Actor Darshan: ನಟ ದರ್ಶನ್ಗೆ ಹೈಕೋರ್ಟ್ ಗುಡ್ ನ್ಯೂಸ್
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಸಂಬಂಧಿಸಿದ ಗನ್ ಪರವಾನಗಿ ಅಮಾನತು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.
ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ದೊರೆತ ನಂತರ, ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಆಧಾರದ ಮೇಲೆ ಪೊಲೀಸರು ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಇದೀಗ ವಿಚಾರಣೆ ನಡೆಸಿದ್ದು, ಗನ್ ಅಮಾನತು ಆದೇಶಕ್ಕೆ ತಾತ್ಕಾಲಿಕಾ ತಡೆಯಾಜ್ಞೆ ನೀಡಿದೆ.

ನಟ ದರ್ಶನ್ ಪರ ವಕೀಲರ ವಾದವೇನು?
ದರ್ಶನ್ ಪರ ವಾದ ಮಂಡಿಸಿದ ವಕೀಲ ಸುನೀಲ್ ಕುಮಾರ್ ಎಸ್, "2008ರಿಂದಲೇ ಕಾನೂನುಬದ್ಧವಾಗಿ ಬಂದೂಕು ಪರವಾನಗಿ ಹೊಂದಿದ್ದಾರೆ ಪ್ರಕರಣವೊಂದರಲ್ಲಿ ಅವರ ಹೆಸರಿದೆ ಎನ್ನುವ ಕಾರಣಕ್ಕೆ ಗನ್ ಪರವಾನಗಿ ಅಮಾನತು ಮಾಡಿರುವುದು ಸರಿಯಲ್ಲ. ಈಗಾಗಲೇ ಅವರು ಗನ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ" ಎಂದು ವಾದಿಸಿದರು.
ದರ್ಶನ್ ಗನ್ ಪರವಾನಗಿ ಅಮಾನತು ಆದೇಶಕ್ಕೆ ತಡೆ
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, "ಕೇವಲ ಹೆಸರಿನ ಕಾರಣಕ್ಕಾಗಿ ಈ ಕ್ರಮ ಕೈಗೊಂಡಿಲ್ಲ, ಅವರ ಮೇಲೆ ಗಂಭೀರ ಆರೋಪ ಇರುವ ಕಾರಣಕ್ಕೆ ಪೊಲೀಸರು ಕ್ರಮ ಜರುಗಿಸಿದ್ದಾರೆ" ಎಂದು ಅಭಿಪ್ರಾಯಪಟ್ಟಿತು. ಆದರೂ, ವಿಚಾರಣೆಯನ್ನು ಪರಿಶೀಲಿಸಿದ ನ್ಯಾಯಪೀಠವು ಅಮಾನತು ಆದೇಶಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮಧ್ಯಂತರ ಆದೇಶದಿಂದಾಗಿ ಗನ್ ಪರವಾನಗಿ ವಿಚಾರದಲ್ಲಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಆದರೆ, ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಎಂದು ಕಾದುನೋಡಬೇಕಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಈ ಪ್ರಕರಣ ರಾಜ್ಯಾದ್ಯಂತ ಗಮನ ಸೆಳೆಯಿತು. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಮತ್ತು ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ ಎಂದು ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಇನ್ನೂ ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದರೆ, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ.












Click it and Unblock the Notifications