ರಾಜ್ಯಪಾಲರ ಬಳಿ ಒಂದು ವಾರದ ಕಾಲಾವಕಾಶ ಕೋರಿದ ಯಡಿಯೂರಪ್ಪ
ಬೆಂಗಳೂರು, ಮೇ 15: ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯು ಸರ್ಕಾರ ರಚನೆಗೆ ಒಂದು ವಾರ ಅವಕಾಶ ನೀಡುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಕೋರಿದೆ.
ಪಕ್ಷ ಬಹುಮತ ಗಳಿಸಲು ಸಾಧ್ಯವಾಗದಿದ್ದರೂ, ಹೆಚ್ಚಿನ ಸೀಟುಗಳನ್ನು ಪಡೆಯುತ್ತಿದ್ದಂತೆಯೇ ರಾಜ್ಯಪಾಲರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರು, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ರಾಜಕೀಯ ಸಂಪ್ರದಾಯದಂತೆ ರಾಜ್ಯಪಾಲರು ಅತಿ ದೊಡ್ಡ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನಿಸಿದ್ದಾರೆ. ಇದಕ್ಕೆ ಒಂದು ವಾರದ ಕಾಲಾವಕಾಶ ನೀಡುವಂತೆ ಯಡಿಯೂರಪ್ಪ ಅವರು ಕೋರಿದ್ದಾರೆ ಎನ್ನಲಾಗಿದೆ.

ಕಚೇರಿಯಲ್ಲಿ ಚರ್ಚೆ
ಫಲಿತಾಂಶ ಸಂಪೂರ್ಣವಾಗಿ ಹೊರಬೀಳುವ ಮೊದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚನೆಗೆ ಮುಂದಾಗಿರುವುದು ಬಿಜೆಪಿಗೆ ಆಘಾತ ಉಂಟುಮಾಡಿದೆ. ಇದರಿಂದ ಅತಿ ಹೆಚ್ಚು ಸೀಟುಗಳನ್ನು ಪಡೆದರೂ ಅಧಿಕಾರಕ್ಕೆ ಬರುವ ಅವಕಾಶ ಬಿಜೆಪಿಯ ಕೈತಪ್ಪುವ ಸಾಧ್ಯತೆ ಎದುರಾಗಿದೆ.
ಬಿಜೆಪಿ ಮುಖಂಡರಾದ ಬಿಎಸ್ ಯಡಿಯೂರಪ್ಪ, ಮುರಳೀಧರರಾವ್, ಅನಂತಕುಮಾರ್, ಶ್ರೀರಾಮುಲು, ಶೋಭಾ ಕರಂದ್ಲಾಜೆ ಅವರು ಸೇರಿದಂತೆ ಇತರರು ಪಕ್ಷದ ಕಚೇರಿಯಲ್ಲಿ ರಹಸ್ಯ ಸಮಾಲೋಚನೆ ನಡೆಸಿದ್ದಾರೆ.
In Pics: ಕರ್ನಾಟಕ ಜನಾದೇಶ: ಒಂದಷ್ಟು ಕಹಿ, ಮತ್ತಷ್ಟು ಸಿಹಿ
ಸರ್ಕಾರ ರಚನೆ ಮಾಡಲು ಬಿಜೆಪಿಗೆ ಎಂಟು ಸೀಟುಗಳ ಕೊರತೆ ಇದೆ. ಪಕ್ಷೇತರರ ಸಂಖ್ಯೆ ಕಡಿಮೆ ಇರುವುದರಿಂದ ಅವರ ಬೆಂಬಲ ಪಡೆದು ಸರ್ಕಾರ ರಚಿಸಲು ಅವಕಾಶವಿಲ್ಲ. ಅದಕ್ಕಾಗಿ ಜೆಡಿಎಸ್ ಬೆಂಬಲ ಪಡೆದುಕೊಳ್ಳುವುದು ಅನಿವಾರ್ಯ. ಆದರೆ, ಜೆಡಿಎಸ್ಗೆ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಲು ಮುಂದಾಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ಈ ಸಂಬಂಧ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳಬಹುದು ಎಂಬ ಬಗ್ಗೆ ಬಿಜೆಪಿ ಮುಖಂಡರು ಚರ್ಚಿಸುತ್ತಿದ್ದಾರೆ. ರಾಷ್ಟ್ರೀಯ ನಾಯಕರು ಜತೆಗೂಡಿದ ಬಳಿಕ ಮುಂದಿನ ಕ್ರಮದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.











Click it and Unblock the Notifications