಿಯಲ್ಲಿ ರಾರಾಜಿಸುವುದು ಈ ತ್ರಿವಿಧ (ಸ್ವಯಂ)ದಾಸೋಹವೇ ತಮ್ಮ ರಾಜಕೀಯ ಜೀವನದ ಪರಮಗುರಿಯೆಂಬುದು ಇವರ ಸಿದ್ಧಾಂತ. ಈ ಸಿದ್ಧಾಂತಪಾಲನೆಗಾಗಿಯೇ ಇವರು ದಿನಕ್ಕೆರಡುಬಾರಿ ಪಕ್ಷಾಂತರ ಮಾಡುವುದು. ಸಿದ್ಧಾಂತಪಾಲನೆಗಾಗಿ ಎಂಥ ಕಡುಕಷ್ಟ, ಪಾಪ!
ಇನ್ನು, ಇವರ ನಿಷ್ಪೃಹ ಮನೋಭಾವನ್ನು ನಾನೆಂತು ಬಣ್ಣಿಸಲಿ? ಅದೆಷ್ಟು ನಿಷ್ಪೃಹರಾಗಿ, ಅರ್ಥಾತ್ ನಿಸ್ವಾರ್ಥದಿಂದ ಇವರು ಜನಸೇವೆ ಮಾಡುತ್ತಾರೆಂದರೆ, ಯಾವ ವಿಶೇಷ ಆಸ್ತಿಪಾಸ್ತಿಗಳನ್ನೂ ಇವರು ಗಳಿಸಿರುವುದಿಲ್ಲ. ಇವರ ಪೈಕಿ ಎಷ್ಟೋ ಮಂದಿಗೆ ಮನೆಯೂ ಇರುವುದಿಲ್ಲ, ವಾಹನವೂ ಇರುವುದಿಲ್ಲ! ಏನೋ, ಇವರ ಹೆಂಡತಿ ಟೈಲರಿಂಗ್ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ. ಗಂಡಂದಿರನ್ನು ಈ ಹೆಂಡತಿಯರೇ ಸಾಕುತ್ತಾರೆ.
ಇನ್ನು, ಈ ಜನಸೇವಕರ ವಿಧೇಯತೆಯೆಂದರೆ ಅಂಥಿಂಥದೇ? ಹೈಕಮಾಂಡು ತನ್ನ ಕಾಲಲ್ಲಿ ತೋರಿಸಿದ್ದನ್ನು ಇವರು 'ಕೈ'ಯಲ್ಲಿ ಎತ್ತಿಕೊಂಡು ತಲೆಯಮೇಲೆ ಇಟ್ಟುಕೊಳ್ಳುತ್ತಾರೆ. ಇಂಥ ವಿಧೇಯತೆಯು ವಿಶ್ವದ ಇನ್ನಾವ ರಾಷ್ಟ್ರದ ರಾಜಕಾರಣಿಗಳಲ್ಲೂ ಇಲ್ಲ ಬಿಡಿ. 76ರ ದೇವೇಗೌಡರಾಗಿರಲಿ, 82ರ ಅಡ್ವಾಣಿಯಾಗಿರಲಿ, 83ರ ಬಾಳ್ ಠಾಕ್ರೆ ಆಗಿರಲಿ, 85ರ ಕರುಣಾನಿಧಿ ಆಗಿರಲಿ, 95ರ ಜ್ಯೋತಿ ಬಸು ಆಗಿರಲಿ, ಸೋನಿಯಾ, ರಾಹುಲ್,....ಕೊನೆಗೆ ಎಂಟು ವರ್ಷದ ರೈಹನ್ ವಡ್ರಾ ಅಥವಾ ಆರು ವರ್ಷದ ಮಿರಯಾ ವಡ್ರಾನೇ ಆಗಿರಲಿ, ಹೈಕಮಾಂಡ್ ಎಂದರೆ ಹೈಯೇ. ಪಕ್ಷದ ಎಲ್ಲರೂ ಆ ಹೈಕಮಾಂಡ್ನಡಿ ಲೋ! ವೆರಿ ಲೋ!! ವೆರಿ ವೆರಿ ಲೋ!!! ಎಂಥ ವಿಧೇಯತೆ!
ನಮ್ಮೀ ರಾಜಕಾರಣಿಗಳ ಜಾತ್ಯತೀತ ಮನೋಭಾವವಂತೂ ಇಡೀ ವಿಶ್ವಕ್ಕೇ ಮಾದರಿ. ಹಿಂದು, ಮುಸ್ಲಿಂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಎಂಬ ಭೇದಭಾವವಿಲ್ಲದೆ ಚುನಾವಣೆಯ ಸಂದರ್ಭದಲ್ಲಿ ಎಲ್ಲ ಮತೀಯರ ದೇಗುಲ-ಪ್ರಾರ್ಥನಾಸ್ಥಳಗಳಿಗೂ (ಆಯಾ ಉಡುಪುಗಳಲ್ಲಿ) ಭೇಟಿಯಿತ್ತು, ಕೈಮುಗಿದು-ಅಡ್ಡಬಿದ್ದು ಕೃತಾರ್ಥರಾಗುವ ಇವರ ಮತಾತೀತ ಭಕ್ತಿಭಾವವಾಗಲೀ, ಎಲ್ಲ ಜಾತಿ-ಮತಗಳವರ ಮನೆಬಾಗಿಲಿಗೂ ಹೋಗಿ ಹಲ್ಕಿರಿದು ಮತ ಅಂಗಲಾಚುವ ಇವರ ಜಾತ್ಯತೀತ ಮನೋಭಾವವಾಗಲೀ ವರ್ಣನಾತೀತ.
'ಹನುಮನ ಮತವೇ ಹರಿಮತವೋ. ಹರಿಯ ಮತವೆ ಹನುಮನ ಮತವೊ', ಎಂಬ ದಾಸವಾಣಿಯೊಲ್ ಇವರು, 'ಪ್ರಜೆಗಳ ಮತವೇ ನಮ್ ಹಿತವೋ. ನಮ್ಮ ಮತದಾಟ ಪ್ಲಾನ್ಯುತವೊ', ಎಂದು ಮಸಾಲ್ದೋಸವಾಣಿಯಂ ಹರಿಬಿಡುವರು. ಚುನಾವಣೆಯಾದಮೇಲೆ, 'ನೀನ್ಯಾಕೋ ನಿನ್ನ ಹಂಗ್ಯಾಕೋ', ಅನ್ನುವ (ಪುರಂದರದಾಸಸಮಾನ) ಧುರಂಧರರಿವರು! ಇವರಲ್ಲಿ ಕೆಲವರು 'ಧರ್ಮವೆ ಜಯವೆಂಬ ದಿವ್ಯಮಂತ್ರ'ವನ್ನು ಜಪಿಸಿದರೆ, ಉಳಿದವರು 'ಜಯವೆ ಧರ್ಮವೆಂಬ ದಿವ್ಯಮಂತ್ರ'ವನ್ನು ಜಪಿಸುವವರು.
'ಮಣ್ಣಿಂದ ಕಾಯ ಮಣ್ಣಿಂದ', ಎನ್ನುತ್ತ, ಮಣ್ಣನ್ನು ಗಳಿಸಲೆಂದೇ ಎಲೆಕ್ಷನ್ನಿಗೆ ನಿಲ್ಲುವ 'ಮಣ್ಣಿನ ಮಕ್ಕಳು' ಇವರು. 'ನೆಚ್ಚದಿರೀ ಭಾಗ್ಯ ಯಾರಿಗೂ ಸ್ಥಿರವಲ್ಲ', ಎಂಬ ದಾಸವಾಣಿಯ ಮರ್ಮವನ್ನರಿತೇ ಇವರು ಆದಷ್ಟು ಬೇಗನೆ 'ಅಷ್ಟೈಶ್ವರ್ಯಭಾಗ್ಯ'ಶಾಲಿಗಳಾಗಲು ಹೊರಟವರು. 'ಹರಿಕೊಟ್ಟ ಕಾಲಕ್ಕೆ ಉಣಲಿಲ್ಲ', ಎಂಬಂತಾಗಬಾರದೆಂದು ಇವರು ನರ-ಹರಿ ಕೊಡುವುದನ್ನೆಲ್ಲ ಉಣ್ಣುತ್ತ ಕೂರುವವರು. 'ಊಟಕ್ಕೆ ಬಂದೆವು ನಾವು, ನಿಮ್ಮ ಆಟಪಾಠವ ಬಿಟ್ಟು ನಮಗೆ ನೀಡ್ರಯ್ಯಾ', ಎಂದು ಕೇಳಿ ನೀಡಿಸಿಕೊಂಡು ಉಣ್ಣುವವರು.
ಇಂಥ ಪ್ರಾಮಾಣಿಕ, ಸತ್ಯಸಂಧ, ಸಿದ್ಧಾಂತಬದ್ಧ, ನಿಷ್ಪೃಹ, ದೈವಭಕ್ತ, ಅತಿ ವಿಧೇಯ ಮತ್ತು ಜಾತ್ಯತೀತ ರಾಜಕಾರಣಿಗಳನ್ನು ಹೊಂದಿರುವ ಭಾರತೀಯರಾದ ನಾವೇ ಧನ್ಯರು. ಇಂಥ ಶ್ರೇಷ್ಠರೂ ರೂಢಿಯೊಳಗುತ್ತಮರೂ ಆದ ರಾಜಕಾರಣಿಗಳ ಬಗ್ಗೆ, ಇವರನ್ನು ಆರಿಸಿ ಕಳಿಸುವ ಮತದಾರ ಬಾಂಧವರ ಬಗ್ಗೆ ಮತ್ತು ಇವರ ಅದ್ಭುತ ಆಳ್ವಿಕೆಗೆ ಒಳಪಟ್ಟಿರುವ ಈ ನಾಡಿನ ಬಗ್ಗೆ ಬರೆಯಲು ಇನ್ನು ನನ್ನಲ್ಲಿ ಪದಗಳೇ ಇಲ್ಲ! ಲೇಖನಸನ್ಯಾಸ ಸ್ವೀಕರಿಸಿ ಕಾಡಿಗೆ ಹೋಗಿ ಕಂದಮೂಲ ತಿಂದುಕೊಂಡಿರುವುದೇ ನನಗಿನ್ನು ಸೂಕ್ತವೆನ್ನಿಸುತ್ತದೆ. ಅಂತೆಯೇ ಮಾಡುತ್ತೇನೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications