ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಮೌನ ಮುರಿದ ಆನಂದ್ ಸಿಂಗ್!
ಬೆಂಗಳೂರು, ಮೇ 17 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೌನ ಮುರಿದಿದ್ದಾರೆ. ಎರಡು ದಿನಗಳಿಂದ ಆನಂದ್ ಸಿಂಗ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಗುರುವಾರ ಆನಂದ್ ಸಿಂಗ್ ಅವರು ಕಾಂಗ್ರೆಸ್ ನಾಯಕರಿಗೆ ಪತ್ರ ಬರೆದು ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆನಂದ್ ಸಿಂಗ್ ಅವರು ಬಿಜೆಪಿಗೆ ಮರಳಲಿದ್ದಾರೆ. ಅವರು ಪಕ್ಷದ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ಸಖತ್ 'ಕೈ' ಕೊಟ್ಟು ಕಾಂಗ್ರೆಸ್ಸಿಗೆ 'ದುಃಖ' ತಂದರೆ ಆನಂದ್ ಸಿಂಗ್?
ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜಿವಾಲಾ, ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರಿಗೆ ವಿಜಯನಗರ (ಹೊಸಪೇಟೆ) ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಗುರುವಾರ ಪತ್ರ ಬರೆದಿದ್ದಾರೆ.
ಆನಂದ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಬೆದರಿಕೆ: ಕುಮಾರಸ್ವಾಮಿ
'ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ನಾನು ಬೆಂಬಲಿಸುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ನನ್ನ ಬೆಂಬಲವಿದೆ' ಎಂದು ಆನಂದ್ ಸಿಂಗ್ ರಣದೀಪ್ ಸುರ್ಜಿವಾಲಾ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಅವರು ಬಿಜೆಪಿ ಸೇರಿದ್ದಾರೆ ಎಂದು ಹರಿದಾಡುತ್ತಿದ್ದ ಗಾಳಿ ಸುದ್ದಿಗಳಿಗೆ ತೆರೆ ಬಿದ್ದಿದೆ.
ಆನಂದ್ ಸಿಂಗ್ ಮೇ 16ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರು. ಈಗಲ್ ಟನ್ ರೆಸಾರ್ಟ್ಗೂ ಅವರು ಆಗಮಿಸಿರಲಿಲ್ಲ. ಕಾಂಗ್ರೆಸ್ ನಾಯಕರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.
ಆನಂದ್ ಸಿಂಗ್ ಎಲ್ಲಿ?, ಅವರು ಪುನಃ ಬಿಜೆಪಿ ಸೇರಲಿದ್ದಾರೆಯೇ? ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಈಗ ಅವರು ಪತ್ರ ಬರೆದು ಕಾಂಗ್ರೆಸ್ ಜೊತೆಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
2008, 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಜಯನಗರ ಕ್ಷೇತ್ರದಲ್ಲಿ ಆನಂದ್ ಸಿಂಗ್ ಗೆದ್ದಿದ್ದರು. ಆದರೆ, 2018ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ್ದರು.
2018ರ ಚುನಾವಣೆಯಲ್ಲಿ ಆನಂದ್ ಸಿಂಗ್ ಅವರು 83,214 ಮತಗಳನ್ನು ಪಡೆದು ಜಯಗಳಿಸಿದ್ದಾರೆ.