ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪರಿಚಯ
ಬೆಂಗಳೂರು, ಆಗಸ್ಟ್ 27 : ಕರ್ನಾಟಕ ಬಿಜೆಪಿಯಲ್ಲಿ ದಲಿತ ಸಮುದಾಯದ ಪ್ರಭಾವಿ ನಾಯಕ ಗೋವಿಂದ ಕಾರಜೋಳ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಅವರಿಗೆ ಉಪ ಮುಖ್ಯಮಂತ್ರಿ ಪಟ್ಟವನ್ನು ನೀಡಲಾಗಿದೆ.
ಗೋವಿಂದ ಕಾರಜೋಳ (68) ಪೂರ್ಣ ಹೆಸರು ಗೋವಿಂದ ಮುಕ್ತಪ್ಪ ಕಾರಜೋಳ. ಮುಧೋಳ ವಿಧಾನಸಭಾ ಕ್ಷೇತ್ರದ ಶಾಸಕರು. ಪ್ರಸ್ತುತ ಯಡಿಯೂರಪ್ಪ ಸಂಪುಟದಲ್ಲಿ ಲೋಕೋಪಯೋಗಿ, ಸಮಾಜ ಕಲ್ಯಾಣ ಖಾತೆಯ ಸಚಿವರು.
ಗೋವಿಂದ ಕಾರಜೋಳ ಅವರು ಹುಟ್ಟಿದ್ದು 25/1/1951ರಂದು ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದಲ್ಲಿ. ಡಿಪ್ಲೊಮಾ ಪದವಿ ಪಡೆದಿರುವ ಅವರು, ಕೃಷಿ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

1994ರಲ್ಲಿ ಮೊದಲ ಬಾರಿಗೆ ಜನತಾ ಪರಿವಾರದ ಮೂಲಕ ವಿಧಾನಸಭೆಯನ್ನು ಪ್ರವೇಶಿಸಿದರು. 1999ರಲ್ಲಿ ಜೆಡಿಯುನಿಂದ ಕಣಕ್ಕಿಳಿದು ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡರು. ನಂತರ ಅವರು ಬಿಜೆಪಿ ಸೇರಿದರು.
2004 ರಿಂದ ಸತತವಾಗಿ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುತ್ತಿದ್ದಾರೆ. 2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಗೋವಿಂದ ಕಾರಜೋಳ ಸಚಿವರಾಗಿದ್ದರು. ಈಗ ಸಚಿವ ಸ್ಥಾನದ ಜೊತೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ.
ಗೋವಿಂದ ಕಾರಜೋಳ 1994, 2004, 2008, 2013 ಮತ್ತು 2018ರ ಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2004ರಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು.
2006-2007ರಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ, 2008-2013ರ ತನಕ ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ, ಮಾಹಿತಿ ಹಾಗೂ ಪ್ರವಾಸೋದ್ಯಮ, ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.












Click it and Unblock the Notifications