ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ, ರಾಜ್ಯಪಾಲರ ಭೇಟಿ ಸಾಧ್ಯತೆ
ಬೆಂಗಳೂರು, ಮೇ 16 : ಕರ್ನಾಟಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಸರ್ಕಾರ ರಚನೆ ಮಾಡಲು ಬಿಜೆಪಿ ಕಸರತ್ತನ್ನು ಮುಂದುವರೆಸಿದೆ. ರಾಣೆಬೆನ್ನೂರು ಶಾಸಕ ಆರ್.ಶಂಕರ್ ಬಿಜೆಪಿ ಜೊತೆಗಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯ ಬಳಿಕ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಕೆ ಮಾಡುವ ನಿರೀಕ್ಷೆ ಇದೆ.
ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಬೆಳಗ್ಗೆ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದು, ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ. ಶಂಕರ್ ಕೆ.ಎಸ್.ಈಶ್ವರಪ್ಪ ಅವರ ಸಂಬಂಧಿಯಾಗಿದ್ದು, ಅವರನ್ನು ಈಶ್ವರಪ್ಪ ಅವರೇ ಕರೆತಂದಿದ್ದಾರೆ.

ಮತ್ತೊಂದು ಕಡೆ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಕಾರ್ಯಾಚರಣೆ ಆರಂಭಿಸಿದೆ. ಹಲವು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ, ಸಚಿವ ಸ್ಥಾನದ ಆಮಿಷವೊಡ್ಡಲಾಗಿದೆ. ನಾಲ್ಕು ತಂಡಗಳಲ್ಲಿ ಬಿಜೆಪಿ ನಾಯಕರು ಬೇರೆ ಪಕ್ಷದ ನಾಯಕರನ್ನು ಸೆಳೆಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಯಾವ ಶಾಸಕರು? : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್, ಹುಮನಾಬಾದ್ ಕ್ಷೇತ್ರದ ಶಾಸಕ ರಾಜಶೇಖರ್ ಪಾಟೀಲ್, ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್, ಕೂಡ್ಲಗಿ ಕ್ಷೇತ್ರದ ಶಾಸಕ ನಾಗೇಂದ್ರ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರಿಗೂ ಈಶ್ವರಪ್ಪ ಅವರು ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದು ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಕೇರಳದ ರೆಸಾರ್ಟ್ಗೆ ಹೋಗುವ ಚಿಂತನೆಯಲ್ಲಿದ್ದಾರೆ. ರಾಜ್ಯಪಾಲರು ಯಾರಿಗೆ ಸರ್ಕಾರ ರಚನೆ ಮಾಡಲು ಆಹ್ವಾನ ನೀಡಲಿದ್ದಾರೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
ರಾಜ್ಯಪಾಲರು ಆಹ್ವಾನ ನೀಡುವ ತನಕ ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಲಾಗುತ್ತದೆ. ಕೊಚ್ಚಿ ಸಮೀಪದ 2 ರೆಸಾರ್ಟ್ಗಳನ್ನು ಈಗಾಗಲೇ ಬುಕ್ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ಸಭೆಯ ಬಳಿಕ ಎಲ್ಲರೂ ಕೊಚ್ಚಿಗೆ ತೆರಳುವ ಸಾಧ್ಯತೆ ಇದೆ.












Click it and Unblock the Notifications