Allu Arjun: ಅಲ್ಲು ಅರ್ಜುನ್ ಬಂಧಿಸಿದ್ದು ಅನ್ಯಾಯ; ಅಭಿಮಾನಿಗಳ ಆಕ್ರೋಶ
ಪುಷ್ಪ 2 ಸಿನಿಮಾದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದ ನಟ ಅಲ್ಲು ಅರ್ಜುನ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ರನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲು ಅರ್ಜುನ್ ಬಂಧನ ಸುದ್ದಿ ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ್ದು, ಅಭಿಮಾನಿಗಳು ಅಲ್ಲು ಅರ್ಜುನ್ರನ್ನು ಏನೂ ತಪ್ಪಿಲ್ಲ ಎಂದು ವಾದಿಸುತ್ತಿದ್ದಾರೆ.
ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ಸಿನಿಮಾ ಪ್ರೀಮಿಯರ್ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಗಲಭೆ ಉಂಟಾಗಿದ್ದು ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ ಬಂಧನ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು. ಸಂಧ್ಯಾ ಚಿತ್ರಮಂದಿರದ ಮಾಲೀಕ, ಆಡಳಿತ ಮಂಡಳಿ ಮತ್ತು ನಟ ಅಲ್ಲು ಅರ್ಜುನ್ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿತ್ತು. ಪುಷ್ಪ 2 ಯಶಸ್ಸಿನ ಖುಷಿಯಲ್ಲಿದ್ದ ಅಲ್ಲು ಅರ್ಜುನ್ಗೆ ಶುಕ್ರವಾರ ಪೊಲೀಸರು ಶಾಕ್ ನೀಡಿದ್ದಾರೆ. ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ.
ಅಲ್ಲು ಅರ್ಜುನ್ ಬಂಧನ ಸುದ್ದಿ ಟಾಲಿವುಡ್ನಲ್ಲಿ ಸಂಚಲನ ಮೂಡಿಸಿದೆ. ಅಲ್ಲು ಅರ್ಜುನ್ ಅಭಿಮಾನಿಗಳು ಸಿಟ್ಟಾಗಿದ್ದು ಪ್ರಕರಣದಲ್ಲಿ ತಪ್ಪಿಲ್ಲದೇ ಇದ್ದರೂ ಅಲ್ಲು ಅರ್ಜುನ್ರನ್ನು ಬಂಧಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಯಾವುದೇ ಸಂಬಂಧವಿಲ್ಲ ಆದರೂ ಅವರನ್ನು ಬಂಧಿಸಿದ್ದು ಅಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications