ಯುವ-ಶ್ರೀದೇವಿ ಭೈರಪ್ಪ ಡಿವೋರ್ಸ್ ಕೇಸ್ಗೆ ಬಿಗ್ ಟ್ವಿಸ್ಟ್: ಕೋರ್ಟ್ನಿಂದ ಮಹತ್ವದ ಆದೇಶ
ಬೆಂಗಳೂರು, ಜುಲೈ 04: ಕನ್ನಡ ಚಿತ್ರರಂಗದ ನಟ ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ವಿಚ್ಛೇದನ ಪ್ರಕರಣದ ವಿಚಾರಣೆ ಇಂದು ಫ್ಯಾಮಿಲಿ ಕೋರ್ಟ್ನಲ್ಲಿ ನಡೆದಿದೆ. ಡಿವೋರ್ಸ್ ಕೋರಿ ಯುವ ರಾಜ್ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಈ ಪ್ರಕರಣದಲ್ಲಿ ಮಹತ್ವದ ಆದೇಶ ನೀಡಿದೆ.
ಕೌಟುಂಬಿಕ ನ್ಯಾಯಾಲಯದ ವಿಚಾರಣೆ ವೇಳೆ ನಟ ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಪರ ವಕೀಲರು ಹಾಜರಿದ್ದರು. ವಾದ ಪ್ರತಿ ವಾದ ಆಲಿಸಿ, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ, ಯುವ ರಾಜ್ಕುಮಾರ್ ಡಿವೋರ್ಸ್ ಪ್ರಕರಣವನ್ನು ಮಿಡಿಯೇಷನ್ ಕೌನ್ಸಲಿಂಗ್ಗೆ ಸೂಚಿಸಿದ್ದಾರೆ. ಮೊದಲು ಮಿಡಿಯೇಷನ್ ಕೌನ್ಸೆಲಿಂಗ್ ಮುಕ್ತಾಯ ಆಗಲಿ. ಆ ಬಳಿಕ ಆಕ್ಷೇಪಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇದು ಕೌಟುಂಬಿಕ ಕಲಹ ಮೊದಲು ದಂಪತಿ ನಡುವೆ ಕೌನ್ಸಲಿಂಗ್ ನಡೆಯಬೇಕು. ಕೌನ್ಸಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಛೇದನದ ಆಕ್ಷೇಪಣೆಯ ವಾದ ಕೇಳುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. ಮುಂದಿನ ಆಗಸ್ಟ್ 23ಕ್ಕೆ ಮಿಡಿಯೇಷನ್ ಕೌನ್ಸಲಿಂಗ್ಗೆ ದಿನಾಂಕ ನಿಗದಿ ಮಾಡಲಾಗಿದ್ದು, ಅಂದೇ ಕೌನ್ಸಲಿಂಗ್ ವರದಿ ಆಧಾರದ ಮೇಲೆ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ- ಶ್ರೀದೇವಿ ಭೈರಪ್ಪ
ಇನ್ನು ಇಂದಿನ ಅರ್ಜಿ ವಿಚಾರಣೆಗೂ ಮೊದಲು ಶ್ರೀದೇವಿ ಭೈರಪ್ಪ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. 'ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘಟನೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾಗಿದ್ದು ತೀರ ದುರದೃಷ್ಟಕರ. ಆದರೂ ಸಹ ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.
ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಅಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದು:ಖಿಸಿ ಸಾಂತ್ವನ ಹೇಳಿದ ನನ್ನ ವಿದ್ಯಾರ್ಥಿಗಳಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ. ಹಾರ್ವರ್ಡ್ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಾಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಅಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ' ಎಂದು ಪೋಸ್ಟ್ ಮಾಡಿದ್ದರು.












Click it and Unblock the Notifications