Explained: ಕೃಷಿ ಕಾಯ್ದೆ ರದ್ದುಗೊಳಿಸಿದ ಪ್ರಧಾನಿಗೆ ರೈತರ 6 ಬೇಡಿಕೆಗಳ ಪತ್ರ
ನವದೆಹಲಿ, ನವೆಂಬರ್ 22: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆಗೆ ಅಂಗೀಕಾರವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಮಧ್ಯೆ ಪ್ರತಿಭಟನಾನಿರತ ರೈತ ಸಂಘಟನೆಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರವೊಂದನ್ನು ಬರೆದಿವೆ.
ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಹಕ್ಕು ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಈಡೇರಿಸುವವರೆಗೂ ತಮ್ಮ ಹೋರಾಟವನ್ನು ಬಿಡುವುದಿಲ್ಲ ಎಂದು ರೈತ ಸಂಘಟನೆಗಳು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಎಚ್ಚರಿಕೆ ನೀಡಿವೆ.
ಕೃಷಿ ಕಾಯ್ದೆಗಳ ರದ್ದುಗೊಳಿಸುವುದು ಇಂದಿನ್ನೂ ಘೋಷಣೆಯಷ್ಟೇ: ಇಲ್ಲಿಂದ ಮುಂದೇನು ಕಥೆ?
"ವಿವಾದಿತ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಅನುಮೋದನೆಯನ್ನು ಸಂಪುಟವು ನವೆಂಬರ್ 24ರ ಬುಧವಾರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮಸೂದೆಯನ್ನು ಮುಂಬರುವ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ರೈತರಿಂದ ನವೆಂಬರ್ 27ರಂದು ಪ್ರಮುಖ ಸಭೆ
ದೆಹಲಿಯ ಸಿಂಘು ಗಡಿಯಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಪತ್ರಿಕಾಗೋಷ್ಠಿಯನ್ನು ನಡೆಸಿತು. ರೈತ ಸಂಘಗಳು ಎಂದಿನ ವೇಳಾಪಟ್ಟಿಯಂತೆ ವಿವಿಧ ಪ್ರತಿಭಟನೆಗಳನ್ನು ಮುಂದುವರಿಸಲಿವೆ. ತದನಂತರ ನವೆಂಬರ್ 27ರಂದು ಪ್ರಮುಖ ಸಭೆ ನಡೆಸಲಾಗುವುದು ಎಂದು ಹೇಳಿದೆ.
ಸೋಮವಾರ(ಇಂದು) ಸಂಯುಕ್ತ ಕಿಸಾನ್ ಮೋರ್ಚಾ ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್ ನಡೆಸಲು ಕರೆ ನೀಡಿದ್ದು, ಭಾರತೀಯ ಕಿನಾಸ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಸೇರಿದಂತೆ ಹಲವು ರೈತ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ನವೆಂಬರ್ 24ರಂದು ಸರ್ ಛೋಟು ರಾಮ್ ಜನ್ಮದಿನದ ಹಿನ್ನೆಲೆ ರೈತ ಒಕ್ಕೂಟಗಳು ಕಿಸಾನ್ ಮಜ್ದೂರ್ ಸಂಘರ್ಷ್ ದಿವಸ್ ಅನ್ನು ಆಚರಿಸಲಿವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಪ್ರತಿದಿನ ಟ್ರ್ಯಾಕ್ಟರ್ ನಲ್ಲಿ 500 ರೈತರನ್ನು ಕಳುಹಿಸಲು ಯೋಜನೆ
ನವೆಂಬರ್ 26ರಂದು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಒಂದು ವರ್ಷ ಪೂರೈಸಲಿದೆ. ಈ ಹಿನ್ನೆಲೆ ಪಂಜಾಬ್ ಮತ್ತು ಹರಿಯಾಣದಿಂದ ಮೊದಲ ಹಂತದಲ್ಲಿ ಸಿಂಘು ಗಡಿಗೆ ಆಗಮಿಸಲಿರುವ ರೈತರು ವರ್ಷಾಚರಣೆ ಮಾಡಲಿದ್ದಾರೆ. ಅಂದು ರಾಜ್ಯಗಳಾದ್ಯಂತ ಟ್ರ್ಯಾಕ್ಟರ್ ರ್ಯಾಲಿಗಳೊಂದಿಗೆ 'ದಿಲ್ಲಿ ಬಾರ್ಡರ್ ಮೋರ್ಚೆ ಪರ್ ಚಲೋ' ನಡೆಸಲಿದ್ದಾರೆ. ತದನಂತರ ನವೆಂಬರ್ 29 ರಿಂದ ದೆಹಲಿಯಲ್ಲಿ ಸಂಸತ್ ಚಳಿಗಾಲ ಅಧಿವೇಶನದಲ್ಲಿ ಪ್ರತಿಭಟಿಸಲು ಪ್ರತಿದಿನ 500 ಪ್ರತಿಭಟನಾಕಾರರನ್ನು ಟ್ರ್ಯಾಕ್ಟರ್ಗಳಲ್ಲಿ ಸಂಸತ್ತಿಗೆ ಕಳುಹಿಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.
ಪ್ರಧಾನಮಂತ್ರಿ ಮೋದಿಯವರಿಗೆ ರೈತರ ಪತ್ರ
"ನಾವು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರವನ್ನು ಬರೆದಿದ್ದೇವೆ. MSP ಗಾಗಿ ಕಾನೂನು ಆದೇಶ ಸೇರಿದಂತೆ ಹಲವಾರು ವಿಷಯಗಳನ್ನು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಂಎಸ್ಪಿ ಕುರಿತು ರಚಿಸಲಾಗುತ್ತಿರುವ ಸಮಿತಿಯ ವಿವರಗಳನ್ನು ಪತ್ರದಲ್ಲಿ ಚರ್ಚಿಸಲಾಗಿದೆ. ಇದರ ಜೊತೆಗೆ ವಿದ್ಯುತ್ ತಿದ್ದುಪಡಿ ಮಸೂದೆ ಪತ್ರದ ಪ್ರಮುಖ ಅಂಶವಾಗಿದೆ. ಲಖಿಂಪುರ ಖೇರಿ ಘಟನೆ ಮತ್ತು ಕೇಂದ್ರ ಸಚಿವ (ಕೇಂದ್ರ MoS ಅಜಯ್ ಮಿಶ್ರಾ) ವಿರುದ್ಧ ಕಠಿಣ ಕ್ರಮವನ್ನು ಸಹ ನಮ್ಮ ಬೇಡಿಕೆಗಳಲ್ಲಿ ಉಲ್ಲೇಖಿಸಲಾಗಿದೆ," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಹೇಳಿದ್ದಾರೆ.
ಪ್ರಧಾನಿಗೆ ಬರೆದ ಪತ್ರದಲ್ಲಿ ರೈತರು ಉಲ್ಲೇಖಿಸಿದ ಪ್ರಮುಖಾಂಶಗಳು
* MSP ಮೇಲೆ ತಮ್ಮ ಪ್ರಮುಖ ಬೇಡಿಕೆಯನ್ನು ಎತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ, ಪತ್ರದಲ್ಲಿ ಹೀಗೆ ಹೇಳಿದೆ: "ಸಮಗ್ರ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು (C2+50%) ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರ ಕಾನೂನುಬದ್ಧ ಹಕ್ಕನ್ನು ಮಾಡಬೇಕು. ಇದರಿಂದ ದೇಶದ ಪ್ರತಿಯೊಬ್ಬ ರೈತರ ಬೆಳೆಗೆ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆಯನ್ನಾದರೂ ಖಾತ್ರಿಪಡಿಸಿಕೊಳ್ಳಬಹುದು.
* "11 ಸುತ್ತಿನ ಮಾತುಕತೆಯ ನಂತರ, ನೀವು ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯ ಘೋಷಣೆಯ ಮಾರ್ಗವನ್ನು ಆರಿಸಿಕೊಂಡಿದ್ದೀರಿ ಎಂದು ನಾವು ಗಮನಿಸಿದ್ದೇವೆ; ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ.
* ವಿದ್ಯುತ್ ಬಿಲ್ ಮತ್ತು ವಾಯು ಮಾಲಿನ್ಯದ ಮೇಲೆ ರೈತರ ವಿರುದ್ಧ ಯಾವುದೇ ದಂಡದ ಕ್ರಮವನ್ನು ರದ್ದುಪಡಿಸುವ ಬೇಡಿಕೆಯ ಹೊರತಾಗಿ, ಪತ್ರದಲ್ಲಿ ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ಉಲ್ಲೇಖಿಸಲಾಗಿದೆ. ಅಂದು ಒಂದು ವಾಹನ ಸೇರಿದಂತೆ ಮೂರು ವಾಹನಗಳ ಬೆಂಗಾವಲು ಡಿಕ್ಕಿ ಹೊಡೆದು ನಾಲ್ವರು ಪ್ರತಿಭಟನಾಕಾರರು ಸಾವನ್ನಪ್ಪಿದರು. "ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಟೆನಿ ಇನ್ನೂ ಸ್ವತಂತ್ರವಾಗಿ ತಿರುಗಾಡುತ್ತಿದ್ದಾರೆ. ನಿಮ್ಮ ಸಂಪುಟದಲ್ಲೇ ಸಚಿವರಾಗಿಯೂ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಬೇಕು ಮತ್ತು ಬಂಧಿಸಬೇಕು," ಎಂದು ಪತ್ರದಲ್ಲಿ ತಿಳಿಸಲಾಗಿದೆ.
* ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ನೂರಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರ ರೈತರ ವಿರುದ್ಧ ತಕ್ಷಣದ ಕ್ರಮವನ್ನು ಹಿಂಪಡೆಯುವುದು.
* ಈ ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು.
* "ಪ್ರಧಾನಿಯವರೇ, ಈಗ ನಾವು ಮನೆಗೆ ಹಿಂತಿರುಗಬೇಕು ಎಂದು ರೈತರಿಗೆ ನೀವು ಮನವಿ ಮಾಡಿದ್ದೀರಿ. ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ನಾವು ಬಯಸುತ್ತೇವೆ. ಈ ಇತರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಕೂಡಲೇ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು," ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪ್ರಧಾನಿ ಮೋದಿಯವರಿಂದ ಕೃಷಿ ಕಾಯ್ದೆ ರದ್ದು ಘೋಷಣೆ
ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ನವೆಂಬರ್ 19ರಂದು ಪ್ರಧಾನಿ ಮೋದಿ ಘೋಷಿಸಿದರು. ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದರು.
ರದ್ದುಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.
Recommended Video