ತಿಳಿಸಾರು ಮತ್ತು ನನ್ನಮ್ಮನ ಅಕ್ಕರೆ (ಭಾಗ 1)
ಅಮ್ಮ ಮಾಡುತ್ತಿದ್ದ ಗೊಜ್ಜು, ಚಟ್ನಿ, ಅಕ್ಕಿ ರೊಟ್ಟಿ, ಸೊಪ್ಪಿನ ಸಾರು, ತಿಳಿಸಾರು -ಹೀಗೆ ಯಾವುದೋ ಒಂದು ನಮ್ಮನ್ನು, ನಮ್ಮ ನಾಲಿಗೆ ರುಚಿಯನ್ನು ತಣಿಸಿರುತ್ತದೆ. ಆ ಪದಾರ್ಥದಲ್ಲಿ ರುಚಿಯಿತ್ತೋ ಅಥವಾ ಅಮ್ಮನ ಪ್ರೀತಿ ಸೇರಿಕೊಂಡು ರುಚಿ ದ್ವಿಗುಣಗೊಂಡಿತ್ತೋ ಗೊತ್ತಿಲ್ಲ! ಆ ರುಚಿ ಮಾತ್ರ ಎಲ್ಲೂ ಸಿಗುವುದಿಲ್ಲ. ಅದು ಹೋಲಿಕೆಯಿಲ್ಲದ ಅನುಪಮ ರುಚಿ!
ಕೆ. ತ್ರಿವೇಣಿ ಶ್ರೀನಿವಾಸರಾವ್, ಇಲಿನಾಯ್, ಅಮೆರಿಕಾ
ತವರು: ಕಡೂರು - ಚಿಕ್ಕಮಗಳೂರು ಜಿಲ್ಲೆ
''ನಿಮಗೆ ಅತ್ಯಂತ ಇಷ್ಟದ ತಿಂಡಿ, ತಿನಿಸು, ಅಡುಗೆ ಯಾವುದು?’’ ಇದು ಅತಿ ಸುಲಭದ ಪ್ರಶ್ನೆ ಮತ್ತು ಕಠಿಣವಾದ ಪ್ರಶ್ನೆಯೂ ಹೌದು! ಎಷ್ಟೇ ಸರಳ ಅನ್ನಿಸಿದರೂ, ಯಾರಾದರೂ ಇದ್ದಕ್ಕಿದ್ದಂತೆ ನಮ್ಮನ್ನು ನಿಲ್ಲಿಸಿ ಈ ಪ್ರಶ್ನೆ ಕೇಳಿದರೆ, ಕ್ಷಣ ಕಾಲವಾದರೂ ಯೋಚಿಸಲೇ ಬೇಕಾಗುತ್ತದೆ.
ಮೈಸೂರು ಪಾಕ್ ಇಷ್ಟವೆಂದರೆ ಜಿಲೇಬಿ, ಜಾಮೂನುಗಳು ''ನನ್ನಲ್ಲಿ ಕೋಪವೇ? ನಾ ನಿನಗೆ ಬೇಡವೇ?’’ ಎಂದು ಪೆಚ್ಚುಮುಖ ಹಾಕಿಕೊಂಡಂತಾಗುತ್ತದೆ. ವಾಂಗಿಭಾತ್ ನನ್ನ ಅಚ್ಚುಮೆಚ್ಚು ಎಂದರೆ ಮಾವಿನಕಾಯಿ ಚಿತ್ರಾನ್ನಕ್ಕೆ ಅನ್ಯಾಯವಾಗುತ್ತದೆ. ಬೋಂಡ ಮೆಚ್ಚೆಂದರೆ ಪಕೋಡ ಒಲ್ಲೆನೆಂಬ ಅರ್ಥ ಮೂಡುತ್ತದೆ.

ಯಾರಾದರೂ ಶ್ರಮ ವಹಿಸಿ ಇಂತಹದೊಂದು ಮೋಜಿನ ಸರ್ವೇ ನಡೆಸಿದ್ದೇ ಆದಲ್ಲಿ ಬಹಳ ಚೆನ್ನಾಗಿರುತ್ತದೆ. ಆಗ ವಿವಿಧ ಬಗೆಯ ತಿಂಡಿ,ತಿನಿಸುಗಳ ದೊಡ್ಡದೊಂದು ಪಟ್ಟಿಯೇ ನಮ್ಮೆದುರು ಪ್ರತ್ಯಕ್ಷವಾಗಬಹುದು. ಎಲ್ಲರಿಗೂ ಚಿರಪರಿಚಿತವಾಗಿರುವ ಉತ್ತರ, ದಕ್ಷಿಣ ಭಾರತದ ಅಡುಗೆಗಳಲ್ಲದೆ, ಬೇರೆ ಬೇರೆ ಪ್ರಾಂತ್ಯಗಳ, ದೇಶ ವಿದೇಶಗಳ ರುಚಿಕರ ಖಾದ್ಯಗಳ ಸುಂದರ ಮೆರವಣಿಗೆ ನಮ್ಮೆದುರು ನಡೆಯುವುದಂತೂ ಖಂಡಿತ.
ಯಾವುದೋ ಒಂದು ಬಗೆಯ ತಿಂಡಿಯನ್ನು ಇಷ್ಟವೆಂದು ಮತ್ತೆ ಮತ್ತೆ ತಿನ್ನುತ್ತಾ ಹೋದರೆ, ಆ ಪದಾರ್ಥ ತನ್ನ ತುಷ್ಟಿ ಗುಣವನ್ನು ಕಳೆದುಕೊಳ್ಳುತ್ತದೆ. ಸಿಹಿ ತಿಂಡಿ ಎಷ್ಟೇ ಇಷ್ಟವಾದರೂ ಅತಿಯಾದ ಸಿಹಿ ನಾಲಿಗೆಗೆ - ದೇಹದ ಆರೋಗ್ಯಕ್ಕೂ ಕಹಿ ಅನ್ನಿಸುತ್ತದೆ. ''ಲೋಕೋ ವಿಭಿನ್ನ ರುಚಿಃ’’ ಎನ್ನುವಂತೆ ಒಬ್ಬರಿಗೆ ರುಚಿಯೆನಿಸಿದ್ದು ಇನ್ನೊಬ್ಬರಿಗೆ ಸಹಿಸದು. ಒಬ್ಬರಿಗೆ ಅನಿಷ್ಟವೆನಿಸಿದ್ದು ಮತ್ತೊಬ್ಬರಿಗೆ ಪರಮ ಪ್ರಿಯ. ಈ ಮಾತಿಗೆ ಉಪ್ಪಿಟ್ಟಿನ ವಿಷಯದ ಕುರಿತು ನಡೆದ ''ಉಪ್ಪಿಟ್ಟು ರಾಮಾಯಣ’’ ಕ್ಕಿಂತ ಹೆಚ್ಚಿನ ಪುರಾವೆ ಬೇಕಿದೆಯೇ?
ನಿಮ್ಮೆಲ್ಲರ ಅಚ್ಚುಮೆಚ್ಚಿನ ಅಡುಗೆ, ತಿಂಡಿ ಯಾವುದಿರಬಹುದೆಂಬ ಕುತೂಹಲ ನನಗೂ ಇದೆ. ನೀವೆಲ್ಲ ಅದನ್ನು ಬರೆದು ತಿಳಿಸುವವರೆಗೆ ಕಾಯುತ್ತೇನೆ. ಅದಕ್ಕೆ ಮೊದಲು ನನ್ನ ಇಷ್ಟವೇನೆಂದು ಹೇಳಿಬಿಡುತ್ತೇನೆ. ಯಾವುದೋ ''ಒಂದು’’ ತಿನಿಸನ್ನು ನನ್ನ ಮೆಚ್ಚಿನದೆಂದು ಗುರುತಿಸುವುದು ಕಷ್ಟವಾದರೂ, ಸದಾಕಾಲವೂ ನನಗೆ ಬೇಕು ಎಂದು ಅನ್ನಿಸುವ ಏಕಮಾತ್ರ ಅಡುಗೆಯೆಂದರೆ ತಿಳಿಸಾರು. ಹಳತಾಯಿತೆಂದು ಕಳಚಿಕೊಳ್ಳಲಾಗದ ಸತಿ-ಪತಿಯರ ಸಂಬಂಧದ ಹಾಗೆ! ಹಳೆಯ ಅಡುಗೆಯೇ ಆದರೂ ದಿನದಿನವೂ ಹೊಸದಾಗಿಯೇ ಕಾಣಿಸುವ ಮೋಹಕತೆ ತಿಳಿಸಾರಿಗಿದೆ. ತಿನ್ನಲು ಸುಲಭ, ಮಾತ್ರವಲ್ಲ ತಯಾರಿಸುವುದು ಕೂಡ ಬಹಳ ಸುಲಭ.
ಹಸಿರು ಬಾಳೆ ಎಲೆಯ ಮೇಲೆ ಮಲ್ಲಿಗೆ ಹೂವಿನಂತಹ ಬಿಳುಪಾದ ಅನ್ನ. ಅದರ ಮೇಲೆ ತಿಳಿಸಾರು. ಒಂದು ಚಮಚ ತುಪ್ಪ. ಜೊತೆಗಿಷ್ಟು ಕರಿದ ಹಪ್ಪಳ, ಸಂಡಿಗೆಗಳು, ಉಪ್ಪಿನಕಾಯಿ. ರುಚಿಗೆ ಬೇಕಾದರೆ ಸೌತೆಕಾಯಿ ಕೋಸಂಬರಿ. ಸ್ವರ್ಗಕ್ಕೆ ಕಿಚ್ಚು ಹಚ್ಚಲು ಇಷ್ಟಿದ್ದರೆ ನನಗಂತೂ ಸಾಕೇ ಸಾಕು! ಇದರ ಮುಂದೆ ಪಂಚಭಕ್ಷ ಪರಮಾನ್ನಗಳು ಯಾರಿಗೆ ಬೇಕು? ಬೇಡವೇ ಬೇಡವೆಂದಲ್ಲ ಮತ್ತೆ. ಒಮ್ಮೊಮ್ಮೆ ಇದ್ದರೆ ಬೇಕು. ಇರದಿದ್ದರೂ ಸರಿಯೇ. ಹೆಂಡಕುಡುಕ ರತ್ನನಿಗೆ ಕೈಹಿಡಿದ ಪುಟ್ನಂಜಿ ನಗುತ್ತಾ ಕೊಟ್ಟ ಉಪ್ಪು ಗಂಜಿಯೇ ಪ್ರಪಂಚವಾದಂತೆ, ನಾನು ತಿಳಿಸಾರಿನಿಂದಲೇ ಸಂತೃಪ್ತಳು.
ಹಿಂದೆಲ್ಲಾ, ವಧು ಪರೀಕ್ಷೆಯ ಸಮಯದಲ್ಲಿ ''ಹುಡುಗಿಗೆ ಅಡುಗೆ ಮಾಡಲು ಬರುತ್ತದೆಯೇ?’’ ಎಂದು ವಿಚಾರಿಸಿದಾಗ, ''ಹೆಚ್ಚೇನೂ ಬರದಿದ್ದರೂ ’’ಅನ್ನ, ಸಾರು ಮಾಡಲಂತೂ ಬರುತ್ತದೆ’’ ಎಂಬ ಸಿದ್ಧ ಉತ್ತರ ಬರುತ್ತಿತ್ತು - ಸಾರು ಮಾಡಲು ಗೊತ್ತಿದ್ದರೆ ನೆಮ್ಮದಿಯಾಗಿ ಬದುಕಲಂತೂ ತೊಂದರೆಯಿಲ್ಲ ಎಂಬ ಕ್ಷೇಮ ಭಾವನೆಯೂ ಆ ಮಾತಿನ ಹಿಂದೆ ಪ್ರತಿಧ್ವನಿಸುತ್ತಿತ್ತು. ತಿಳಿಸಾರು ತಯಾರಿಸಲು ಪಾಕ ಪುಸ್ತಕವನ್ನು ತಿರುವಿ ಹಾಕುವುದೇನೂ ಬೇಕಾಗಿಲ್ಲ. ಕಷ್ಟದಿಂದ ಕಲಿಯುವ ಅಗತ್ಯವೂ ಇಲ್ಲ. ಎಲ್ಲರೂ ಕಲಿಯಬಹುದಾದ, ಎಲ್ಲರೂ ಮಾಡಬಹುದಾದ, ''ಸುಲಭದ ಮುಕ್ತಿಗೆ ಸುಲಭವೆಂದೆನಿಸುವ’’ ಸರಳ ಅಡುಗೆಯಿದು. [ತಿಳಿಸಾರು ಮತ್ತು ನನ್ನಮ್ಮನ ಅಕ್ಕರೆ (ಭಾಗ 2)]
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications