Darshan Thoogudeepa: ಸುಪ್ರೀಂನಲ್ಲಿ ಇಂದು ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರಿಗೆ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ (ಏ.2) ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಜೈಲಿನಿಂದ ಹೊರ ಬಂದ ಬಳಿಕ ದೇವಸ್ಥಾನ, ಚಿಕಿತ್ಸೆ, ಶೂಟಿಂಗ್ ಎಂದು ಬ್ಯೂಸಿ ಆಗಿದ್ದಾರೆ. ಆದರೆ ಇವರ ಮೇಲೆರುವ ರೇಣುಕಾಸ್ವಾಮಿ ಕೊಲೆ ಆರೋಪ ಇವರ ಬೆನ್ನು ಬಿಡುವಂತೆ ಕಾಣಿಸುತ್ತಿಲ್ಲ. ಕಳೆದ ಕೆಲ ದಿನಗಳ ಹಿಂದೆ ದರ್ಶನ್ ಕೊಲೆ ಪ್ರಕರಣದ ಆರೋಪಿಯೊಂದಿಗೆ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಫೋಟೋಗಳು ವೈರಲ್ ಆಗಿದ್ದವು.

ಇದೀಗ ಹೈಕೋರ್ಟ್ ದರ್ಶನ್ ಆಂಡ್ ಗ್ಯಾಂಗ್ಗೆ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಲಿದೆ. ಇದರಿಂದ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಆಂಡ್ ಗ್ಯಾಂಗ್ಗೆ ನೋಟೀಸ್ ಜಾರಿ ಮಾಡಿತ್ತು. ಇಂದಿನ ವಿಚಾರಣೆಯಲ್ಲಿ ದರ್ಶನ್ ಪವಿತ್ರಾ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.
ಹೈಕೋರ್ಟ್ನಲ್ಲಿ ಜಾಮೀನು ಪಡೆದಂತೆ ಸುಪ್ರೀಂ ಕೋರ್ಟ್ನಲ್ಲೂ ಗೆಲ್ಲಲು ದರ್ಶನ್ ಖ್ಯಾತ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದಾರೆ. ಜೊತೆಗೆ ಅವರಿಗೆ ಹೈಕೋರ್ಟ್ನಲ್ಲಿ ನಡೆದ ಎಲ್ಲಾ ದಾಖಲೆಗಳನ್ನೂ ನೀಡಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಬೆಳವಣಿಗೆಗಳು ಸದ್ಯಕ್ಕೆ ಕಂಡು ಬಂದಿಲ್ಲ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ನಟಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್ ವೈದ್ಯಕೀಯ ಕಾರಣಗಳಿಗಾಗಿ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದಾರೆ. ಮೊದಲು ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದರು. ನಂತರ ಹೈಕೋರ್ಟ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಸಂಪೂರ್ಣ ಅವರ ಗ್ಯಾಂಗ್ಗೆ ಜಾಮೀನು ಮಂಜೂರು ಮಾಡಿತ್ತು.
ಏನಿದು ಪ್ರಕರಣ?
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ ಸ್ನೇಹಿತೆ ನಟಿ ಪವಿತ್ರಾ ಗೌಡ ಅವರಿಗೆ ಅವಾಚ್ಯ ಸಂದೇಶಗಳನ್ನು ಕಳುಹಿಸಿದ್ದರು ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಲಾಗಿದೆ ಎನ್ನುವ ಆರೋಪವಿದೆ. ಈ ಆರೋಪದ ಮೇಲೆ ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಒಟ್ಟು 17 ಜನರನ್ನು ಬಂಧಿಸಿತ್ತು. ಇವರೆಲ್ಲರೂ ಬಿಡುಗಡೆಯಾಗಿದ್ದು ಈ ಪೈಕಿ 7 ಆರೋಪಿಗಳಿಗೆ ಸುಪ್ರೀಂ ನೋಟೀಸ್ ಜಾರಿ ಮಾಡಿದೆ.
ಇದೀಗ ದರ್ಶನ್ ಹಾಗೂ ಗ್ಯಾಂಗ್ಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗುತ್ತದೆ. ಇದಕ್ಕೆ ದರ್ಶನ್ ಹಾಜರಾಗುತ್ತಾರಾ? ಸುಪ್ರೀಂನಲ್ಲಿ ಯಾವೆಲ್ಲಾ ವಾದ ವಿವಾದಗಳು ನಡೆಯಲಿದೆ? ವಿಚಾರಣೆ ಮುಂದೂಡಲಾಗುತ್ತಾ? ಸುಪ್ರೀಂ ಈ ಪ್ರಕರಣದಲ್ಲಿ ಯಾವ ತೀರ್ಪು ನೀಡುತ್ತದೆ ಎಂದು ಕಾದು ನೋಡಬೇಕಿದೆ.












Click it and Unblock the Notifications