ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ
ನನ್ನ ಮನಕೊಳದ ಹಂಸ ವಸಂತ,
ಬಾಳ ಗೆಳೆಯನೇ ಪೂರ್ಣ ಚಂದ್ರನೆ, ತಾಳಲಾರೆನೋ ಈ ವಿರಹ ವೇದನೆ ಎಂದು ಮನಸ್ಸು ಆಲಾಪಿಸುತ್ತಿರುವಾಗ ನಿನ್ನ ಕಾಗದ ಕೈ ಸೇರಿತು. ಅದರಲ್ಲಿನ ಒಕ್ಕಣೆ ತಿಳಿದಿದ್ದರೂ ಓದುವಾಗ ಇದೇ ಮೊದಲು ತಿಳಿಯುತ್ತಿರುವಂತೆ ಸಂಭ್ರಮಿಸುತ್ತ ಓದಿದೆ. ನೀಲಳಲ್ಲೂ ಇದೇ ಸಂಭ್ರಮ. ಒಂದೇ ಚಪ್ಪರದಡಿ ಎರಡು ಜೋಡಿಯ ಮದುವೆ! ಅವಳೀಗ ಅವಳದೇ ಕನಸಿನ ಲೋಕದಲ್ಲಿ.
ವಸಂತ ಮನಸಲ್ಲಿ ಏನೋ ಹಗುರ ಭಾವ. ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ. ಮುಡಿದ ಮಲ್ಲಿಗೆ ಗಮಲು ಮೊದಲ ಸಲ ಗಾಳಿಗೆ ಮುನಿದು ನನ್ನನ್ನೇ ಅಪ್ಪಿ ಹಿಡಿದಂತೆ. ಆ ಅಪ್ಪುಗೆ ನಿನ್ನದೇ ಆಗಿರುವಂತೆ. ವಸಂತ ಕರೆಯುತಿದೆ ಕನಸು, ಕುಣಿಯುತಿದೆ ಮನಸು.
ಒಂದರ ಹಿಂದೆ ಸಾಲು ಗಟ್ಟಿ ಬರುತ್ತಿರುವ ಹಾಡು. ಯಾವುದನ್ನೂ ಪೂರ್ಣವಾಗಿ ಹಾಡಿಕೊಳ್ಳಲಾಗದ ಸ್ಥಿತಿ. ಪಲ್ಲವಿ ಬಂದರೆ ಚರಣದವರೆಗೆ ಕಾಯಲಾಗದು. ಚರಣ ನೆನಪಾದರೆ ಪಲ್ಲವಿಯನ್ನು ನೆನಪಿಸಿಕೊಳ್ಳಲು ಸಮಯವಿರದು. ಏಕೆ ಹೀಗೆಂಬ ಪ್ರಶ್ನೆಯೂ ಇಣುಕದು. ಸಂಭ್ರಮವೆಂದರೆ ಹೀಗೆಯೇನೊ? ನನಗೆ ಇಂಥ ಸಂಭ್ರಮ ತೀರಾ ಹೊಸತು ವಸಂತ.
ಹಾಲಧಾರೆಯಲ್ಲಿ ಮಿಂದು ಬಂದೆಯೋ, ಬಾಯಾರಿದೆಯೆ ಎಂದು ನೀನು ಬೊಗಸೆಯೊಡ್ಡಿ ಬೆಳದಿಂಗಳನು ತುಂಬಿ ನನಗೆ ಕುಡಿಸಿದೆ. ಜನ್ಮ ಜನ್ಮಗಳಿಂದ ಬಾಯಾರಿ ಇದ್ದವಳಂತೆ ನಾನು ಗಟಗಟ ಕುಡಿದೆ. ನಾನು ದಣಿದಿದ್ದೇನೆ ಶಕುಂತಲೆ ನನಗೆ ಕುಡಿಸುವೆಯಾ ಎಂದು ನೀನು ಕೇಳಿದ್ದೇ ತಡ ನನ್ನ ಬೊಗಸೆಯಲ್ಲಿ ಬೆಳದಿಂಗಳ ತುಂಬಿ ನಿನಗೆ ಕುಡಿಸಿದೆ. ನೀನು ಕುಡಿಯುತ್ತಲೇ ಇದ್ದೆ. ನನ್ನ ಬೊಗಸೆ ಬರಿದಾಗದು, ನಿನ್ನ ದಾಹ ತೀರದು. ಎಷ್ಟು ಹೊತ್ತೋ ಹೀಗೆ.....

ನಿನಗಾಗಿ ತಂದಿರುವೆ ಬಿಳಿಗುದುರೆ ಏರು. ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ ಎಂದು ಮುಂದೆ ಕೂರಿಸಿಕೊಂಡು ನೀನು ನೆಗೆಸಿದೆ ಬಾನಿಗೆ. ಚಂದರನ ತಲುಪುವ ಮೊದಲು ಚುಕ್ಕಿಗಳ ತೋಟ ಹಾದು ಹೋಗುವಾಗ ಏನು ಆನಂದ, ಏನು ಸೋಜಿಗ!
ಯಾರೋ ಶ್ವೇತಕನ್ಯೆಯರು ಎದುರು ಬಂದರು. ಅವರಲ್ಲೊಬ್ಬಳು ನಿನ್ನನ್ನು ತಡೆದು, ರಾಜಕುವರನೋ ನೀನು, ಇವಳು ಒಲಿದ ರಾಜಕನ್ಯೆಯೋ? ವಿಹಾರಕ್ಕೆ ಬಂದಿರೋ ಎಂದು ಕೇಳಿದರೆ, ಇನ್ನೊಬ್ಬಳು, ರಾಜಕುಮಾರನ ವೇಷದ ಮಾಂತ್ರಿಕನೋ, ರಾಜಕುಮಾರಿಯ ಅಪಹರಿಸಿ ಬಚ್ಚಿಡಲು ಹೊರಟವನೋ ಎಂದು ಕೇಳಿದಳು. ನೀನು ಮುಗುಳು ನಗೆ ಬೀರಿದೆ.
ಅವರರಲ್ಲೊಬ್ಬಳು, ಹಾಯಿ ಹಲಾ, ಚೆಲುವ ಚತುರ ಮಾರರೂಪಿ ನರನೇ ಇವನು ಎಂದಳು. ಈ ಮಾತಿಗೆ ನಾನು ಹೆಮ್ಮೆಯಲಿ ಉಬ್ಬಿಹೋದೆ. ಒಬ್ಬಳು ತನ್ನ ದಿವ್ಯ ದೃಷ್ಟಿಯಿಂದ ತಿಳಿದು, ಹಲಾ ಇವರು ಚಂದಿರನ ಅತಿಥಿಗಳೇ ಎಂದಳು. ಅವರು ಹಲಾ ಹಲಾ ಎಂದು ಕಿಲಕಿಲಿಸುತ್ತ ಮಾಯವಾದರು.
ವಸಂತ ನೀನು ಕುದುರೆ ಸವಾರಿಯ ದಿಕ್ಕು ಬದಲಿಸಿದೆ. ಸುಣ್ಣ ಕಲೆಸಿದ ನೀರು ಚೆಲ್ಲಿದಂತೆ ಇರುವ ಈ ಲೋಕವೇನು ಚೆನ್ನವಿದೆ. ಕೆಳಗೆ ನೋಡೆಂದೆ. ಮೊದಲಿಗೆ ಕಂಡಿದ್ದು ನಮ್ಮೂರು. ನೀಲ ಜಗುಲಿಯಲಿ ಕುಳಿತು ಕನಸು ಕಾಣುತ್ತಿದ್ದಳು. ಅಪ್ಪನ ಗೊರಕೆ ಕೇಳಿಸುತ್ತಿತ್ತು. ಅಮ್ಮ ಮಗ್ಗುಲಾಗಿ ಮಲಗಿ ಎನ್ನುತ್ತಿದ್ದಳು. ನಿಮ್ಮೂರು ಕಂಡಿತು. ಜೋಳದ ತೋಟ, ತಾವರೆ ಕೊಳ. ಕೆಂಚಪ್ಪ ಅವನ ಮನೆಯಂಗಳದಲ್ಲಿ ಮಲಗಿ ಕಚ್ಚಿದ ಸೊಳ್ಳೆಗೆ ಟಪ್ಪೆಂದು ಬಡಿಯುತಿದ್ದ.
ನಾನು ತಾವರೆ ಕೊಳದ ಬಳಿಗೆ ಹೋಗೋಣ ಎಂದೆ. ನೀನು ಕಾಲಿನ ಹಿಮ್ಮಡಿಯಿಂದ ಕುದುರೆಯ ಪಕ್ಕೆ ಹೆಟ್ಟಿದೆ. ಅದು ನೇರ ಕೊಳದ ದಂಡೆಗೆ ಬಂದು ಮಾಯವಾಯಿತು. ನಾವು ಕೊಳದಲ್ಲಿ ಹೊರಳಾಡಿದೆವು. ನೀನು ತಾವರೆ ಹೂ ಕಿತ್ತು ಮುಡಿಸಿದೆ. ಮಲ್ಲಿಗೆ ನಾನು ಬೇಡವಾದನೆ ಎಂದಿತು. ನೀನು ಒಂದು ಮೊಗ್ಗು ತಂದು ಮುಡಿಸಿದಾಗ, ಕನಕಾಂಬರ ಇದು ಮೋಸ ಎಂದಿತು. ಅದನ್ನೂ ತಂದು ಮುಡಿಸಿದೆ.
ಕೊಳದ ನೀರು ಚಳಿ ಹುಟ್ಟಿಸಿತು. ನಾನು ಗಡಗಡ ನಡುಗಿದೆ. ಹಲ್ಲುಗಳು ಕಟಕಟ ಶಬ್ದ ಮಾಡಿದವು. ನಾನು ಚಳಿ ನೀಗುತ್ತೇನೆಂದು ನೀನು ಕಾವಲಿನ ಮಂಚಕೆ ಹತ್ತಿಸಿ ನನ್ನನ್ನು ಅಪ್ಪಿ ಮಲಗಿದೆ.
ಅಮ್ಮ ತುಳಸಿಕಟ್ಟೆಗೆ ಪ್ರದಕ್ಷಿಣೆ ಹಾಕುತ್ತ 'ತುಳಸೀ ಮಾತೆ ಸ್ವೀಕರಿಸು ಪೂಜೆ, ನೀಡು ಸೌಭಾಗ್ಯ ಬಾಳಿಗೆ' ಎಂದು ಹಾಡುತ್ತಿದ್ದ ಸ್ವರ ಕೇಳಿ ಎಚ್ಚರವಾಯಿತು. ಆದರೆ ಹಾಸಿಗೆ ಬಿಟ್ಟೇಳಬೇಕು ಅನ್ನಿಸಲಿಲ್ಲ. ಕನಸನ್ನೇ ನೆನೆಯುತ್ತ ಮಲಗಿದೆ.












Click it and Unblock the Notifications