Government Employees Strike; ಎರಡು ಗಂಟೆಯಲ್ಲಿ ನಿರ್ಧಾರ ಪ್ರಕಟ
ಕರ್ನಾಟಕದ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೌಕರರ ಜೊತೆ ಮಾತುಕತೆ ನಡೆಸಿದ್ದು, 2 ಗಂಟೆಯಲ್ಲಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 01; 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಬುಧವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರಕ್ಕೆ ಕರೆ ನಿಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.
ಬುಧವಾರ ಬೆಳಗ್ಗೆ ಬಸವರಾಜ ಬೊಮ್ಮಾಯಿ ಅವರ ಆರ್. ಟಿ. ನಗರ ನಿವಾಸಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಭೇಟಿ ನೀಡಿದರು. ನೌಕರರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ನಿಯೋಗದ ಜೊತೆ ಸುದೀರ್ಘ ಮಾತುಕತೆಯನ್ನು ನಡೆಸಿದರು. ಬಳಿಕ ಎರಡು ಗಂಟೆಯಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿದೆ.

ಮುಖ್ಯಮಂತ್ರಿಗಳ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿ. ಎಸ್. ಷಡಕ್ಷರಿ, "ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರ ಎರಡು ಗಂಟೆಯಲ್ಲಿ ತನ್ನ ನಿರ್ಧಾರ ತಿಳಿಸಲಿದೆ. ಅಧಿಕಾರಿಗಳ ಜೊತೆ ಚರ್ಚಿಸಿ ಹೇಳುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಬಳಿಕ ನಾವು ಹೋರಾಟ ವಾಪಸ್ ಪಡೆಯುವ ಅಥವ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ" ಎಂದರು.
ಫೆಬ್ರವರಿ 21ರಂದು ನಡೆದ ಸಭೆಯಲ್ಲಿ ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದರು. ಆದರೆ ಸರ್ಕಾರ ಕೊನೆಯ ಹಂತದಲ್ಲಿ ಫೆಬ್ರವರಿ 28ರ ಮಧ್ಯಾಹ್ನ ನೌಕರರ ಜೊತೆ ಮಾತುಕತೆಗೆ ಮುಂದಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸರ್ಕಾರಿ ನೌಕರರ ಸಂಘದ ಜೊತೆ ಮಂಗಳವಾರ ನಡೆಸಿದ್ದ ಸಭೆ ವಿಫಲವಾಗಿತ್ತು.

7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಷ್ಕರ ನಡೆಸದಂತೆ ಸರ್ಕಾರಿ ನೌಕರರಿಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ನೌಕರರು ಒಪ್ಪಿರಲಿಲ್ಲ. ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಲಖಿತ ಭರವಸೆಯಲ್ಲ, ಸರ್ಕಾರಿ ಆದೇಶ ಬೇಕು ಎಂದು ನೌಕರರು ಪಟ್ಟುಹಿಡಿದಿದ್ದಾರೆ.
ಸರ್ಕಾರಿ ನೌಕರರ ಬೇಡಿಕೆಗಳು
* 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ. 40 ಫಿಟ್ಮೆಂಟ್ ಸೌಲಭ್ಯವನ್ನು ದಿನಾಂಕ 01/07/2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.
* ಎನ್. ಪಿ. ಎಸ್. ನೌಕರರನ್ನು ಓ. ಪಿ. ಎಸ್. ವ್ಯಾಪ್ತಿಗೆ ತರುವುದು. ಪಂಜಾಬ್, ರಾಜಸ್ಥಾನ, ಛತ್ತೀಸ್ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸುವುದು.
ಸರ್ಕಾರಿ ನೌಕರರು ಈಗಾಗಲೇ ಮುಷ್ಕರ ಆರಂಭಿಸಿದ್ದಾರೆ. ಸರ್ಕಾರಿ ವೈದ್ಯರು ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ನೀಡಿದೆ. ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ ಬಂದ್ ಆಗಿದೆ. ತುರ್ತು ಸೇವೆಯಲ್ಲಿ ಇರುವ ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ.
ಪ್ರಥಮ ಪಿಯುಸಿ ಪರೀಕ್ಷೆ ಕರ್ತವ್ಯಕ್ಕೆ ಉಪನ್ಯಾಸಕರು ಗೈರು ಹಾಜರಾಗಿದ್ದಾರೆ. ಹಲವು ಕಡೆ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲೆಗೆ ಶಿಕ್ಷಕರು ಸಹ ಗೈರಾಗುತ್ತಿದ್ದಾರೆ. ವಿಧಾನಸೌಧದಿಂದ ಗ್ರಾಮ ಪಂಚಾಯಿತಿ ತನಕ ಸರ್ಕಾರಿ ಕಚೇರಿಗಳು ಬಂದ್ ಆಗಲಿವೆ ಎಂದು ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘ ಹೇಳಿದೆ.
ಮಂಗಳವಾರ ತಡರಾತ್ರಿ ತನಕ ರಾಜ್ಯ ಸರ್ಕಾರಿ ನೌಕರರ ಸಂಘದ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದ ಸಭೆ ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಮುಂಜಾನೆ ಮುಷ್ಕರ ಆರಂಭವಾಗಿದೆ. "ನಾನು ಸರ್ಕಾರಿ ನೌಕರರ ಜೊತೆ ನಿಲ್ಲುತ್ತೇನೆ" ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ಹೇಳಿದ್ದಾರೆ.












Click it and Unblock the Notifications