ಬಂಡಾಯ ಶಾಸಕ ಜಮೀರ್ ಅಹಮದ್ ಖಾನ್ ಪರಿಚಯ
ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾಗಿದ್ದವರು ಜಮೀರ್ ಅಹಮದ್ ಖಾನ್. ಚಾಮರಾಜಪೇಟೆ ಕ್ಷೇತ್ರದ ಶಾಸಕರಾದ ಇವರು ಪ್ರಸ್ತುತ ಜೆಡಿಎಸ್ನಿಂದ ಅಮಾನತುಗೊಂಡಿದ್ದಾರೆ.
ನ್ಯಾಷನ್ ಟ್ರಾವೆಲ್ಸ್ ಉದ್ಯಮದಲ್ಲಿ ಪಾಲು ಹೊಂದಿರುವ ಜಮೀರ್ ಅಹಮದ್ ಖಾನ್, ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ವಿಧಾನಸಭೆ ಪ್ರವೇಶಿಸಿದರು. ಎಸ್.ಎಂ.ಕೃಷ್ಣ ಅವರು ರಾಜ್ಯಪಾಲರಾಗಿ ಆಯ್ಕೆಗೊಂಡು ಕ್ಷೇತ್ರ ತೊರೆದ ಮೇಲೆ ಚಾಮರಾಪೇಟೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಮೀರ್ ಆಯ್ಕೆಯಾದರು.
2008, 2013 ಸೇರಿ ಮೂರು ಬಾರಿ ಚಾಮರಾಜಪೇಟೆ ಕ್ಷೇತ್ರದಿಂದ ಸತತವಾಗಿ ಗೆಲುವು ಸಾಧಿಸಿದ್ದಾರೆ ಜಮೀರ್ ಅಹಮದ್ ಖಾನ್. 2018ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದೂ ಚಾಮರಾಜಪೇಟೆ ಕ್ಷೇತ್ರದಿಂದ
ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಜಮೀರ್ ಅಹಮದ್ ಖಾನ್, ಹಜ್ ಮತ್ತು ವಕ್ತ್ ಖಾತೆ ಸಚಿವರಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಆದರೆ, ಈಗ ಪಕ್ಷದಿಂದ ಅಮಾನತುಗೊಂಡಿದ್ದಾರೆ.
2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಆಗ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದರು ಜಮೀರ್ ಅಹಮದ್ ಖಾನ್. ಬಳಿಕ ಜೆಡಿಎಸ್ ಅವರನ್ನು ಪಕ್ಷದಿಂದ ಅಮಾನತು ಮಾಡಿತು.
ಜೆಡಿಎಸ್ನಿಂದ ಉಚ್ಛಾಟನೆಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಜಮೀರ್ ಅಹಮದ್ ಖಾನ್. ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಮುಂದಿನ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ.
ಜಮೀರ್ ಅಹಮದ್ ಖಾನ್ ಸೇರಿದಂತೆ 8 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಈ ಎಲ್ಲಾ ಶಾಸಕರಿಗೂ ಜಮೀರ್ ಅವರೇ ನಾಯಕರು. ಕೆ.ಗೋಪಾಲಯ್ಯ ಅವರು ಜೆಡಿಎಸ್ ಪಕ್ಷಕ್ಕೆ ವಾಪಸ್ ಆಗಿದ್ದು, 7 ಶಾಸಕರು ಸದ್ಯ ಜಮೀರ್ ಅಹಮದ್ ಖಾನ್ ಜೊತೆಗಿದ್ದಾರೆ.
2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ, ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿ, ಮೇಯರ್ ಪಟ್ಟವನ್ನು ಬಿಜೆಪಿಯಿಂದ ಕಿತ್ತುಕೊಳ್ಳವಲ್ಲಿ ಜಮೀರ್ ಅವರ ಪಾತ್ರ ಪ್ರಮುಖವಾಗಿತ್ತು.