India Today Poll: ಯೋಗಿ ಆದಿತ್ಯನಾಥ್ ಪರ ಶೇ.49ರಷ್ಟು ಮಂದಿ ಬೆಂಬಲ
ಲಕ್ನೋ, ಜನವರಿ 20: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಉಳಿದಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಗದ್ದುಗೆ ಹಿಡಿಯಲು ರಾಜಕೀಯ ಪಕ್ಷಗಳು ಮತ್ತು ನಾಯಕರು ಎಲ್ಲಿಲ್ಲದ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ಮಧ್ಯೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತಿಹೆಚ್ಚು ಬೆಂಬಲ ಪಡೆದುಕೊಳ್ಳುವ ಮೂಲಕ ಸುದ್ದಿ ಮಾಡಿದ್ದಾರೆ.
ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಶೇ.49ರಷ್ಟು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.
ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಉಲ್ಲೇಖಿಸಲಾದ ಅಂಕಿ-ಅಂಶಗಳು ಫಲಿತಾಂಶದ ಪ್ರತಿಬಿಂಬವಲ್ಲ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೇಗಿರಬಹುದು ಎಂಬುದರ ಬಗ್ಗೆ ಖಚಿತವಾದ ಸುಳಿವನ್ನು ನೀಡುವುದಕ್ಕೆ ಸಾಧ್ಯವಿಲ್ಲ.
ಏನಿದು ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆ?:
ಮೂಡ್ ಆಫ್ ದಿ ನೇಷನ್ ಎಂಬುದು ಇಂಡಿಯಾ ಟುಡೇ ಗ್ರೂಪ್ ಎರಡು-ವರ್ಷಕ್ಕೊಮ್ಮೆ ರಾಷ್ಟ್ರವ್ಯಾಪಿ ನಡೆಸುವ ಸಮೀಕ್ಷೆಯಾಗಿದೆ. ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಫಲಿತಾಂಶಗಳನ್ನು ಸಾಮಾನ್ಯವಾಗಿ ಪ್ರತಿ ಜನವರಿ ಮತ್ತು ಆಗಸ್ಟ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಹೆಚ್ಚಾಗಿ ಮುಖ್ಯ ವಿಷಯಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯದ ಅತ್ಯಂತ ನಿಖರ ಪ್ರತಿಬಿಂಬವಾಗಿರುತ್ತದೆ. ಒಂದು ದಶಕಕ್ಕೂ ಹೆಚ್ಚು ಕಾಲ, ಈ ಸಮೀಕ್ಷೆಯು ರಾಜಕೀಯ, ಅರ್ಥಶಾಸ್ತ್ರ, ಸಮಾಜ, ಕ್ರೀಡೆ, ಸಿನಿಮಾ ಮತ್ತು ವಿದೇಶಾಂಗ ವ್ಯವಹಾರಗಳ ಮೇಲೆ ಬದಲಾಗುತ್ತಿರುವ ರಾಷ್ಟ್ರೀಯ ನಿರೂಪಣೆಯನ್ನು ವಿವರಿಸುತ್ತಿದೆ.
ಯಾಕೆ ಮುಖ್ಯವಾಗುತ್ತಿದೆ ಈ ಸಮೀಕ್ಷೆ ಅಂಶ?:
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಫಲಿತಾಂಶ ಹೊರಬಂದಿದೆ. ಈ ಹಂತದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತಾಗಿ ಶೇ.49ರಷ್ಟು ಜನರು ಬೆಂಬಲ ವ್ಯಕ್ತಪಡಿಸಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಇದಕ್ಕೂ ಮೊದಲು ಹಲವು ಸಂಸ್ಥೆಗಳು ನಡೆಸಿರುವ ಚುನಾವಣಾ ಸಮೀಕ್ಷೆಗಳಲ್ಲೂ ಯೋಗಿ ಆದಿತ್ಯನಾಥ್ ಮತ್ತೊಂದು ಅವಧಿಗೆ ಮುಖ್ಯಮಂತ್ರಿ ಕುರ್ಚಿ ಏರುತ್ತಾರೆ ಎಂಬುದಾಗಿ ಹೇಳಿವೆ. ಇದರ ಮಧ್ಯೆ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿರುವುದು ಮಹತ್ವ ಪಡೆದುಕೊಂಡಿದೆ.
2017ರಲ್ಲಿ ಸಿಎಂ ಪಟ್ಟಕ್ಕೆ ಏರಿದ ಬಿಜೆಪಿ:
Recommended Video
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.