ಬಿಜೆಪಿ ಸಂಪರ್ಕದಲ್ಲಿರುವ ಕಾಂಗ್ರೆಸ್ ಜೆಡಿಎಸ್ ಶಾಸಕರು ಯಾರು?
ಹೈದರಾಬಾದ್, ಮೇ 18 : ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಬಹುಮತ ಸಾಬೀತು ಮಾಡಬೇಕಾಗಿದೆ. ಇದಕ್ಕಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ.
ಬೆಂಗಳೂರಿನಲ್ಲಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಹೈದರಾಬಾದ್ಗೆ ಶಿಫ್ಟ್ ಆಗಿದ್ದಾರೆ. ಶುಕ್ರವಾರ ಬೆಳಗ್ಗೆ ಎಲ್ಲರೂ ಬಂಜರಾ ಹಿಲ್ಸ್ನಲ್ಲಿರುವ 5 ಸ್ಟಾರ್ ಹೋಟೆಲ್ ಪಾರ್ಕ್ ಅಯಾತ್ಗೆ ಆಗಮಿಸಿದ್ದಾರೆ. ಶಾಸಕರು ಅಲ್ಲಿಯೇ ವಾಸ್ತವ್ಯ ಹೂಡುವ ಸಾಧ್ಯತೆ ಇದೆ.
ಶನಿವಾರವೇ ಬಿಜೆಪಿ ವಿಶ್ವಾಸ ಮತ ಸಾಬೀತು ಮಾಡಬೇಕು
ಹಲವು ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಈಗಾಗಲೇ ಕಾಂಗ್ರೆಸ್ ನಾಯಕರಿಂದ ದೂರಾಗಿದ್ದು, ದೆಹಲಿಯಲ್ಲಿರಬಹುದು ಎಂದು ಶಂಕಿಸಲಾಗಿದೆ.
ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್ ಅವರು ಬಿಜೆಪಿ ಬೆಂಬಲಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಗುರುವಾರ ಅವರು ಕಾಂಗ್ರೆಸ್ ನಾಯಕರಿಗೆ ಪತ್ರ ಬರೆದು, ಕಾಂಗ್ರೆಸ್, ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಮೌನ ಮುರಿದ ಆನಂದ್ ಸಿಂಗ್
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್ ಅವರು ಯಾರನ್ನು ಬೆಂಬಲಿಸಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಬಿಜೆಪಿ ಸಂಪರ್ಕದಲ್ಲಿರುವ ಶಾಸಕರು ಯಾರು? ಇಲ್ಲಿದೆ ಮಾಹಿತಿ...
ಹೈದರಾಬಾದ್ ತಲುಪಿದ ಜೆಡಿಎಸ್-ಕಾಂಗ್ರೆಸ್ ಶಾಸಕರು!
ಮಹಾಂತೇಶ್ ಎಸ್. ಕೌಜಲಗಿ
ಮಹಾಂತೇಶ್ ಎಸ್. ಕೌಜಲಗಿ ಅವರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಕಾಂಗ್ರೆಸ್ ಶಾಸಕರು. ಇವರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಮಹಾಂತೇಶ್ ಎಸ್. ಕೌಜಲಗಿ ಅವರು 47,040 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ರಾಜಶೇಖರ ಬಿ. ಪಾಟೀಲ್
ಹುಮ್ನಾಬಾದ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಶೇಖರ ಬಿ. ಪಾಟೀಲ್ ಅವರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. 2018ರ ಚುನಾವಣೆಯಲ್ಲಿ ಅವರು 74,945 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಪ್ರತಾಪ್ ಗೌಡ ಪಾಟೀಲ್
ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ಖಾಸಗಿ ವಿಮಾನದ ಮೂಲಕ ಬೆಂಗಳೂರಿನಿಂದ ತೆರಳಿದ್ದಾರೆ. ಎಲ್ಲಿಗೆ ಹೋಗಿದ್ದಾರೆ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಪ್ರತಾಪ್ ಗೌಡ ಪಾಟೀಲ್ 2013, 2018ರ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2008ರಲ್ಲಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.
ವೆಂಕಟರಾವ್ ನಾಡಗೌಡ
ಸಿಂಧನೂರು ಕ್ಷೇತ್ರದ ಜೆಡಿಎಸ್ ಶಾಸಕರು ವೆಂಕಟರಾವ್ ನಾಡಗೌಡ. 2018ರ ಚುನಾವಣೆಯಲ್ಲಿ 71,514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಇವರು ಸಹ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಶಾಸಕರು ಅಧಿಕೃತವಾಗಿ ಹೇಳಿಲ್ಲ.
ಬಿ.ನಾರಾಯಣರಾವ್
ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕರು ಬಿ.ನಾರಾಯಣರಾವ್. 2018ರ ಚುನಾವಣೆಯಲ್ಲಿ 61,425 ಮತಗಳನ್ನು ಪಡೆದು ಜೆಡಿಎಸ್ನ ಪಿ.ಜಿ.ಆರ್.ಸಿಂಧ್ಯಾ ಮತ್ತು ಬಿಜೆಪಿಯ ಮಲ್ಲಿಕಾರ್ಜುನ ಖೂಬಾ ಅವರನ್ನು ಸೋಲಿಸಿದ್ದಾರೆ. ಶನಿವಾರ ಬಿಜೆಪಿಗೆ ಅವರು ಬೆಂಬಲ ನೀಡಲಿದ್ದಾರೆಯೇ? ಕಾದು ನೋಡಬೇಕು.
ಅಮರೇಗೌಡ ಪಾಟೀಲ್ ಬಯ್ಯಾಪೂರ
ಮಾಜಿ ಸಚಿವ, ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಸಚಿವ ಸ್ಥಾನದ ಆಮಿಷ ವೊಡ್ಡಿದೆ ಎಂದು ಅವರು ಹೇಳಿದ್ದರು.
ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು 2018ರ ಚುನಾವಣೆಯಲ್ಲಿ 87,567 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಡಿ.ಎಸ್.ಹುಲಿಗೇರಿ
ಲಿಂಗಸಗೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ಎಸ್.ಹುಲಿಗೇರಿ ಅವರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. 2018ರ ಚುನಾವಣೆಯಲ್ಲಿ 54,230 ಮತಗಳನ್ನು ಪಡೆದು ಜಯಗಳಿಸಿದ್ದಾರೆ.