ಕರ್ನಾಟಕ; 2021ರಲ್ಲಿ ಎದುರಾಗುವ ಉಪ ಚುನಾವಣೆಗಳು
2020ನೇ ವರ್ಷ ಮುಗಿಯುತ್ತಾ ಬಂದಿದೆ. ವಿಶ್ವವನ್ನೇ ಕೊರೊನಾ ಕಾಡಿದ ವರ್ಷವಿದು. ಈ ವರ್ಷ ಸರಿಯಿಲ್ಲ, ಬೇಗ ಕಳೆಯಲಿ ಎಂದು ಹಾರೈಸಿದವರು ಕೋಟ್ಯಾಂತರ ಜನ. ಕೋವಿಡ್ ಭೀತಿಯ ನಡುವೆಯೇ ಈ ವರ್ಷ ಕರ್ನಾಟಕ ಹಲವು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ.
ಕರ್ನಾಟಕದಲ್ಲಿ ಈ ವರ್ಷದ ಅಂತ್ಯದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯಿತು. 2018ರ ವಿಧಾನಸಭೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿರಲಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಕ್ಷೇತ್ರಗಳು ಬಿಜೆಪಿ ಪಾಲಾಗಿವೆ.
ರಾಜ್ಯದಲ್ಲಿ ಬಿಜೆಪಿಯ ಸರ್ಕಾರವೇ ಇದೆ. ಸಂಪೂರ್ಣ ಬಹುಮತವಿರುವ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. 77 ವರ್ಷದ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳು. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತದೆ ಎಂಬ ಚರ್ಚೆಗಳು ಈ ವರ್ಷ ಹಲವು ಬಾರಿ ಬಿಸಿ-ಬಿಸಿಯಾಗಿ ನಡೆದಿವೆ. ಬಳಿಕ ಅವುಗಳು ಅಲ್ಲಿಯೇ ತಣ್ಣಗಾಗಿವೆ.

2021ರ ಮೊದಲ ಮೂರು ತಿಂಗಳಿನಲ್ಲಿಯೇ ಕರ್ನಾಟಕದಲ್ಲಿ ಹಲವಾರು ರಾಜಕೀಯ ಬದಲಾವಣೆಗಳು ನಡೆಯಲಿವೆ. ಅವುಗಳಲ್ಲಿ ಉಪ ಚುನಾವಣೆಗಳು ಸೇರಿವೆ. ಒಂದು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಬೆಂಗಳೂರು ಮಹಾನಗರದಲ್ಲಿ ಬಿಬಿಎಂಪಿ ಚುನಾವಣೆಯೂ ನಡೆಯಬೇಕಿದೆ.
ಕೇಂದ್ರ ಚುನಾವಣಾ ಆಯೋಗ ಮೂರು ಕ್ಷೇತ್ರದ ಉಪ ಚುನಾವಣೆಗಳಿಗೆ ಇನ್ನೂ ದಿನಾಂಕವನ್ನು ನಿಗದಿ ಮಾಡಿಲ್ಲ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಉಪ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿವೆ. ಜೆಡಿಎಸ್ ಪಕ್ಷ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಘೋಷಣೆ ಮಾಡಿದೆ.
ಬಸವಕಲ್ಯಾಣ : ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಈಗಾಗಲೇ ಉಪ ಚುನಾವಣೆ ಸಿದ್ಧತೆಯನ್ನು ಆರಂಭಿಸಿವೆ.
ಬಸವಕಲ್ಯಾಣ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಬಿ.ನಾರಾಯಣರಾವ್ ಗೆಲುವು ಸಾಧಿಸಿದ್ದರು. 67 ವರ್ಷದ ನಾರಾಯಣರಾವ್ ಸೆಪ್ಟೆಂಬರ್ನಲ್ಲಿ ನಿಧನ ಹೊಂದಿದ್ದಾರೆ. ಇದರಿಂದಾಗಿ ಉಪ ಚುನಾವಣೆ ಎದುರಾಗಿದೆ.
ಕಳೆದ ಚುನಾವಣೆಯಲ್ಲಿ ಬಿ. ನಾರಾಯಣ ರಾವ್ 61,425 ಮತಗಳನ್ನು ಪಡೆದು ವಿಧಾನಸಭೆಗೆ ಆರಿಸಿ ಬಂದಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153 ಮತ ಪಡೆದಿದ್ದರು. ಜೆಡಿಎಸ್ನಿಂದ ಪಿ. ಜಿ. ಆರ್. ಸಿಂಧ್ಯಾ ಕಣಕ್ಕಿಳಿದು 31,414 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.
ಮಸ್ಕಿ ಉಪ ಚುನಾವಣೆ; ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಜೊತೆ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರವಿದ್ದಾಗ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಬಿಜೆಪಿ ಸೇರಿದ್ದರು.
ಮಸ್ಕಿ ಕ್ಷೇತ್ರಕ್ಕೆ ಶಾಸಕರು ಇಲ್ಲದೇ ಸುಮಾರು ಒಂದೂವರೆ ವರ್ಷಗಳು ಕಳೆದಿವೆ. 2018ರ ಚುನಾವಣೆ ಕುರಿತು ತಕರಾರು ಅರ್ಜಿಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದರಿಂದ ಇದುವರೆಗೂ ಚುನಾವಣೆ ನಡೆಸಿರಲಿಲ್ಲ. ಈಗ ಎಲ್ಲಾ ಕಾನೂನು ಅಡ್ಡಿ ನಿವಾರಣೆಯಾಗಿದೆ.
ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿ ಆಗುವುದು ಖಚಿತವಾಗಿದೆ. 2018ರಲ್ಲಿ ಪ್ರತಾಪ್ ಗೌಡ ಪಾಟೀಲ್ ಎದುರಾಳಿಯಾಗಿದ್ದ ಬಿಜೆಪಿ ಅಭ್ಯರ್ಥಿ ಬಸನಗೌಡ ತುರುವಿಹಾಳ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಇದರಿಂದಾಗಿ ಉಪ ಚುನಾವಣೆ ಕಣ ಕುತೂಹಲಕ್ಕೆ ಕಾರಣವಾಗಿದೆ.
2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ (ಕಾಂಗ್ರೆಸ್) 60,387 ಮತಗಳನ್ನು ಪಡೆದು ಜಯಗಳಿಸಿದ್ದರು. ಬಸನಗೌಡ ತುರುವಿಹಾಳ (ಬಿಜೆಪಿ) 60,174 ಮತಗಳನ್ನು ಪಡೆದು 213 ಮತಗಳ ಅಂತರದಿಂದ ಸೋತಿದ್ದರು. ಜೆಡಿಎಸ್ನಿಂದ ರಾಜಾ ಸೋಮನಾಥ ನಾಯಕ್ ಕಣಕ್ಕಿಳಿದು 11,392 ಮತಗಳನ್ನು ಪಡೆದಿದ್ದರು.
ಬೆಳಗಾವಿ ಉಪ ಚುನಾವಣೆ; ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ 2021ರಲ್ಲಿ ಉಪ ಚುನಾವಣೆ ನಡೆಯಬೇಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್ ಅಂಗಡಿ ಕ್ಷೇತ್ರದಲ್ಲಿ ಗೆದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರು ಆಗಿದ್ದರು.
ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಸೆಪ್ಟೆಂಬರ್ 23ರಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
2019ರ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿಯ ಸುರೇಶ್ ಅಂಗಡಿ 761,991 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಡಾ. ವಿ.ಎಸ್ ಸಾಧುನವರ್ 370,687 ಮತಗಳನ್ನು ಪಡೆದಿದ್ದರು.
ಈ ಉಪ ಚುನಾವಣೆಗಳ ಜೊತೆ 2021ರಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. 198 ವಾರ್ಡ್ಗಳನ್ನು ಹೊಂದಿರುವ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಗಾಗಲೇ ಆದೇಶ ನೀಡಿದೆ.












Click it and Unblock the Notifications