K. Sudhakar Profile: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರಿಚಯ
2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದರು. ತಮ್ಮ ಮೊದಲ ಯತ್ನದಲ್ಲಿಯೇ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ದ ಕೆ.ಪಿ ಬಚ್ಚೇಗೌಡರನ್ನು ಮಣಿಸಿ ಶಾಸಕರಾದರು.
ಚಿಕ್ಕಬಳ್ಳಾಪುರ, ಮಾರ್ಚ್ 03: ರಾಜ್ಯದಲ್ಲಿ ಅತಿ ಹೆಚ್ಚು ಹೂವು ಮತ್ತು ಹಣ್ಣುಗಳನ್ನು ಬೆಳೆಯುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾಗಿದ್ದಾರೆ. ಒಕ್ಕಲಿಗ ಸಮುದಾಯದ ಡಾ. ಕೆ. ಸುಧಾಕರ್ ಎಂಬಿಬಿಎಸ್ ಪದವೀಧರರು.
2007ರ ವರೆಗೆ ಚಿಕ್ಕಬಳ್ಳಾಪುರ ಅವಿಭಜಿತ ಕೋಲಾರ ಜಿಲ್ಲೆಯ ಭಾಗವಾಗಿತ್ತು. ಈ ಕ್ಷೇತ್ರದಲ್ಲಿ ರೈತ ಸಮುದಾಯವೇ ಹೆಚ್ಚಿನವರು. ಇಂತಹ ಕಡೆ ಡಾ. ಕೆ. ಸುಧಾಕರ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ. ಕೇಶವ ಸುಧಾಕರ್ 2013ರ ವಿಧಾನಸಭಾ ಚುನಾವಣೆಯಿಂದ ರಾಜಕೀಯಕ್ಕೆ ಧುಮುಕಿದರು.

27 ಜೂನ್ 1973ರಲ್ಲಿ ಜನಿಸಿದ ಕೆ.ಸುಧಾಕರ್ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರು. ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಧರರಾದ ಇವರು 2013ರ ವೇಳೆಗೆ ರಾಜಕೀಯಕ್ಕೆ ಪ್ರವೇಶಿಸಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದರು. ತಮ್ಮ ಮೊದಲ ಯತ್ನದಲ್ಲಿಯೇ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ದ ಕೆ.ಪಿ ಬಚ್ಚೇಗೌಡರನ್ನು ಮಣಿಸಿ ಶಾಸಕರಾದರು. ಸುಧಾಕರ್ 74,914 ಮತಗಳನ್ನು ಪಡೆದರೆ ಬಚ್ಚೇಗೌಡರು 59,866 ಮತಗಳನ್ನು ಪಡೆದು 15,048 ಮತಗಳಿಂದ ಸೋಲೊಪ್ಪಿಕೊಂಡರು.
ಇನ್ನು, 2018ರಲ್ಲಿಯೂ ಸುಧಾಕರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದರು. ಎರಡನೇ ಬಾರಿ ಕಾಂಗ್ರೆಸ್ನಿಂದ ಕಣಕ್ಕಿಳಿದ ಕೆ. ಸುಧಾಕರ್ 82,006 ಮತಗಳನ್ನು ಪಡೆದು ಕೆ.ಪಿ ಬಚ್ಚೇಗೌಡರ ಎದುರು 30,431 ಮತಗಳ ಅಂತರದಿಂದ ಗೆದ್ದರು. ಇಷ್ಟರಲ್ಲಿ ತಮ್ಮ ಗೆಲುವಿನ ಅಂತರವನ್ನು ದುಪ್ಪಟ್ಟು ಮಾಡಿಕೊಂಡಿದ್ದರು. ಅಲ್ಲದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಶಾಸಕ ಎಂಬ ದಾಖಲೆಗೂ ಪಾತ್ರರಾದರು. ಬಳಿಕ ಕಾಂಗ್ರೆಸ್ಗೆ ರಾಜೀನಾಮೆ ನೀಡಿದರು.
ಎರಡನೇ ಬಾರಿಗೆ ಶಾಸಕರಾಗಿದ್ದ ಡಾ.ಕೆ ಸುಧಾಕರ್ ಆಪರೇಷನ್ ಕಮಲಕ್ಕೆ ಒಳಗಾದ ಶಾಸಕರಲ್ಲಿ ಒಬ್ಬರು. ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ 18 ಜನ ಶಾಸಕರಲ್ಲಿ ಅವರೂ ಒಬ್ಬರಾಗಿದ್ದರು. ಜುಲೈ 7 2020ರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು. ಈ ಕಾರಣದಿಂದ 2019ರ ಡಿಸೆಂಬರ್ನಲ್ಲಿ ಉಪಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಿಜೆಪಿಯ ಸುಧಾಕರ್ 84,389 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜನಪ್ಪ 49,588 ಮತಗಳನ್ನು ಪಡೆದರು.

34,801 ಮತಗಳಿಂದ ಗೆದ್ದಿದ್ದ ಡಾ.ಕೆ. ಸುಧಾಕರ್ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾದರು. ನಾಲ್ಕನೇ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿಯ ಕ್ಯಾಬಿನೆಟ್ ಸಚಿವರಾಗಿದ್ದರು. ಡಾ.ಕೆ. ಸುಧಾಕರ್ ಅಧಿಕಾರ ವಹಿಸಿಕೊಳ್ಳುವಾಗ ಕೇವಲ 46 ವರ್ಷ ವಯಸ್ಸಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು.
ಬಿ.ಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ 2021 ರಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನವನ್ನು ಏರಿದರು. ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ. ಶ್ರೀರಾಮುಲು ಮತ್ತು ಇತರರ ಜೊತೆಗೆ ಕರ್ನಾಟಕದ ಕೋವಿಡ್ ಪ್ರತಿಕ್ರಿಯೆ ತಂಡದ ಭಾಗವಾಗಿ ಕೆಲಸ ಮಾಡಿದ್ದಾರೆ. ಕೊರೊನಾ ಮಾರ್ಗಸೂಚಿಗಳ ರಚನೆ ಮತ್ತು ಸಾಂಕ್ರಾಮಿಕ ರೋಗಕ್ಕೆ ತ್ವರಿತ ಪ್ರತಿಕ್ರಿಯೆಗಳಲ್ಲಿ ಪಾಲ್ಗೊಳ್ಳುವ ಸಚಿವರಲ್ಲಿ ಪ್ರಮುಖರಾಗಿದ್ದರು.

ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಸುಧಾಕರ್, ಪಕ್ಷಕ್ಕಿಂತ ತಮ್ಮ ಸ್ವಂತ ವರ್ಚಸ್ಸಿನಿಂದ ಹೆಚ್ಚು ಹೆಸರು ಗಳಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಯೋಜನೆಗಳನ್ನು ಘೋಷಿಸಿದ್ದಾರೆ. ರಾಷ್ಟ್ರೀಯ ನಾಯಕರನ್ನು, ಸಿನಿಮಾ ನಟರನ್ನು ಕರೆದು ಕಾರ್ಯಕ್ರಮಗಳ್ನನು ನಡೆಸಿದ್ದಾರೆ. ಚಿಕ್ಕಬಳ್ಳಾಪುರವನ್ನು ಸಿಂಗಾಪೂರ್ ಮಾಡುತ್ತೇನೆ ಎಂಬ ಭರವಸೆ ನೀಡಿದ್ದ ಅವರು, ತಾವು ಮಾತ್ರ ಅಭಿವೃದ್ದಿಯಾಗುತ್ತಿದ್ದಾರೆ ಎಂಬ ಆರೋಪಗಳು ಇವೆ. ಚಿಕ್ಕಬಳ್ಳಾಪುರದಲ್ಲಿ ಯಾವುದೇ ಯೋಜನೆಗಳು ಜಾರಿಯಾಗಬೇಕಿದ್ದರೂ ಅವರ ಒಪ್ಪಿಗೆ ಬೇಕು. ಅವರು ಹೇಳಿದಂತೆ ನಡೆಯಬೇಕು ಎಂಬ ಆರೋಪಗಳು ಕೇಳಿ ಬರುತ್ತಿವೆ. ಆದರೆ, ಅವರು ಮಾತ್ರ ಕ್ಷೇತ್ರದ ಮತದಾರ ಈ ಬಾರಿಯು ತನಗೆ ಮತ ಹಾಕುತ್ತಾರೆ ಎಂಬ ಭರವಸೆಯಲ್ಲಿದ್ದಾರೆ.
ಸದ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ನೀಡಲಾದೆ. ಈ ಮೂರು ಜಿಲ್ಲೆಗಳಲ್ಲಿರುವ ಒಟ್ಟು 15 ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಹೆಗಲ ಮೇಲೆ ಹೊತ್ತು ಅದಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ.












Click it and Unblock the Notifications