ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ವಾಣಿವಿಲಾಸ ಸಾಗರ ಡ್ಯಾಂ

ಚಿತ್ರದುರ್ಗ, ಆಗಸ್ಟ್‌, 07: ಹಿರಿಯೂರಿನ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ 68 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಡ್ಯಾಂ ಕೋಡಿ ಬೀಳಲು ಕೆಲವು ಅಡಿಗಳು ಮಾತ್ರ ಬಾಕಿ ಇದ್ದು, 1934ರ ದಾಖಲೆಯನ್ನು ಸರಿಗಟ್ಟುವ ಹಂತದಲ್ಲಿದೆ.

ಕಳೆದ ಎರಡು ತಿಂಗಳಿನಿಂದ ಸುರಿದ ಸತತ ಮಳೆಗೆ ವಾಣಿವಿಲಾಸ ಸಾಗರದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇಂದಿನ ವರದಿಯಲ್ಲಿ 2,554 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 125.50 ಅಡಿ ಸಂಗ್ರಹವಾಗಿದೆ.

2021ರಲ್ಲಿ 125.50 ಅಡಿ ನೀರು ಸಂಗ್ರಹವಾಗಿ ದಾಖಲೆ ನಿರ್ಮಾಣವಾಗಿತ್ತು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ 88 ವರ್ಷಗಳ ಬಳಿಕ ಮತ್ತೊಂದು ದಾಖಲೆ ನಿರ್ಮಾಣವಾಗಿದೆ. ಕೋಡಿ ಬೀಳಲು ಕೆಲವು ಅಡಿಗಳು ಅಂದರೆ 4.50 ಬಾಕಿ ಉಳಿದಿದೆ.

ಕಳೆದ ತಿಂಗಳಿನಿಂದ ಸತತವಾಗಿ ಸುರಿದ ಭಾರೀ ಮಳೆಯಿಂದಾಗಿ ಈ ವರ್ಷ ಜಲಾಶಯದಲ್ಲಿ 5 ಅಡಿಗಳಷ್ಟು ನೀರು ಸಂಗ್ರಹವಾಗಿದೆ. 1932ರಲ್ಲಿ 125.50, 1933ರಲ್ಲಿ 135.25, 1934ರಲ್ಲಿ 130.24 ಅಡಿ ನೀರು ಸಂಗ್ರಹವಾಗಿ ಇತಿಹಾಸ ನಿರ್ಮಿಸಿತ್ತು.

 ನೀರಿನ ಸಂಗ್ರಹದಲ್ಲಿ ವಿವಿ ಸಾಗರ ದಾಖಲೆ

ನೀರಿನ ಸಂಗ್ರಹದಲ್ಲಿ ವಿವಿ ಸಾಗರ ದಾಖಲೆ

1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.25 ಅಡಿ ನೀರು ಸಂಗ್ರಹವಾಗಿತ್ತು. ಇನ್ನು 2000ನೇ ಇಸವಿಯಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ ನೀರು ಸಂಗ್ರಹವಾಗಿದೆ. ಇದೀಗ 1958ರ ದಾಖಲೆಯನ್ನು ಹಿಂದಿಕ್ಕಿದ ಡ್ಯಾಂ ನೀರಿನ ಮಟ್ಟದಲ್ಲಿ 125.50 ಅಡಿ ದಾಟಿ ಹೊಸ ದಾಖಲೆಯನ್ನು ನಿರ್ಮಿಸಲು ಮುಂದಾಗಿದೆ.

ಡ್ಯಾಂ ಸಂಪೂರ್ಣ ಭರ್ತಿ ಆಗುತ್ತಿರುವ ಮನಮೋಹಕ ಕ್ಷಣವನ್ನು ನೋಡಲು ಜಿಲ್ಲೆಯ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಸುಮಾರು ವರ್ಷಗಳ ನಂತರ ಇದೇ ಮೊದಲಿಗೆ ಜಲಾಶಯದಲ್ಲಿ ಇಷ್ಟೊಂದು ನೀರು ನೋಡುತ್ತಿರುವುದು ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಮತ್ತೊಂದು ಕಡೆ ಡ್ಯಾಂನಲ್ಲಿ ಹೆಚ್ಚು ನೀರು ಶೇಖರಣೆಯಾಗಿರುವುದರಿಂದ ರೈತಾಪಿ ವರ್ಗದವರಲ್ಲಿ ಸಂತೋಷ ಮನೆ ಮಾಡಿದೆ.

 'ವೇದಾವತಿ' ನದಿಯ ಸಂಪೂರ್ಣ ಹಿನ್ನೆಲೆ

'ವೇದಾವತಿ' ನದಿಯ ಸಂಪೂರ್ಣ ಹಿನ್ನೆಲೆ

ರಾಜ್ಯದ ಬಹುತೇಕ ಜಲಾಶಯಗಳು ಮುಂಗಾರು ಹಂಗಾಮಿನಲ್ಲಿ ತುಂಬುವುದು ವಾಡಿಕೆಯಾಗಿದೆ. ಆದರೆ ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಹರಿವು ಗಮನಿಸಿದಾಗ ಹಿಂಗಾರು ಮಳೆಗೆ ಹೆಚ್ಚಾಗಿ ನೀರು ಸಂಗ್ರಹಣೆ ಆಗುತ್ತಿರುವುದು ವಿಶೇಷವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನನ್‌ಗಿರಿ ಕಂದಕಗಳಲ್ಲಿ ಜನಿಸುವ ವೇದಾ ಎಂಬ ನದಿ ಕಡೂರಿನ ಬಳಿ ಅವತಿ ಎಂಬ ನದಿಯನ್ನು ಸೇರಿ ಅವು ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಚಿತ್ರದುರ್ಗದ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನು ವಾಣಿವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ.

 ವಿವಿ ಸಾಗರ ನಿರ್ಮಾಣ ಆಗಿದ್ದು ಹೇಗೆ?

ವಿವಿ ಸಾಗರ ನಿರ್ಮಾಣ ಆಗಿದ್ದು ಹೇಗೆ?

ಈ ಅಣೆಕಟ್ಟನ್ನು 1897ರಲ್ಲಿ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ ನಿರ್ಮಿಸಲಾಗಿತ್ತು. 'ತಾರಾ ಚಾಂದ್ ದಲಾಲ್' ಎಂಬ ಇಂಜಿನಿಯರ್ ನೇತೃತ್ವದ ತಂಡವು ಆಗಿನ ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಮುಂದಾಳತ್ವದಲ್ಲಿ ಡ್ಯಾಂ ನಿರ್ಮಿಸಿ 1907 ರಲ್ಲಿ ಕಾಮಗಾರಿ ಪೂರ್ಣಗೊಳಿಸಿದರು. ಅಲ್ಲದೇ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಾಣಿವಿಲಾಸ ಸಾಗರದ ನೀಲನಕ್ಷೆಯೇ ಮೂಲ ಎಂದು ಹೇಳಲಾಗುತ್ತದೆ.

2019ರಲ್ಲಿ ಡೆಡ್ ಸ್ಟೋರೇಜ್ ತಲುಪಿದ್ದ ಡ್ಯಾಂ: ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಬತ್ತಿ ಹೋಗಿ ಡೆಡ್ ಸ್ಟೋರೆಜ್ ತಲುಪಿದ್ದ ಡ್ಯಾಂ, ದಿನ ಕಳೆದಂತೆ ನೀರಿನ ಮಟ್ಟ ಹೆಚ್ಚಾಗುವ ಹಂತಕ್ಕೆ ಬಂದು ನಿಂತಿದೆ. ಇದರಿಂದ ಹಿರಿಯೂರು ತಾಲೂಕಿನ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಹೊಸ ಚಿಗುರು ಬಂದಿದೆ.
ಹೊಸದುರ್ಗ, ಹಿರಿಯೂರು, ಚಿತ್ರದುರ್ಗ ಭಾಗದಲ್ಲಿ 800ರಿಂದ 1,000 ಅಡಿ ಬೋರ್‌ ವೆಲ್ ಕೊರೆಸಿದರೂ ನೀರು ಸಿಗುತ್ತಿರಲಿಲ್ಲ. ಆದರೆ ವಾಣಿವಿಲಾಸ ಜಲಾಶಯದಲ್ಲಿ ನೀರು ಸಂಗ್ರಹವಾಗುತ್ತಿದ್ದಂತೆ ಡ್ಯಾಂ ಸುತ್ತ ಮುತ್ತಲಿನ ಜಮೀನು ಪ್ರದೇಶಗಳಲ್ಲಿ, ಕೊಳವೆ ಬಾವಿಗಳಲ್ಲಿ ನೀರು ಉಕ್ಕಿ ಬರುತ್ತಿವೆ.

ಹೊಸದುರ್ಗ, ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಕೇವಲ 50ರಿಂದ 200 ಅಡಿಗೆ ನೀರು ಸಿಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸುತ್ತಲಿನ ಪರಿಸರ ನೋಡುಗರನ್ನು ಆಕರ್ಷಿಸುತ್ತಿದೆ. ಜಲಾಶಯ ತುಂಬುವ ಹಂತಕ್ಕೆ ಬಂದಿದ್ದು, ರೈತ ಸಮುದಾಯದಲ್ಲಿ ಚೈತನ್ಯ ಮೂಡಿಸಿದರೆ, ಮತ್ತೊಂದು ಕಡೆ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರಿನ ದಾಹ ನೀಗಿದಂತಾಗಿದೆ.

 ವಿವಿ ಸಾಗರ ವೀಕ್ಷಿಸಿದ್ದ ಯದುವೀರ್‌

ವಿವಿ ಸಾಗರ ವೀಕ್ಷಿಸಿದ್ದ ಯದುವೀರ್‌

ಸುಮಾರು ವರ್ಷಗಳ ನಂತರ ಡ್ಯಾಂನಲ್ಲಿ ಹೆಚ್ಚು ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ಜೊತೆಗೆ ಗಾಯಿತ್ರಿ ಜಲಾಶಯದ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಯದುವೀರ್ ಮತ್ತು ಪ್ರಮೋದಾ ದೇವಿ ಅವರು ಬಂದು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಬೇಕು ಎಂಬುದು ಈ ಭಾಗದ ಜನರ ಕೋರಿಕೆಯಾಗಿತ್ತು. ಇತ್ತೀಚೆಗೆ ಅಷ್ಟೇ ಯದುವೀರ್ ಕುಟುಂಬ ಗಾಯಿತ್ರಿ ಜಲಾಶಯ ಮತ್ತು ವಾಣಿವಿಲಾಸ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದರು. ಹಾಗೂ ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದಿದ್ದರು.

ಜಲಾಶಯ ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ಇದೆ. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು. ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಿ ಡ್ಯಾಂ ವೀಕ್ಷಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+