ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ!
ನನ್ನ ಮನಕೊಳದ ಹಂಸ ವಸಂತ,
ಬಾಳ ಗೆಳೆಯನೇ ಪೂರ್ಣ ಚಂದ್ರನೆ, ತಾಳಲಾರೆನೋ ಈ ವಿರಹ ವೇದನೆ ಎಂದು ಮನಸ್ಸು ಆಲಾಪಿಸುತ್ತಿರುವಾಗ ನಿನ್ನ ಕಾಗದ ಕೈಸೇರಿತು. ಅದರಲ್ಲಿನ ಒಕ್ಕಣೆ ತಿಳಿದಿದ್ದರೂ ಓದುವಾಗ ಇದೇ ಮೊದಲು ತಿಳಿಯುತ್ತಿರುವಂತೆ ಸಂಭ್ರಮಿಸುತ್ತ ಓದಿದೆ. ನೀಲಳಲ್ಲೂ ಇದೇ ಸಂಭ್ರಮ. ಒಂದೇ ಚಪ್ಪರದಡಿ ಎರಡು ಜೋಡಿಯ ಮದುವೆ! ಅವಳೀಗ ಅವಳದೇ ಕನಸಿನ ಲೋಕದಲ್ಲಿ.
ವಸಂತ ಮನಸಲ್ಲಿ ಏನೋ ಹಗುರ ಭಾವ. ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ. ಮುಡಿದ ಮಲ್ಲಿಗೆ ಘಮಲು ಮೊದಲ ಸಲ ಗಾಳಿಗೆ ಮುನಿದು ನನ್ನನ್ನೆ ಅಪ್ಪಿ ಹಿಡಿದಂತೆ. ಆ ಅಪ್ಪುಗೆ ನಿನ್ನದೇ ಆಗಿರುವಂತೆ. ವಸಂತ ಕರೆಯುತಿದೆ ಕನಸು, ಕುಣಿಯುತಿದೆ ಮನಸು. ಒಂದರ ಹಿಂದೆ ಸಾಲು ಗಟ್ಟಿ ಬರುತ್ತಿರುವ ಹಾಡು. ಯಾವುದನ್ನೂ ಪೂರ್ಣವಾಗಿ ಹಾಡಿಕೊಳ್ಳಲಾಗದ ಸ್ಥಿತಿ. ಪಲ್ಲವಿ ಬಂದರೆ ಚರಣದವರೆಗೆ ಕಾಯಲಾಗದು. ಚರಣ ನೆನಪಾದರೆ ಪಲ್ಲವಿಯನ್ನು ನೆನಪಿಸಿಕೊಳ್ಳಲು ಸಮಯವಿರದು. ಏಕೆ ಹೀಗೆಂಬ ಪ್ರಶ್ನೆಯೂ ಇಣುಕದು. ಸಂಭ್ರಮವೆಂದರೆ ಹೀಗೆಯೇನೊ? ನನಗೆ ಇಂಥ ಸಂಭ್ರಮ ತೀರಾ ಹೊಸತು ವಸಂತ.
ಹಾಲಧಾರೆಯಲ್ಲಿ ಮಿಂದು ಬಂದೆಯೋ, ಬಾಯಾರಿದೆಯೆ ಎಂದು ನೀನು ಬೊಗಸೆಯೊಡ್ಡಿ ಬೆಳದಿಂಗಳನು ತುಂಬಿ ನನಗೆ ಕುಡಿಸಿದೆ. ಜನ್ಮ ಜನ್ಮಗಳಿಂದ ಬಾಯಾರಿ ಇದ್ದವಳಂತೆ ನಾನು ಗಟಗಟ ಕುಡಿದೆ. ನಾನು ದಣಿದಿರುವೆ ಶಕುಂತಲೆ ನನಗೆ ಕುಡಿಸುವೆಯಾ ಎಂದು ನೀನು ಕೇಳಿದ್ದೇ ತಡ ನನ್ನ ಬೊಗಸೆಯಲ್ಲಿ ಬೆಳದಿಂಗಳ ತುಂಬಿ ನಿನಗೆ ಕುಡಿಸಿದೆ. ನೀನು ಕುಡಿಯುತ್ತಲೇ ಇದ್ದೆ. ನನ್ನ ಬೊಗಸೆ ಬರಿದಾಗದು, ನಿನ್ನ ದಾಹ ತೀರದು. ಎಷ್ಟು ಹೊತ್ತೋ ಹೀಗೆ.....

ನಿನಗಾಗಿ ತಂದಿರುವೆ ಬಿಳಿಗುದುರೆ ಏರು. ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ ಎಂದು ಮುಂದೆ ಕುರಿಸಿಕೊಂಡು ನೀನು ನೆಗೆಸಿದೆ ಬಾನಿಗೆ. ಚಂದಿರನ ತಲುಪುವ ಮೊದಲು ಚುಕ್ಕಿಗಳ ತೋಟ ಹಾದು ಹೋಗುವಾಗ ಏನು ಆನಂದ, ಏನು ಸೋಜಿಗ! ಯಾರೋ ಶ್ವೇತಕನ್ಯೆಯರು ಎದುರು ಬಂದರು. ಅವರಲ್ಲೊಬ್ಬಳು ನಿನ್ನನ್ನು ತಡೆದು, ರಾಜಕುವರನೋ ನೀನು, ಇವಳು ಒಲಿದ ರಾಜಕನ್ಯೆಯೋ? ವಿಹಾರಕ್ಕೆ ಬಂದಿರೋ ಎಂದು ಕೇಳಿದರೆ, ಇನ್ನೊಬ್ಬಳು, ರಾಜಕುಮಾರನ ವೇಶದ ಮಾಂತ್ರಿಕನೋ, ರಾಜಕುಮಾರಿಯ ಅಪಹರಿಸಿ ಬಚ್ಚಿಡಲು ಹೊರಟವನೋ ಎಂದು ಕೇಳಿದಳು. ನೀನು ಮುಗುಳು ನಗೆ ಬೀರಿದೆ. ಅವರಲ್ಲೊಬ್ಬಳು, ಹಾಯಿ ಹಲಾ, ಚೆಲುವ ಚತುರ ಮಾರರೂಪಿ ನರನೇ ಇವನು ಎಂದಳು. ಈ ಮಾತಿಗೆ ನಾನು ಹೆಮ್ಮೆಯಲಿ ಉಬ್ಬಿಹೋದೆ. ಒಬ್ಬಳು ತನ್ನ ದಿವ್ಯ ದೃಷ್ಟಿಯಿಂದ ತಿಳಿದು, ಹಲಾ ಇವರು ಚಂದಿರನ ಅತಿಥಿಗಳೇ ಎಂದಳು. ಅವರು ಹಲಾ ಹಲಾ ಎಂದು ಕಿಲಕಿಲಿಸುತ್ತ ಮಾಯವಾದರು.
ವಸಂತ ನೀನು ಕುದುರೆ ಸವಾರಿಯ ದಿಕ್ಕು ಬದಲಿಸಿದೆ. ಸುಣ್ಣ ಕಲೆಸಿದ ನೀರು ಚೆಲ್ಲಿದಂತೆ ಇರುವ ಈ ಲೋಕವೇನು ಚೆನ್ನವಿದೆ. ಕೆಳಗೆ ನೋಡೆಂದೆ. ಮೊದಲಿಗೆ ಕಂಡಿದ್ದು ನಮ್ಮೂರು. ನೀಲ ಜಗುಲಿಯಲಿ ಕುಳಿತು ಕನಸು ಕಾಣುತ್ತಿದ್ದಳು. ಅಪ್ಪನ ಗೊರಕೆ ಕೇಳಿಸುತ್ತಿತ್ತು. ಅಮ್ಮ ಮಗ್ಗುಲಾಗಿ ಮಲಗಿ ಎನ್ನುತ್ತಿದ್ದಳು. ನಿಮ್ಮೂರು ಕಂಡಿತು. ಜೋಳದ ತೋಟ, ತಾವರೆ ಕೊಳ. ಕೆಂಚಪ್ಪ ಅವನ ಮನೆಯಂಗಳದಲ್ಲಿ ಮಲಗಿ ಕಚ್ಚಿದ ಸೊಳ್ಳೆಗೆ ಟಪ್ಪೆಂದು ಬಡಿಯುತಿದ್ದ. ನಾನು ತಾವರೆ ಕೊಳದ ಬಳಿಗೆ ಹೋಗೋಣ ಎಂದೆ. ನೀನು ಕಾಲಿನ ಹಿಮ್ಮಡಿಯಿಂದ ಕುದುರೆಯ ಪಕ್ಕೆ ಹೆಟ್ಟಿದೆ. ಅದು ನೇರ ಕೊಳದ ದಂಡೆಗೆ ಬಂದು ಮಾಯವಾಯಿತು. ನಾವು ಕೊಳದಲ್ಲಿ ಹೊರಳಾಡಿದೆವು. ನೀನು ತಾವರೆ ಹೂ ಕಿತ್ತು ಮುಡಿಸಿದೆ. ಮಲ್ಲಿಗೆ ನಾನು ಬೇಡವಾದನೆ ಎಂದಿತು. ನೀನು ಒಂದು ಮೊಗ್ಗು ತಂದು ಮುಡಿಸಿದಾಗ, ಕನಕಾಂಬರ ಇದು ಮೋಸ ಎಂದಿತು. ಅದನ್ನೂ ತಂದು ಮುಡಿಸಿದೆ. ಕೊಳದ ನೀರು ಚಳಿ ಹುಟ್ಟಿಸಿತು. ನಾನು ಗಡಗಡ ನಡುಗಿದೆ. ಹಲ್ಲುಗಳು ಕಟಕಟ ಶಬ್ದ ಮಾಡಿದವು. ನಾನು ಚಳಿ ನೀಗುತ್ತೇನೆಂದು ನೀನು ಕಾವಲಿನ ಮಂಚಕೆ ಹತ್ತಿಸಿ ನನ್ನನ್ನು ಅಪ್ಪಿ ಮಲಗಿದೆ.
ಅಮ್ಮ ತುಳಸಿಕಟ್ಟೆಗೆ ಪ್ರದಕ್ಷಿಣೆ ಹಾಕುತ್ತ ತುಳಸೀ ಮಾತೆ ಸ್ವೀಕರಿಸು ಪೂಜೆ, ನೀಡು ಸೌಭಾಗ್ಯ ಬಾಳಿಗೆ ಎಂದು ಹಾಡುತ್ತಿದ್ದ ಸ್ವರ ಕೇಳಿ ಎಚ್ಚರವಾಯಿತು. ಆದರೆ ಹಾಸಿಕೆ ಬಿಟ್ಟೇಳಬೇಕು ಅನ್ನಿಸಲಿಲ್ಲ. ಕನಸನ್ನೇ ನೆನೆಯುತ್ತ ಮಲಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications