ಮೋದಿ ಇಂದ ಶ್ರುತಿ ತನಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ
ಬೆಂಗಳೂರು, ಏಪ್ರಿಲ್ 24: ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಪ್ರಚಾರಕರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಇಂದು ಪ್ರಕಟಿಸಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಪ್ರಧಾನ ವಕ್ತಾರ ಸಂಬೀತ್ ಪಾತ್ರ ಅವರು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದರು.
ಏ.29ರಿಂದ ಕರ್ನಾಟಕದಲ್ಲಿ ಮೋದಿ ಪ್ರಚಾರ, ಎಲ್ಲೆಲ್ಲಿ ಸಮಾವೇಶ?
40 ಮಂದಿ ಸ್ಟಾರ್ ಪ್ರಚಾರಕರನ್ನು ಆಯ್ಕೆ ಮಾಡಲಾಗಿದೆ. ಆಂತರಿಕ ಸಮೀಕ್ಷೆಯನ್ನು ನಡೆಸಿ ರಾಜ್ಯದ 224 ಕ್ಷೇತ್ರಗಳನ್ನು ಮೂರು ವಿಭಾಗಗಳಾಗಿ ವಿಂಗಡನೆ ಮಾಡಿದೆ. ಸುಲಭವಾಗಿ ಜಯಗಳಿಸಬಹುದು (ಎ), ಸ್ಪರ್ಧೆ ಇರುವ ಕ್ಷೇತ್ರ (ಬಿ), ಅತೀ ಕಷ್ಟದ ಕ್ಷೇತ್ರ (ಸಿ). ಈ ಪೈಕಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎ ವಿಭಾಗದಲ್ಲಿ ಬರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಬಿ ಮತ್ತು ಸಿ ವಿಭಾಗಗಳಲ್ಲಿ ಬರುವ ಕ್ಷೇತ್ರಗಳಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ.
ಮಿಕ್ಕಂತೆ ಈ ಪಟ್ಟಿಯಲ್ಲಿ ಕೇಂದ್ರ ನಾಯಕರು, ಸಿನಿಮಾ ನಟಿಯರು ಇದ್ದಾರೆ. ಕರ್ನಾಟಕ ಬಿಜೆಪಿಯ ವಕ್ತಾರರು, ಮಹಿಳಾ ಮೋರ್ಚಾದಲ್ಲಿದ್ದ, ಈ ಬಾರಿ ಟಿಕೆಟ್ ಆಕಾಂಕ್ಷಿಗಳೂ ಕೂಡಾ ಆಗಿದ್ದ ಮಾಳವಿಕಾ ಅವಿನಾಶ್ ಹಾಗೂ ಶಿಲ್ಪಾ ಗಣೇಶ್ ಅವರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ.
ಮೆಗಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ
ಮೋದಿ, ಆದಿತ್ಯನಾಥ್ ಜೊತೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ಸ್ಮೃತಿ ಇರಾನಿ, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಮುಕ್ತಾರ್ ಅಬ್ಬಾಸ್ ನಖ್ವಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ರಾಜನಾಥ್ ಸಿಂಗ್ ಸೇರಿದಂತೆ ಹಲವು ತಾರಾ ಪ್ರಚಾರಕರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಮೆಗಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಏಪ್ರಿಲ್ 29ರಂದು ನರೇಂದ್ರ ಮೋದಿ
ಏಪ್ರಿಲ್ 29ರಂದು ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದು 2018ರ ವಿಧಾನಸಭೆ ಚುನಾವಣೆಗೆ ಅಂತಿಮ ಹಂತದ ಪ್ರಚಾರ ಕಾರ್ಯವನ್ನು ಆರಂಭಿಸಲಿದ್ದಾರೆ. ರಾಯಚೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ನಡೆಸಿದ್ದಾರೆ.
ಬೆಂಗಳೂರು ಮತ್ತು ಮಂಗಳೂರಿನಲ್ಲಿ
ಮೇ 7ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಮಂಗಳೂರು ಕರಾವಳಿ ಭಾಗದ ಪ್ರಮುಖ ನಗರವಾಗಿದ್ದು, ಮೋದಿ ಸಮಾವೇಶದಿಂದ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂಬ ನಿರೀಕ್ಷೆಯಲ್ಲಿದೆ ಬಿಜೆಪಿ. ಬೆಂಗಳೂರು ನಗರದಲ್ಲಿ 28 ಕ್ಷೇತ್ರಗಳಿದ್ದು ಎಲ್ಲಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ಫೆಬ್ರವರಿ 4ರಂದು ನಡೆದಿತ್ತು. ಆಗ ಮೋದಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಾರಿಲ್ಲ
ಮಿಕ್ಕಂತೆ ಈ ಪಟ್ಟಿಯಲ್ಲಿ ಕೇಂದ್ರ ನಾಯಕರು, ಸಿನಿಮಾ ನಟಿಯರು ಇದ್ದಾರೆ. ಕರ್ನಾಟಕ ಬಿಜೆಪಿಯ ವಕ್ತಾರರು, ಮಹಿಳಾ ಮೋರ್ಚಾದಲ್ಲಿದ್ದ, ಈ ಬಾರಿ ಟಿಕೆಟ್ ಆಕಾಂಕ್ಷಿಗಳೂ ಕೂಡಾ ಆಗಿದ್ದ ಮಾಳವಿಕಾ ಅವಿನಾಶ್ ಹಾಗೂ ಶಿಲ್ಪಾ ಗಣೇಶ್ ಅವರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ.