ಪಕ್ಷೇತರರನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆದುಕೊಂಡ ಡಿಕೆಶಿ
ಬೆಂಗಳೂರು, ಮೇ 15: ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಇಬ್ಬರೂ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಳಿವು ಸಿಗುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರು ಪಕ್ಷೇತರ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಕಾರ್ಯಕ್ಕೆ ಮುಂದಾಗಿದ್ದರು. ಅದರಲ್ಲಿ ಯಶಸ್ವಿ ಆಗಿರುವ ಅವರು ಪಕ್ಷದ ಬಲವನ್ನು ಎರಡು ಸ್ಥಾನದಷ್ಟು ಹೆಚ್ಚಿಸಿಕೊಂಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ
ರಾಣೆಬೆನ್ನೂರು ಕ್ಷೇತ್ರದಲ್ಲಿ ಜಯಗಳಿಸಿರುವ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ (ಕೆಪಿಜೆಪಿ) ಆರ್. ಶಂಕರ್ ಅವರನ್ನು ಕಾಂಗ್ರೆಸ್ಗೆ ಸೆಳೆದುಕೊಳ್ಳಲಾಗಿದೆ. ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದ ಎಚ್. ನಾಗೇಶ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿತ್ತು.
ಕಾಂಗ್ರೆಸ್ ನೆರವಿನಿಂದ ಜಯಗಳಿಸಿರುವ ನಾಗೇಶ್ ಅವರು ಸಹಜವಾಗಿಯೇ ಪಕ್ಷಕ್ಕೆ ಬೆಂಬಲ ನೀಡಲು ಮುಂದಾಗಿದ್ದಾರೆ. ಈಗಾಗಲೇ ಅವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.
ಕರ್ನಾಟಕ ಜನಾದೇಶ: ಒಂದಷ್ಟು ಕಹಿ, ಮತ್ತಷ್ಟು ಸಿಹಿ
ಜೆಡಿಎಸ್ನೊಂದಿಗಿನ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಮುಖಂಡರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್ ಸೇರಿದಂತೆ ಇತರರು ಮೈತ್ರಿ ಸರ್ಕಾರ ರಚನೆ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳು ನಮ್ಮ ಜತೆಗೆ ಇದ್ದಾರೆ ಎಂದು ಶಿವಕುಮಾರ್ ತಿಳಿಸಿದ್ದಾರೆ.