Darshan Thoogudeepa: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಮತ್ತೆ ಶಿಫ್ಟ್, ಎಲ್ಲಿಗೆ?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರು ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಮೊದಲಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಅವರ ಜಾಲಿ ಫೋಟೋ ಲೀಕ್ ಆದ ಕಾರಣ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈಗ ಮತ್ತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿನಿಂದ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರ ಆರೋಗ್ಯ ಸರಿ ಇಲ್ಲ ಎನ್ನಲಾಗಿದೆ. ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಬೆನ್ನಿನಲ್ಲಿ ಊತ ಕಂಡು ಬಂದು ಸ್ಕ್ಯಾನಿಂಗ್ ಮಾಡಿಸುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್ ಅವರು ಬೆಂಗಳೂರಿನಲ್ಲಿ ವೈದ್ಯಕೀಯ ತಪಾಸಣೆ ಮಾಡಿಸುತ್ತೇನೆ, ಈಗ ಮಾತ್ರ ಕೊಡಿ ಎಂದು ಹೇಳುತ್ತಿದ್ದಾರಂತೆ.

ಇಂದಿಗೆ ನಟ ದರ್ಶನ್ ಅವರ ಕಸ್ಟಡಿ ಕೂಡ ಮುಗಿದಿದ್ದು, ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಒಂದು ವೇಳೆ ದರ್ಶನ್ಗೆ ಇಂದೂ ಕೂಡ ಜಾಮೀನು ನಿರಾಕರಿಸಿದರೆ, ತಮ್ಮ ಅನಾರೋಗ್ಯದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡುವ ಸಾಧ್ಯತೆ ಇದೆ. ಅನಾರೋಗ್ಯ ಹಾಗೂ ಚಿಕಿತ್ಸೆಯ ಕಾರಣಕ್ಕೆ ತಮ್ಮ ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಶಿಫ್ಟ್ ಮಾಡಿಸಿ ಎಂದು ಮನವಿ ಮಾಡಲು ದರ್ಶನ್ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ನ್ಯಾಯಾಧೀಶರು ದರ್ಶನ್ ಅವರ ಅನಾರೋಗ್ಯ ಸಮಸ್ಯೆ ಪರಿಗಣಿಸಿ, ಅವರ ಮನವಿ ಪುರಸ್ಕರಿಸುವ ಸಾಧ್ಯತೆಯೂ ಇದೆ. ಹಾಗಾಗಿ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಶಿಫ್ಟ್ ಆಗುವುದು ಬಹುತೇಕ ಪಕ್ಕಾ ಎಂದೂ ಹೇಳಲಾಗುತ್ತಿದೆ. ಹಲವು ಬಾರಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡುತ್ತಲೇ ಇದ್ದು, ಇಂದಿನ ವಿಚಾರಣೆಯಲ್ಲಿ ಜಾಮೀನು ಸಿಗುವ ಸಾಧ್ಯತೆಯೂ ದಟ್ಟವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ದರ್ಶನ್ಗೆ ಜಾಮೀನು ಸಿಗಬಹುದು, ಇಲ್ಲವೇ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಬಹುದು. ಜಾಮೀನು ಸಿಕ್ಕರೂ ಬಳ್ಳಾರಿ ಜೈಲುವಾಸದಿಂದ ದರ್ಶನ್ ಮುಕ್ತಿ ಪಡೆಯಲಿದ್ದಾರೆ. ಒಂದು ವೇಳೆ ನ್ಯಾಯಾಂಗ ಬಂಧನ ವಿಸ್ತರಣೆಯಾದರೂ ಕೋರ್ಟ್ನಲ್ಲಿ ಮನವಿ ಮಾಡಿಕೊಂಡು ಬೆಂಗಳೂರಿಗೆ ಶಿಫ್ಟ್ ಆಗಲು ಅನುಮತಿ ಕೇಳಲು ದರ್ಶನ್ ಪ್ಲ್ಯಾನ್ ಮಾಡಿದ್ದಾರಂತೆ.
ಕಳೆದ ಸೆಪ್ಟೆಂಬರ್ 21ರಂದು ಮೊದಲ ಬಾರಿ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಸಿದಾಗ ಸರಕಾರಿ ವಿಶೇಷ ಅಭಿಯೋಜಕ (ಎಸ್ಪಿಪಿ) ಪ್ರಸನ್ನ ಕುಮಾರ್ ಆಕ್ಷೇಪಣೆಗೆ ಸಮಯ ಕೇಳಿದ್ದರು. ಹಾಗಾಗಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿತ್ತು. ಆದರೆ ಸೆಪ್ಟೆಂಬರ್ 27ರಂದು ಅರ್ಜಿ ವಿಚಾರಣೆಗೆ ಬಂದಾಗ ದರ್ಶನ್ ಪರ ಹಿರಿಯ ವಕೀಲರು ಹಾಜರಿಲ್ಲ ಎಂದು ಕಾರಣ ಕೊಟ್ಟಿದ್ದ ಕಿರಿಯ ವಕೀಲ ಸುನಿಲ್ ಅರ್ಜಿ ವಿಚಾರಣೆಗೆ ಮತ್ತೆ ಸಮಯ ಕೇಳಿದ್ದರು. ಬಳಿಕ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿತ್ತು.
ಸೆಪ್ಟೆಂಬರ್ 30ರಂದು ಜಾಮೀನು ಅರ್ಜಿ ವಿಚಾರಣೆಗೆ ಬಂದಾಗ ವಕೀಲರು ಹಾಜರಿಲ್ಲದ ಕಾರಣ, ಅರ್ಜಿ ವಿಚಾರಣೆ ಮುಂದೂಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ (ಇಂದಿಗೆ) ಮುಂದೂಡಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದರಲ್ಲಿ ಮೂವರಿಗೆ ಮಾತ್ರ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಇಂದು ದರ್ಶನ್ ಅವರ ಭವಿಷ್ಯ ಕೋರ್ಟ್ನಲ್ಲಿ ನಿರ್ಧಾರವಾಗಲಿದೆ.












Click it and Unblock the Notifications