ರಾಜ್ಯಸಭಾ ಸ್ಥಾನಕ್ಕೆ ಕನ್ನಡಿಗರನ್ನೇ ಪರಿಗಣಿಸಲು ರಾಹುಲ್ಗೆ ಸಿಎಂ ಮನವಿ
Recommended Video
ಬೆಂಗಳೂರು, ಮಾರ್ಚ್ 08: ಕರ್ನಾಟಕದಿಂದ ರಾಜ್ಯಸಭೆಗೆ ಕನ್ನಡೇತರ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.
ನಿನ್ನೆ (ಮಾರ್ಚ್ 07)ರಂದು ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರು 'ರಾಜ್ಯದಲ್ಲಿ ಚುನಾವಣೆ ಸಮೀಪದಲ್ಲಿದ್ದು, ಈ ಸಮಯದಲ್ಲಿ ಕನ್ನಡೇತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸಿದರೆ ಹಲವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ವಿರೋಧ ಪಕ್ಷದ ಟೀಕೆಗೆ ಆಹಾರವಾಗಬೇಕಾಗುತ್ತದೆ' ಎಂದು ಸಿದ್ದರಾಮಯ್ಯ ಅವರು ರಾಹುಲ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ರಾಜ್ಯಸಭಾ ಸ್ಥಾನಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ದ್ವಿವೇದಿ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಸ್ಯಾಂ ಪಿತ್ರೋಡಾ ಹಾಗೂ ಮಾಜಿ ಸ್ಪೀಕರ್ ಮೀರಾ ಕುಮಾರಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದರು ಎನ್ನಲಾಗಿದೆ.
ರಾಜ್ಯಸಭೆಗೆ ಸದಸ್ಯರ ಆಯ್ಕೆ ಹೇಗೆ? ಮತ ಲೆಕ್ಕಾಚಾರ ಹೇಗಿರುತ್ತೆ?
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಾರ್ಚ್ 23 ರಂದು ಚುನಾವಣೆ ನಿಗದಿಯಾಗಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಬಿಜೆಪಿ ಒಬ್ಬರನ್ನು ಆಯ್ಕೆ ಮಾಡಬಹುದಾಗಿ, ಉಳಿದ ಒಂದು ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ. ಜೆಡಿಎಸ್ ಪಕ್ಷವು ಆ ಒಂದು ಸ್ಥಾನವನ್ನು ತಮಗೆ ಬಿಟ್ಟುಕೊಡುವಂತೆ ಈಗಾಗಲೇ ಮನವಿ ಮಾಡಿದೆ. ಆದರೆ ಕಾಂಗ್ರೆಸ್ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ರಾಹುಲ್ ಗಾಂಧಿ ಅವರಿಗೆ ಕನ್ನಡಿಗ ಅಭ್ಯರ್ಥಿಯ ಅವಶ್ಯಕತೆ ಮನವರಿಕೆ ಮಾಡಿಕೊಟ್ಟಿರುವ ಸಿದ್ದರಾಮಯ್ಯ ಅವರು ತಮ್ಮ ಕೈಯಲ್ಲಿರುವ ಮೂರು ಸ್ಥಾನಗಳಿಗೆ ಕ್ರಮವಾಗಿ ದಲಿತ, ಅಲ್ಪಸಂಖ್ಯಾತ ಮತ್ತು ಲಿಂಗಾಯತ ಅಭ್ಯರ್ಥಿಗಳನ್ನು ಆರಿಸಿ ಕಳಿಸುವ ಪ್ರಸ್ತಾಪವನ್ನು ರಾಹುಲ್ ಅವರ ಮುಂದಿಟ್ಟಿದ್ದಾರೆ. ಆದರೆ ಇದಕ್ಕೆ ರಾಹುಲ್ ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.
ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ
ಬಿಜೆಪಿಯು ಉದ್ಯಮಿ ರಾಜೀವ್ ಚಂದ್ರಶೇಖರ್ ಮತ್ತು ವಿಜಯ ಸಂಕೇಶ್ವರ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದು, ಹೈಕಮಾಂಡ್ಗೆ ಕಳಿಸಿದೆ. ಜೆಡಿಎಸ್ ಮಂಗಳೂರಿನ ಉದ್ಯಮಿ ಬಿ.ಎಂ.ಫಾರುಕ್ ಅವರನ್ನು ಆಯ್ಕೆ ಮಾಡಲು ಉತ್ಸುಕವಾಗಿದೆ.