ಜಗತ್ತಿನಾದ್ಯಂತ ಮತ್ತೆ ತುರ್ತು ಪರಿಸ್ಥಿತಿ, ಕಾರಣ ಆಘಾತಕಾರಿ!
ಈಗಿನ್ನೂ ಜಗತ್ತು ಕೊರೊನಾ ಕಂಟಕದಿಂದ ಬಚಾವ್ ಆಗುತ್ತಿದೆ. ಆದರೆ ಈ ಹೊತ್ತಲ್ಲೇ ಮತ್ತೊಂದು ಶಾಕ್ ಸಿಕ್ಕಿದೆ. ಹವಾಮಾನ ವೈಪರಿತ್ಯ ಹಿನ್ನೆಲೆ ಎಲ್ಲಾ ದೇಶಗಳು ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ವಿಶ್ವಸಂಸ್ಥೆ ಹೇಳಿದೆ. ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರೆಸ್ ಕರೆ ನೀಡಿದ್ದಾರೆ. ಪ್ಯಾರಿಸ್ ಪರಿಸರ ಸಮ್ಮೇಳನ 5ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಗುಟೆರೆಸ್ ಈ ಕರೆ ನೀಡಿದ್ದಾರೆ. 2021ರಲ್ಲಿ ಮುಂದಿನ ಸಭೆ ನಡೆಯಲಿದೆ ಎಂದು ಗುಟೆರೆಸ್ ತಿಳಿಸಿದ್ದಾರೆ.
ಹವಾಮಾನ ವೈಪರಿತ್ಯ ಮಿತಿಮೀರಿದ್ದು, ತಕ್ಷಣ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಜಾಗತಿಕ ಸಮುದಾಯದ ಎದುರು ಗುಟೆರೆಸ್ ಮನವಿ ಮಾಡಿದ್ದಾರೆ. ಇಡೀ ಜಗತ್ತಿನಲ್ಲಿ ಪ್ರತಿಯೊಂದು ದೇಶವೂ ಹವಾಮಾನ ವೈಪರಿತ್ಯದ ಸಮಸ್ಯೆ ಎದುರಿಸುತ್ತಿದೆ. ಯಾರಾದರೂ ನಾವು ಸಮಸ್ಯೆ ಎದುರಿಸುತ್ತಿಲ್ಲ ಎಂದು ಹೇಳುವುದಕ್ಕೆ ಸಾಧ್ಯ ಇದೆಯಾ..? ಎಂದು ಗುಟೆರೆಸ್ ಪ್ರಶ್ನಿಸಿದ್ದಾರೆ.
ದುರಾಸೆಗೆ ಬಲಿಯಾಗುತ್ತಿದೆ ಭೂಮಿ, ಪೆಂಗ್ವಿನ್ ಸಂತತಿಯೂ ಸರ್ವನಾಶ
ಹೀಗಾಗಿ ತಕ್ಷಣ ತುರ್ತು ಪರಿಸ್ಥಿತಿ ಘೋಷಿಸಿ, ತುರ್ತು ಪರಿಸ್ಥಿತಿ ಘೋಷಿಸುವ ಸಮಯ ಬಂದಿದೆ ಎಂದಿದ್ದಾರೆ ಗುಟೆರೆಸ್. ಸದ್ಯ ವಿಶ್ವಸಂಸ್ಥೆ ನೀಡಿರುವ ಹೇಳಿಕೆ ಗಮನಿಸಿದರೆ, ಪರಿಸ್ಥಿತಿ ಗಂಭೀರ ಅನ್ನಿಸುತ್ತಿದೆ.
ಹಿಮ ಪದರ ಕರಗುವ ಆತಂಕ
2020ರ ಬಗ್ಗೆ ಬೆಚ್ಚಿಬೀಳುವ ಸಂಗತಿಯೊಂದನ್ನ ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ. ಮಾನವ ಬದುಕಿನ ಇತಿಹಾಸದಲ್ಲಿ 2020- 3ನೇ ಅತಿಹೆಚ್ಚು ತಾಪಮಾನ ತೋರಿದ ವರ್ಷವಾಗಿದೆ. 2016, 2019ರ ನಂತರ 2020 ಅತಿ ಹೆಚ್ಚಾದ ತಾಪಮಾನ ಹೊಂದಿರುವ ವರ್ಷವಾಗಿದೆ. ತಾಪಮಾನ ಏರಿಕೆ ಕಡಿವಾಣಕ್ಕೆ ಎಷ್ಟೇ ಮುತುವರ್ಜಿ ವಹಿಸಿದರೂ ಪ್ರಯೋಜನವಾಗುತ್ತಿಲ್ಲ.
ತಾಪಮಾನ ಏರಿಕೆ ತಡೆಯಲು ಪ್ಯಾರಿಸ್ ಒಪ್ಪಂದಂತಹ ಪ್ರಯತ್ನ ವಿಫಲವಾಗಿದೆ. 2020ರಲ್ಲಿ ತಾಪಮಾನ 1.2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದ್ರೆ ರಷ್ಯಾದ ಸೈಬೀರಿಯಾ ಪ್ರಾಂತ್ಯದಲ್ಲಿ ಅತಿಹೆಚ್ಚು ತಾಪಮಾನ ಏರಿಕೆಯಾಗಿದೆ. ಸೈಬೀರಿಯಾ ಪ್ರಾಂತ್ಯದಲ್ಲಿ 2020ರಲ್ಲಿ 5 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಕಂಡಿದೆ. ಇದು ರಷ್ಯಾದ ಇತಿಹಾಸದಲ್ಲೇ ಭಯಾನಕ ವರ್ಷವಾಗಿದೆ. ಸೈಬೀರಿಯಾದಲ್ಲಿ ಈ ರೀತಿ ತಾಪಮಾನ ಏರಿಕೆಯಾಗುತ್ತಿದ್ದರೆ ಉತ್ತರ ಧ್ರುವ ಪ್ರದೇಶದ ಹಿಮ ಪದರ ಪೂರ್ತಿ ಕರಗುವ ಆತಂಕ ಎದುರಾಗಿದೆ.
ಸೈಬೀರಿಯಾ ಪ್ರಾಂತ್ಯದಲ್ಲಿ ಏನಾಗುತ್ತಿದೆ..?
ಜಗತ್ತಿಗೆ ಶೇಕಡ 10ರಷ್ಟು ಆಕ್ಸಿಜೆನ್ ಪೂರೈಕೆ ಆಗುತ್ತಿರುವುದು ರಷ್ಯಾದ ಕಾಡುಗಳಿಂದ. ಅದರಲ್ಲೂ ರಷ್ಯಾದ ಅರಣ್ಯ ಸಂಪತ್ತು ಬಹುಪಾಲು ಅವಲಂಬಿಸಿರುವುದು ಸೈಬೀರಿಯಾ ಮೇಲೆ. ಆದರೆ ಗ್ಲೋಬಲ್ ವಾರ್ಮಿಂಗ್ನ ವ್ಯತಿರಿಕ್ತ ಪರಿಣಾಮ ಹೆಚ್ಚಾಗುತ್ತಿದೆ. ಸೈಬೀರಿಯಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ಮಾನವನ ವಿನಾಶಕ್ಕೆ ನಾಂದಿ ಹಾಡಿದಂತಿದೆ. ಏಕೆಂದರೆ ಸೈಬೀರಿಯಾ ಪ್ರಾಂತ್ಯದಲ್ಲಿ ಹಬ್ಬಿರುವ ಅರಣ್ಯ ಪ್ರದೇಶ ಹಾಗೂ ಅಲ್ಲಿನ ಮಣ್ಣು ಭಾರಿ ಪ್ರಮಾಣದಲ್ಲಿ ಕಾರ್ಬನ್ ಸಂಯುಕ್ತಗಳನ್ನು ಒಳಗೊಂಡಿರುತ್ತದೆ. ಇದೀಗ ಹೊತ್ತಿರುವ ಕಾಡ್ಗಿಚ್ಚಿನ ಪರಿಣಾಮ ಊಹೆಗೂ ನಿಲುಕದಷ್ಟು ಕಾರ್ಬನ್ ಡೈಆಕ್ಸೈಡ್ ಹಾಗೂ ಕಾರ್ಬನ್ ಮೊನಾಕ್ಸೈಡ್ ವಾತಾವರಣ ಸೇರುತ್ತಿದೆ. ಈಗಾಗಲೇ 250 ಮೆಗಾಟನ್ ಕಾರ್ಬನ್ ಸೈಬೀರಿಯಾ ಕಾಡ್ಗಿಚ್ಚಿನಿಂದ ವಾತಾವರಣ ಸೇರಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇಕಡ 35ರಷ್ಟು ಹೆಚ್ಚಾಗಿದೆ.
ಚಳಿ ಚಳಿ ತುಂಬಾ ಚಳಿ..!
ಸೈಬೀರಿಯಾ ರಷ್ಯಾದ ಪ್ರಮುಖ ಪ್ರಾಂತ್ಯಗಳಲ್ಲಿ ಒಂದು. ಸೈಬೀರಿಯಾ ಉತ್ತರ ಧ್ರುವ ಪ್ರದೇಶದಿಂದ ಕೇವಲ 6 ಸಾವಿರ ಕಿಲೋಮೀಟರ್ ದೂರದಲ್ಲಿದೆ. ಈಗ ನೀವೆ ಊಹಿಸಿ, ಇಲ್ಲಿ ಚಳಿಯ ಪ್ರಮಾಣ ಹೇಗಿರಬಹುದು ಎಂಬುದನ್ನ. ಇಲ್ಲಿ ವರ್ಷವೆಲ್ಲಾ ಚಳಿಯೇ ಆವರಿಸಿರುತ್ತದೆ. ಅದೆಷ್ಟರಮಟ್ಟಿಗೆ ಎಂದರೆ ಬೇಸಿಗೆ ಬಂದರು ಕೂಡ ಉಷ್ಣಾಂಶ 15 ಡಿಗ್ರಿ ಮೀರುವುದಿಲ್ಲ. ಹಾಗಾದರೆ ಚಳಿಗಾಲವನ್ನು ನೀವೇ ಊಹೆ ಮಾಡಿಕೊಳ್ಳಿ.
ಉದಾಹರಣೆಗೆ 1884ರಲ್ಲಿ ದಾಖಲಾಗಿದ್ದ 7.8 ಡಿಗ್ರಿ ಉಷ್ಣಾಂಶ ರಾಜ್ಯ ರಾಜಧಾನಿಯ ಇತಿಹಾಸದಲ್ಲಿ ಅಂತ್ಯಂತ ಕನಿಷ್ಠವಾಗಿದೆ. ಇಷ್ಟು ಚಳಿಗೆ ಇಡೀ ಬೆಂಗಳೂರು ನಡುಗಿ ಹೋಗಿತ್ತು. ಹಾಗೆ ನೋಡಿದರೆ ಸೈಬೀರಿಯಾ ಪ್ರಾಂತ್ಯದಲ್ಲಿ ಇದು ಮಾಮೂಲಿ ತಾಪಮಾನ, ಅಲ್ಲಿ ಬೇಸಿಗೆಯಲ್ಲೂ ಇಷ್ಟೇ ಕನಿಷ್ಠ ತಾಪಮಾನ ಇರುತ್ತದೆ. ಹೀಗಾಗಿ ಅಲ್ಲಿನ ಭೂಮಿ ಸದಾ ತೇವದಿಂದ ಕೂಡಿರುತ್ತದೆ.
ಚಳಿಯಲ್ಲೂ ಬೆಂಕಿ ಹೊತ್ತಿಕೊಂಡಿದೆ
ಇಷ್ಟು ಕನಿಷ್ಠ ತಾಪಮಾನ ಇರುವ ಪ್ರದೇಶ ಸೈಬೀರಿಯಾದಲ್ಲೂ ಕಾಡ್ಗಿಚ್ಚು ಹಬ್ಬಿದೆ. ಸೈಬೀರಿಯಾದ ನಗರಗಳ ಮೇಲೆ ಕಾರ್ಬನ್ ಮೋಡಗಳು ರಾರಾಜಿಸುತ್ತಿವೆ. ಲಕ್ಷಾಂತರ ಎಕರೆ ಕಾಡಿಗೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ರಷ್ಯಾ ಸರ್ಕಾರ ಪರದಾಡುತ್ತಿದೆ. ತಾಪಮಾನ ಹೆಚ್ಚಾಗಿರುವ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತುವುದು ಮಾಮೂಲಿ ಎನ್ನಬಹುದು. ಆದರೆ ಇಲ್ಲಿ ಆಗಿರುವುದು ಉಲ್ಟಾ, ಚಳಿ ಮತ್ತು ತೇವಾಂಶ ಇದ್ದರೂ ಕಾಡು ಧಗಧಗನೆ ಹೊತ್ತಿ ಉರಿಯುತ್ತಿದೆ. ತೇವಾಂಶ ಹೆಚ್ಚಿರುವ ಪರಿಣಾಮ ಭಾರಿ ಪ್ರಮಾಣದ ಮಾಲಿನ್ಯ ಉಂಟಾಗುತ್ತಿದೆ.
ಸಸ್ಯಗಳ ಪಳಿಯುಳಿಕೆ ಇದಕ್ಕೆ ಕಾರಣ
ಆರ್ಕಟಿಕ್ ತಪ್ಪಲು ಪ್ರದೇಶದಲ್ಲಿ ಸದಾ ಕಾಲ ತೇವ ಇರುವ ಹಿನ್ನೆಲೆಯಲ್ಲಿ, ಅಲ್ಲಿನ ವಾತಾವರಣಕ್ಕೆ ಒಗ್ಗುವ ಸಸ್ಯ ಸಂಕುಲ ಹರಡಿಕೊಂಡಿದೆ. ಆದರೆ ಕ್ಲಿಷ್ಟಕರ ಸಂದರ್ಭದಲ್ಲಿ ಬಹುಪಾಲು ಸಸ್ಯಗಳು ಈ ತೇವಾಂಶದಲ್ಲಿ ಕೊಳೆತುಬಿಡುತ್ತವೆ. ಕೊಳೆತ ಸಸ್ಯ ಒಣಗಲು ಅಲ್ಲಿ ಅವಕಾಶವೇ ಇಲ್ಲ. ವರ್ಷವಿಡೀ ಸರಿಯಾಗಿ ಬಿಸಿಲನ್ನೇ ಕಾಣದ ನೆಲದಲ್ಲಿ ಕೊಳೆತ ಸಸ್ಯಗಳ ರಾಶಿ ಲಕ್ಷಾಂತರ ವರ್ಷಗಳಿಂದ ಹರಡಿಕೊಂಡಿದೆ. ಈಗ ಸೈಬೀರಿಯಾ ಭಾಗದಲ್ಲಿ ಬಿದ್ದ ಬೆಂಕಿ ಕಾಡಿನ ಜೊತೆಗೆ, ಕೊಳೆತ ಸಸ್ಯಗಳನ್ನೂ ಸುಡುತ್ತಿದೆ. ಹೀಗಾಗಿ ಸಹಜವಾಗಿ ಕಾರ್ಬನ್ ಡೈಆಕ್ಸೈಡ್ ಹಾಗೂ ಕಾರ್ಬನ್ ಮೊನಾಕ್ಸೈಡ್ ಯಥೇಚ್ಛವಾಗಿ ವಾತಾವರಣಕ್ಕೆ ಸೇರುತ್ತಿದೆ. ಇದು ಹೀಗೆ ಮುಂದುವರಿದರೆ ಓಝೋನ್ ಪದರಕ್ಕೆ ಭಾರಿ ಪ್ರಮಾಣದ ಹಾನಿ ಕಟ್ಟಿಟ್ಟಬುತ್ತಿ.
ಬಿಸಿ ಹೊಗೆ ಧ್ರುವ ಪ್ರದೇಶದತ್ತ ನುಗುತ್ತಿದೆ..!
ಸೈಬೀರಿಯಾ ಅರಣ್ಯದಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ ಕಾರ್ಬನ್ ವಿಷ ಮಿಶ್ರಿತ ಗಾಳಿಯನ್ನ ಉತ್ತರ ಧ್ರುವ ಪ್ರದೇಶದ ಕಡೆಗೆ ತಳ್ಳುತ್ತಿದೆ. ಈಗಾಗಲೇ ಉತ್ತರ ಧ್ರುವದಲ್ಲಿ ಬಹುಪಾಲು ಮಂಜು ಕರಗಿಹೋಗಿದೆ. ಈ ಮಧ್ಯೆ ಕಾರ್ಬನ್ ವಿಷ ಹಾಗೂ ಬಿಸಿಗಾಳಿ ಅದೇ ಮಂಜು ಆವರಿತ ಪ್ರದೇಶದ ಕಡೆಗೆ ನುಗ್ಗುತ್ತಿರುವುದು ವಿನಾಶಕ್ಕೆ ನಾಂದಿ ಹಾಡಿದೆ. ಧ್ರುವ ಪ್ರದೇಶದಲ್ಲಿ ಹರಡಿರುವ ಹಿಮ ಮತ್ತಷ್ಟು ಕರಗುವಂತೆ ಈ ಗಾಳಿ ಪ್ರಚೋದಿಸುತ್ತಿದೆ. ಹೀಗೆ ಆದರೆ ಮುಂದಿನ ದಿನಗಳಲ್ಲಿ ಸಮುದ್ರದ ಮಟ್ಟ ಏರಿಕೆಯಾಗುವ ಜೊತೆಗೆ, ಭೂಮಿಯ ತಾಪಮಾನ ಹಿಡಿತಕ್ಕೆ ಸಿಗದಷ್ಟು ಹೆಚ್ಚಬಹುದೆಂದು ವಿಜ್ಞಾನಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.