Darshan Case: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Actor Darshan Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇಂದು (ನವೆಂಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಯಾವಾಗ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ನಟ ದರ್ಶನ್ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ ಇತ್ತೀಚೆಗಷ್ಟೇ 6 ವಾರಗಳ ಕಾಲ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಇದೀಗ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರ ಬೆನ್ನಲ್ಲೆ ಇಂದು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಪ್ರಕರಣದ ನಟ ದರ್ಶನ್, ಪವಿತ್ರಾ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಪ್ರಾಸಿಕ್ಯೂಷನ್ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರಸನ್ನ ಕುಮಾರ್ ಅವರು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಕೆಲವು ವರದಿಗಳನ್ನು ನಿರೀಕ್ಷಿಸಲಾಗಿದೆ. ಕೆಲವು ವರದಿಗಳು ಬಂದಿವೆ. ಹೆಚ್ಚುವರಿ ಮತ್ತು ಅಂತಿಮ ವರದಿಯು ನಾಳೆ ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ. ಅದನ್ನು ಪರಿಶೀಲಿಸಿ ಅರ್ಜಿದಾರರ ಪರ ವಕೀಲರು ವಾದ ಮಂಡಿಸಬಹುದು ಎಂದರು.
ನ್ಯಾಯಾಲಯವು ದರ್ಶನ್ಗೆ 6 ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ, ಚಿಕಿತ್ಸೆಯ ಅವಧಿಯ ಬಗ್ಗೆ ವೈದ್ಯರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಲಾಗಿತ್ತು. ಇದನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೆ, ವರದಿಯಲ್ಲಿನ ವಿವರ ಏನಿದೆ ಎಂಬುದು ನಮಗೆ ತಿಳಿದಿಲ್ಲ. ಶಸ್ತ್ರಚಿಕಿತ್ಸೆಯ ದಿನಾಂಕ ನಿಗದಿಯಾಗಿದೆಯೇ? ಎಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂಬ ಮಾಹಿತಿ ನಮಗೆ ಇಲ್ಲ ಎಂದರು.
ಆಗ ಪೀಠವು ದರ್ಶನ್ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಿದ ಒಂದು ವಾರದ ಸಂದರ್ಭದಲ್ಲಿ ಒಂದು ವೈದ್ಯಕೀಯ ವರದಿ ಮತ್ತು ಇಂದು ಇನ್ನೊಂದು ವೈದ್ಯಕೀಯ ವರದಿ ಸಲ್ಲಿಸಲಾಗಿದೆ. ಎರಡನ್ನು ಪಡೆದು ಪರಿಶೀಲಿಸಿ, ಏನು ಹೇಳಬೇಕು ಎಂದಿದ್ದೀರೋ ಅದನ್ನು ಹೇಳಬಹುದು ಎಂದರು.
ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ಕುಳಿತು ರೌಂಡ್ ಟೇಬಲ್ ಪಾರ್ಟಿ ಮಾಡಿದ್ದರು. ಈ ವೇಳೆ ದರ್ಶನ್ ಒಂದು ಕೈಯಲ್ಲಿ ಸಿಗರೇಟ್ ಮತ್ತೊಂದು ಕೈಯಲ್ಲಿ ಕಾಫಿ ಮಗ್ ಹಿಡಿದಿರುವ ಫೋಟೋ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರೌಡಿ ಶೀಟರ್ಗಳ ಜೊತೆ ವಿಐಪಿ ಸೆಲ್ನಿಂದಲೇ ದರ್ಶನ್ ವಿಡಿಯೋ ಕಾಲ್ನಲ್ಲಿ ಮಾತನಾಡಿರುವ ವಿಡಿಯೋ ಕೂಡ ಭಾರೀ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿದ್ದವು.
ಬಳಿಕ ಎಚ್ಚೆತ್ತ ಸರ್ಕಾರ ಪರಪ್ಪನ ಅಗ್ರಹಾರದ 9 ಮಂದಿ ಜೈಲಾಧಿಕಾರಿಗಳನ್ನು ಅಮಾನತು ಮಾಡಿತ್ತು. ಅಲ್ಲದೆ ಕೋರ್ಟ್ ಆದೇಶದ ಮೇರೆಗೆ ಪೊಲೀಸರು ನಟ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ & ಗ್ಯಾಂಗ್ ಪಟ್ಟಣಗೆರೆ ಶೆಡ್ನಲ್ಲಿ ಭೀಕರವಾಗಿ ಹಲ್ಲೆ ಮಾಡಿ ಸಾಯಿಸಿದ್ದಾರೆ ಎಂದು ಪೊಲೀಸ್ ವರದಿಗಳಲ್ಲಿ ಉಲ್ಲೇಖಲಾಗಿದೆ.












Click it and Unblock the Notifications