Darshan Thoogudeepa: ಸುಪ್ರೀಂ ಕೋರ್ಟ್ನಲ್ಲಿ ದರ್ಶನ ಪರ ವಾದ ಮಾಡಲಿದ್ದಾರೆ ಹಿರಿಯ ಕಾಂಗ್ರೆಸ್ ನಾಯಕ
ಬೆಂಗಳೂರು,ಫೆಬ್ರವರಿ 17: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ಅರ್ಜಿಯ ವಿಚಾರಣೆ ಮಾರ್ಚ್ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಅವರ ಕಾನೂನು ತಂಡ ಹಿರಿಯ ಕಾಂಗ್ರೆಸ್ ನಾಯಕರನ್ನ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ನಲ್ಲಿ ನಟ ದರ್ಶನ್ ಪರ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡುವ ಸಾಧ್ಯತೆಯಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಕಾನೂನು ತಂಡ ಈಗಾಗಲೇ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿದೆ.

ನಟ ದರ್ಶನ್ ಅವರ ಕಾನೂನು ತಂಡ ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಾದ ಪ್ರತಿವಾದ, ಕೇಸ್ ಹಿಸ್ಟರಿಯನ್ನು ನೀಡಲಾಗಿದೆ. ಅಲ್ಲದೇ ಕೋರ್ಟ್ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ದರ್ಶನ್ ಪರ ವಾದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್
ಒಪ್ಪಿಗೆ ನೀಡಿದರೆ ಮಾರ್ಚ್ 18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಡಿಸೆಂಬರ್ 13 ರಂದು ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಈ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಿಟ್ಟುಸಿರು ಬಿಟ್ಟಿದ್ದರು. ಆದರೆ, ಹೈಕೋರ್ಟ್ ತೀರ್ಪನ್ನು ಪ್ರಶ್ನೆ ಮಾಡಿ ಕಳೆದ ಡಿಸೆಂಬರ್ ಅಂತ್ಯದಲ್ಲಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.
ಇನ್ನೂ ಕಡತದಲ್ಲಿ ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ ಇದೆ. ಇನ್ನೂ ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿಯಲ್ಲಿದೆ.
ಯಾರೆಲ್ಲಾ ಜಾಮೀನು ರದ್ದಿಗೆ ಅರ್ಜಿ ಸಲ್ಲಿಕೆಯಾಗಿದೆ?
* ಪವಿತ್ರಾ ಗೌಡ (ಎ 1)
* ದರ್ಶನ್ (ಎ 2)
* ಜಗದೀಶ್ ಜಗ್ಗ ಅಲಿಯಾಸ್ ಜಗ್ಗ (ಎ 6)
* ಅನುಕುಮಾರ್ ಅಲಿಯಾಸ್ ಅನು (ಎ 7)
* ಆರ್ ನಾಗರಾಜು (ಎ 11)
* ಎಂ ಲಕ್ಷ್ಮಣ್ (ಎ 12)
* ಪ್ರದೋಶ್ (ಎ 14)












Click it and Unblock the Notifications