Health Tips: ಸಾಂಕ್ರಾಮಿಕ ರೋಗಗಳು ಹರಡುವ ಮುನ್ನ ಎಚ್ಚರಿಕೆ ಇರಲಿ!
ಇದೀಗ ಸಾಂಕ್ರಾಮಿಕ ರೋಗದ ಭಯ ಶುರುವಾಗಿದೆ. ಮಳೆ ಕಡಿಮೆಯಾಗಿ ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಧೂಳು, ನೀರು ಸೇರಿದಂತೆ ಹಲವು ಕಾರಣಗಳಿಗೆ ಸಾಂಕ್ರಾಮಿಕ ರೋಗ ಹರಡುವ ಭಯ ಕಾಡಲಾರಂಭಿಸಿದೆ. ಬಿಟ್ಟು, ಬಿಟ್ಟು ಬರುವ ಜ್ವರದ ಬಗ್ಗೆ ಎಚ್ಚರ ವಹಿಸಿ ಏಕೆಂದರೆ ಅದು ಕಾಮಾಲೆ ರೋಗವೂ ಆಗಿರಬಹುದು. ಈಗಾಗಲೇ ಅಲ್ಲಲ್ಲಿ ಕಾಮಾಲೆ ರೋಗಗಳು ಕಾಣಿಸಿಕೊಳ್ಳಲಾರಂಭಿಸಿದ್ದು, ಈ ಬಗ್ಗೆ ಪರೀಕ್ಷೆ ಮಾಡಿಸಿ ಅದರ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ.
ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಸಾಂಕ್ರಾಮಿಕ ರೋಗಗಳು ಬರುವ ಮುನ್ಸೂಚನೆ ಕಾಣಿಸುತ್ತಿದ್ದು, ಆಹಾರ ಸೇವನೆ ಸೇರಿದಂತೆ ಕುಡಿಯುವ ನೀರು ಆಹಾರ ಪದಾರ್ಥಗಳತ್ತ ಎಚ್ಚರವಹಿಸಿ. ಶುಚಿತ್ವವಿಲ್ಲದ ಕಡೆ ಯಾವುದೇ ಆಹಾರವನ್ನು ಸೇವಿಸಬೇಡಿ. ಹಾಗೆಯೇ ಕುಡಿಯುವ ನೀರಿನ ಬಗ್ಗೆ ನಿಗಾವಹಿಸಿ. ಕಲುಷಿತ ನೀರಿನ ಮೂಲಕ ವೈರಸ್ ದೇಹಕ್ಕೆ ಹೋಗುವ ಸಾಧ್ಯತೆಯಿದ್ದು ಸ್ವಲ್ಪ ಎಚ್ಚರ ತಪ್ಪಿದರೂ ರೋಗಗಳನ್ನು ಎಳೆದುಕೊಳ್ಳಬೇಕಾಗಿ ಬರಬಹುದು. ಹೊಳೆ, ಕೆರೆಗಳಿಂದ ನೀರನ್ನು ತಂದು ಸೇವಿಸುವ ಮುನ್ನ ಎಚ್ಚರವಿರಲಿ, ನೀರನ್ನು ಕುದಿಸಿ ಆರಿಸಿ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಿ.

ಬಹಳಷ್ಟು ಕಡೆಗಳಲ್ಲಿ ಶುಚಿತ್ವದ ಕೊರತೆಯಿಂದಾಗಿ ಸಾರ್ವಜನಿಕ ನೀರಿನ ಟ್ಯಾಂಕ್, ಬೋರ್ವೆಲ್, ಬಾವಿಗಳ ಬಳಿ ಕೊಳಚೆ ನೀರುಗಳು ನಿಲ್ಲುತ್ತಿದ್ದು ಇಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟಿರಿಯಾಗಳು ಕಾಯಿಲೆಗಳನ್ನು ಹರಡುತ್ತಿವೆ. ಕೆರೆ, ಬಾವಿ, ನದಿಗಳಿಂದ ತಂದ ನೀರನ್ನು ಚೆನ್ನಾಗಿ ಕುದಿಸಿ ಉಪಯೋಗಿಸದೆ ಕೆಲವರು ನೇರವಾಗಿ ಕುಡಿಯುತ್ತಿರುವುದರಿಂದಲೂ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಕಲುಷಿತ ನೀರಿನಿಂದಾಗಿ ಕಾಲರಾ, ಕರಳುಬೇನೆ(ವಾಂತಿ ಬೇಧಿ), ಟೈಫಾಯ್ಡ್ (ವಿಷಮಶೀತಜ್ವರ), ಹೆಪಟೈಟಿಸ್, ಪೋಲಿಯೋ, ಆಮಶಂಕೆ, ಇಲಿಜ್ವರ, ಜಂತುಹುಳು ಸೋಂಕು, ಪ್ಲೋರೋಸಿಸ್, ನಾರುಹುಣ್ಣು ಮೊದಲಾದ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಇರಲಿ.
ಕುಡಿಯುವ ನೀರಿನ ಬಗ್ಗೆ ಎಚ್ಚರ ವಹಿಸಿ
ಹೆಚ್ಚಿನ ಕಾಯಿಲೆಗಳು ಸೋಂಕುಗಳಾಗಿದ್ದು, ಅವು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದಾಗಿ ಪ್ರತಿಯೊಬ್ಬರು ತಮ್ಮ ಮನೆ ಮತ್ತು ಸುತ್ತಮುತ್ತ ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವವನ್ನು ಕಾಪಾಡುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ನೀರಿನ ಮೂಲಗಳಾದ ಬಾವಿ, ಕೊಳವೆಬಾವಿ ಮತ್ತು ಟ್ಯಾಂಕರ್ ಸುತ್ತಮುತ್ತ ಬಳಸಿದ ನೀರು ನಿಲ್ಲುವುದರಿಂದ, ಕೆರೆ ಬಳಿ ಮಲ ವಿಸರ್ಜನೆ ಮಾಡುವುದು, ದನಕರುಗಳನ್ನು ತೊಳೆಯುವುದು, ಬಟ್ಟೆ ಪಾತ್ರೆ ತೊಳೆದ ನೀರು ಕುಡಿಯುವ ನೀರಿನ ಮೂಲಗಳಿಗೆ ಸೇರ್ಪಡೆಯಾಗುವುದು ಕಲುಷಿತಗೊಳಿಸುತ್ತದೆ.

ನೀರಿನ ಸಂಗ್ರಹಣೆ, ನೀರಿನ ಟ್ಯಾಂಕ್ನಿಂದ ಸರಬರಾಜಾಗುವ ಪೈಪುಗಳಲ್ಲಿ ಸೋರಿಕೆ ಮತ್ತು ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸದಿರುವುದರಿಂದ, ನೀರು ಪೂರೈಕೆ ನಲ್ಲಿಗಳು ತಗ್ಗಿನಲ್ಲಿದ್ದಾಗ ಅದರಲ್ಲಿ ನೀರು ನಿಂತು ಕಲುಷಿತಗೊಂಡು ನೀರು ಪೂರೈಕೆ ಪೈಪುಗಳಲ್ಲಿ ಪುನಃ ಸೇರುವುದು. ಮನೆಯಲ್ಲಿ ಸಂಗ್ರಹಿಸಿದ ನೀರು ಕಲುಷಿತಗೊಳ್ಳುವುದರಿಂದಲೂ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾಂಕ್ರಾಮಿಕ ಕಾಯಿಲೆ ಯಾರೋ ಒಬ್ಬರಿಗೆ ಬಂದು ಹೋಗುವಂತಹದಲ್ಲ ಆದ್ದರಿಂದ ಪ್ರತಿಯೊಬ್ಬರೂ ಇದರ ಬಗ್ಗೆ ಕಾಳಜಿ ವಹಿಸಬೇಕಾಗಿದೆ.
ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ
ಗ್ರಾಮದಲ್ಲಿ ಅಥವಾ ಬಡಾವಣೆಗಳಲ್ಲಿ ಒಬ್ಬರಿಗೆ ಯಾವುದಾದರೂ ರೋಗ ಕಾಣಿಸಿಕೊಂಡರೆ ಅದು ಇತರರಿಗೂ ಹರಡುವ ಸಾಧ್ಯತೆಯಿರುವುದರಿಂದ ಎಲ್ಲರೂ ಇದರತ್ತ ಗಮನಹರಿಸಿ ಕಾಯಿಲೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ತಮ್ಮ ಮನೆ ಮತ್ತು ಬೀದಿಯಲ್ಲಿ ಶುಚಿತ್ವಕ್ಕೆ ಮೊದಲು ಆದ್ಯತೆ ನೀಡಬೇಕಾಗಿದೆ. ಕುಡಿಯುವ ನೀರಿನ ಸ್ಥಳಗಳಲ್ಲಿ ತ್ಯಾಜ್ಯ, ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಬಯಲಿನಲ್ಲಿ ಮಲ ವಿಸರ್ಜನೆ ಮಾಡುವುದನ್ನು ತಡೆಗಟ್ಟಬೇಕು, ಕುಡಿಯುವ ನೀರಿನ ಸ್ಥಳಗಳಲ್ಲಿ ದನಕರುಗಳನ್ನು, ಬಟ್ಟೆ ಪಾತ್ರೆ ತೊಳೆಯುವುದನ್ನು ತಡೆಗಟ್ಟಬೇಕು. ಒಂದು ವೇಳೆ ತೊಳೆದರೂ ಅದರ ತ್ಯಾಜ್ಯ ನೀರು ಕುಡಿಯುವ ನೀರಿನೊಂದಿಗೆ ಸೇರ್ಪಡೆಗೊಳ್ಳದಂತೆ ನೋಡಿಕೊಳ್ಳಬೇಕು.

ನೀರಿನ ಪೈಪುಗಳು ಸೋರಿಕೆಯಿದ್ದಲ್ಲಿ ಕೂಡಲೇ ದುರಸ್ತಿಪಡಿಸಬೇಕು. ಮನೆಯಲ್ಲಿರುವ ಮತ್ತು ಬೀದಿಗಳ ಟ್ಯಾಂಕ್ಗಳನ್ನು ನಿಯಮಿತವಾಗಿ ಪ್ರತಿ ಹತ್ತು ದಿನಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಸಾರ್ವಜನಿಕವಾಗಿ ಸರಬರಾಜು ಮಾಡುವ ನೀರನ್ನು ಕ್ಲೋರಿನ್ನಿಂದ ಶುದ್ಧಗೊಳಿಸುವುದು,. ನೀರು ಪೂರೈಕೆ ಮಾಡುವ ನಲ್ಲಿಗಳು ಎತ್ತರದ ಸ್ಥಳದಲ್ಲಿ ಇರುವಂತೆ ಹಾಗೂ ಮುಚ್ಚಳವಿರುವ ನಲ್ಲಿಗಳನ್ನು ಉಪಯೋಗಿಸುವಂತೆ ಕ್ರಮ ಕೈಗೊಳ್ಳುವುದು, ಇನ್ನು ಮನೆಯಲ್ಲಿ ಸಂಗ್ರಹಿಸಿದ ನೀರು ಮಕ್ಕಳ ಕೈಗೆ ಮತ್ತು ಸಾಕು ಪ್ರಾಣಿಗಳಿಗೆ ಎಟುಕದಂತೆ ಎತ್ತರದಲ್ಲಿರಿಸುವುದು, ನೀರು ತೆಗೆದುಕೊಳ್ಳಲು ಹಿಡಿಕೆ ಇರುವ ಬಟ್ಟಲನ್ನು ಉಪಯೋಗಿಸುವುದು ಅಗತ್ಯವಾಗಿದೆ.
ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬೇಕಾದರೆ ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕಿದೆ. ಪ್ರತಿಯೊಬ್ಬರೂ ತಮ್ಮ ಮನೆ ಮತ್ತು ಸುತ್ತಮುತ್ತ ಶುಚಿತ್ವಕ್ಕೆ ಆದ್ಯತೆ ನೀಡುವುದರ ಜತೆಗೆ ಕುಡಿಯುವ ನೀರು ಮತ್ತು ಸೇವಿಸುವ ಆಹಾರದ ಬಗ್ಗೆಯೂ ಗಮನಹರಿಸಬೇಕಾಗಿದೆ. ರಸ್ತೆ ಬದಿಯಲ್ಲಿ ತೆರೆದಿಟ್ಟ ಆಹಾರಪದಾರ್ಥ ಹಣ್ಣು ಹಂಪಲು ಮೊದಲಾದವುಗಳನ್ನು ಸೇವಿಸುವ ಮುನ್ನ ಎಚ್ಚರಿಕೆ ವಹಿಸುವುದು ಬಹುಮುಖ್ಯವಾಗಿದೆ.
ರಸ್ತೆ ಬದಿಯಲ್ಲಿ ಪಾನಿಪುರಿ, ಗೋಲ್ ಕಪ್ಪ, ತಿಂಡಿ ಕರಿಯುವುದು, ಇನ್ನಿತರ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವವರು ಕೂಡ ಶುಚಿತ್ವ ಕಾಪಾಡಿಕೊಳ್ಳಬೇಕಿದೆ. ಧೂಳು ಆಹಾರ ಪದಾರ್ಥಗಳಿಗೆ ಸೇರದಂತೆ ಹಾಗೆಯೇ ಶುದ್ಧ ಮತ್ತು ಬಿಸಿ ನೀರನ್ನು ಕುಡಿಯಲು ನೀಡಬೇಕಾಗುತ್ತದೆ. ಇಲ್ಲದೆ ಹೋದರೆ ರೋಗ ಹರಡಲು ಕಾರಣವಾಗಬಹುದು. ಇಲ್ಲಿ ತಮ್ಮ ಆರೋಗ್ಯದ ಬಗ್ಗೆ ತಾವೇ ಎಚ್ಚರಿಕೆ ವಹಿಸಿ ಮುನ್ನಡೆದರೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಸಾಧ್ಯವಾಗಲಿದೆ.












Click it and Unblock the Notifications