ವಿಷ್ಣುವರ್ಧನ್ ಅಭಿಮಾನಿಗಳಿಗೆ ಬಿ. ವೈ. ವಿಜಯೇಂದ್ರ ಬೆಂಬಲ
ಬೆಂಗಳೂರು, ಡಿಸೆಂಬರ್ 17; ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಹೋರಾಟಕ್ಕೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಬೆಂಬಲ ಸೂಚಿಸಿದ್ದಾರೆ. ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘಗಳ ಒಕ್ಕೂಟ ಭಾನುವಾರ ಹೋರಾಟವನ್ನು ನಡೆಸುತ್ತಿದೆ.
ನಟ ದಿ. ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘಗಳ ಒಕ್ಕೂಟ, ಕರ್ನಾಟಕ ಹೋರಾಟ ನಡೆಸುತ್ತಿದೆ. ಹಲವಾರು ನಟರು ಸಹ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

ಅಭಿಮಾನಿಗಳ ಪಾಲಿನ 'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅಂತ್ಯಕ್ರಿಯೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ನಡೆದಿತ್ತು. ಆದರೆ ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಿದೆ. ಅಭಿಮಾನಿಗಳು ಅಂತ್ಯಕ್ರಿಯೆ ನಡೆದ ಜಾಗದ ಜೊತೆ ಭಾವನಾತ್ಮಕ ನಂಟು ಹೊಂದಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಭಾನುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತಿದೆ. ನಟ ಸುದೀಪ್, ಡಾಲಿ ಧನಂಜಯ್ ಸಹ ಈ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ವಿಜಯೇಂದ್ರ ಬೆಂಬಲ; ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಯಜೇಂದ್ರ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಅವರು ಈ ಕುರಿತು ಪೋಸ್ಟ್ ಹಾಕಿದ್ದಾರೆ.
'ಕನ್ನಡದ ಅಭಿಜಾತ ಕಲಾವಿದ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರಗೊಂಡ ಸ್ಥಳ ಪುಣ್ಯಭೂಮಿ ಆಗಬೇಕೆಂಬ ವಿಷ್ಣು ಅಭಿಮಾನಿಗಳ ಬೇಡಿಕೆ ಕನ್ನಡಿಗರ ಅಪೇಕ್ಷೆಯ ಸಂಕೇತವಾಗಿದೆ. ಸರ್ಕಾರ ಸಕಾರತ್ಮಕವಾಗಿ ಮನಸ್ಸು ಮಾಡಿದರೆ ಈ ಬೇಡಿಕೆ ಈಡೇರಿಸುವುದು ದೊಡ್ಡ ವಿಷಯವೇನಲ್ಲ, ಈ ನಿಟ್ಟಿನಲ್ಲಿ ಕೂಡಲೇ ಗಮನ ಹರಿಸುವಂತೆ ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.
'ಬಿಜೆಪಿ ಸರ್ಕಾರದ ಅವಧಿಯಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ವೆಚ್ಚದಲ್ಲಿ ವಿಷ್ಣುವರ್ಧನ್ ಅವರ ಇತಿಹಾಸ ಸಾರುವ ಸ್ಮಾರಕ ಲೋಕಾರ್ಪಣೆಗೊಳಿಸಿದ್ದನ್ನು (ಕಳೆದ ವರ್ಷ) ಈ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ಸ್ಮರಿಸ ಬಯಸುತ್ತೇನೆ' ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ನೆನಪು ಮಾಡಿಕೊಟ್ಟಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿಯನ್ನು ಅಭಿವೃದ್ಧಿಗೊಳಿಸಬೇಕು, ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ನಡೆಯುತ್ತಿರುವ ಹೋರಾಟಕ್ಕೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಹಲವಾರು ನಟರು ಸಹ ಬೆಂಬಲ ಘೋಷಣೆ ಮಾಡಿದ್ದಾರೆ.
ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘಗಳ ಒಕ್ಕೂಟದ ವೀರಕಪುತ್ರ ಶ್ರೀನಿವಾಸ ಮಾತನಾಡಿ, "ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಲೋಕಾರ್ಪಣೆಗೊಂಡಿದೆ. ನಾಡಿನ ಪ್ರತಿಯೊಬ್ಬರು ಅಭಿಮಾನ್ ಸ್ಟುಡಿಯೋದಲ್ಲಿಯೇ ವಿಷ್ಣುವರ್ಧನ್ ಇರುವಿಕೆಯನ್ನು ನಂಬಿದ್ದಾರೆ. ಅವರ ಪ್ರತಿ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆ ದಿನ 50 ಸಾವಿರಕ್ಕೂ ಅಧಿಕ ಜನರು ಪುಣ್ಯಭೂಮಿಗೆ ಬಂದು ದರ್ಶನ ಮಾಡಿ ಹೋಗುತ್ತಾರೆ" ಎಂದು ಹೇಳಿದ್ದಾರೆ.
"ಅಭಿಮಾನ್ ಸ್ಟುಡಿಯೋ ಮಾಲೀಕರು ಪುಣ್ಯಭೂಮಿ ಒಳ ಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ ವಿಷ್ಣುವರ್ಧನ್ ಅವರ ಜನ್ಮದಿನ ಮತ್ತು ಪುಣ್ಯಸ್ಮರಣೆಗೆ ಪ್ರತಿವರ್ಷ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತು ಉಪ ಮುಖ್ಯಮಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಅಹವಾಲು ಸಲ್ಲಿಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.












Click it and Unblock the Notifications