CCL 2025 Semifinal: ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ
ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2025ರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಮೈಸೂರಿನಲ್ಲಿ ಮಾರ್ಚ್ 1, 2 ರಂದು ಶನಿವಾರ ಮತ್ತು ಭಾನುವಾರ ನಡೆಯಲಿವೆ. ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಪಂದ್ಯದಲ್ಲಿ ಚೆನ್ನೈ ರ್ಹಿನೋಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಈಗಾಗಲೇ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಶುಕ್ರವಾರ ಕಿಚ್ಚ ಸುದೀಪ್ ಮತ್ತು ತಂಡದ ಆಟಗಾರರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಪಂದ್ಯದಲ್ಲೂ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಲೀಗ್ ಹಂತದಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ಗೆಲುವು ಸಾಧಿಸಿತ್ತು. ಪಂಜಾಬ್ ದಿ ಶೇರ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮಾತ್ರ 2 ರನ್ಗಳ ಅಂತರದಲ್ಲಿ ಸೋಲು ಕಂಡಿತ್ತು.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಕರ್ನಾಟಕ ಬುಲ್ಡೋಜರ್ಸ್ ಮೂರನೇ ಸ್ಥಾನದಲ್ಲಿರುವ ಚೆನ್ನೈ ರ್ಹಿನೋಸ್ ವಿರುದ್ಧ ಸೆಣೆಸಲು ಸಜ್ಜಾಗಿದೆ. ಮಾರ್ಚ್ 1, ಶನಿವಾರ ಸಂಜೆ 6.30ಕ್ಕೆ ಈ ಪಂದ್ಯ ಆರಂಭವಾಗಲಿದೆ.
ತಂಡದ ಆಟಗಾರರ ಜೊತೆ ದೇವಸ್ಥಾನಕ್ಕೆ ಭೇಟಿ
ಮೈಸೂರಿನಲ್ಲಿ ಅಭ್ಯಾಸ ಮಾಡುತ್ತಿರುವ ಕಿಚ್ಚ ಸುದೀಪ್ ಪಡೆ ಶುಕ್ರವಾರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ತಂಡದ ಗೆಲುವಿಗಾಗಿ ತಂಡದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು. ಕಿಚ್ಚ ಸುದೀಪ್ ಜೊತೆ ಪ್ರಿಯಾ ಸುದೀಪ್ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಸುದೀಪ್ ಜೊತೆ ಸುನಿಲ್ ರಾವ್, ಡಾರ್ಲಿಂಗ್ ಕೃಷ್ಣ, ರಾಜೀವ್ ಹನು, ಮಂಜುನಾಥ್ ಗೌಡ ಸೇರಿದಂತೆ ಹಲವರು ಇದ್ದರು.
ಮೈಸೂರಿನ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು ಈಗಾಗಲೇ ಎಲ್ಲಾ ಟಿಕೆಟ್ಗಳು ಸೋಲ್ಡ್ ಔಟ್ ಆಗಿದ್ದು, ನೆಚ್ಚಿನ ನಟರ ಕ್ರಿಕೆಟ್ ನೋಡಲು ಅಭಿಮಾನಿಗಳು ಉತ್ಸಾಹದಿಂದ ಕಾಯುತ್ತಿದ್ದಾರೆ.
ಕರ್ನಾಟಕ ಬುಲ್ಡೋಜರ್ಸ್ ತಂಡ
ಸುದೀಪ್ (ನಾಯಕ), ರಾಜೀವ್ ಹನು, ಡಾರ್ಲಿಂಗ್ ಕೃಷ್ಣ, ಜಯರಾಮ್ ಕಾರ್ತಿಕ್, ಗೋಲ್ಡನ್ ಸ್ಟಾರ್ ಗಣೇಶ್, ಮಂಜುನಾಥ್ ಗೌಡ, ಕರಣ್ ಆರ್ಯನ್,ಸುನೀಲ್ ರಾವ್, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ಅನೂಪ್ ಭಂಡಾರಿ.












Click it and Unblock the Notifications