Karnataka Assembly Election 2023: ಧಾರವಾಡ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ಮುಂಬರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಜಿಲ್ಲೆಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಜಿಲ್ಲೆಯಲ್ಲಿ 7 ಕ್ಷೇತ್ರಗಳು ಇದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ನೇರ ಹಣಾಹಣಿ ಇದೆ. ಆದರೆ, ಜೆಡಿಎಸ್ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿ ಇದೆ ಎನ್ನುವುದು ಹಲವರ ಅಭಿಪ್ರಾಯ.
ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಧಾರವಾಡ ಪಶ್ಚಿಮ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಹುಬ್ಬಳ್ಳಿ ಧಾರವಾಡ ಪೂರ್ವ, ನವಲಗುಂದ, ಕಲಘಟಗಿ ಹಾಗೂ ಕುಂದಗೋಳ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಮಾಜಿ ಸಿಎಂ ಹಾಗೂ ಹಾಲಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರ ಕ್ಷೇತ್ರ ಬಹಳ ಹೈವೋಲ್ಟೇಜ್ ಕ್ಷೇತ್ರವಾಗಿದೆ.
ಸತತವಾಗಿ ಆರು ಬಾರಿ ಶಾಸಕರಾಗಿ ಜಗದೀಶ್ ಶೆಟ್ಟರ್ ಅವರು ಜಯ ಸಾಧಿಸಿದ್ದಾರೆ. ಇನ್ನು, ಇದೇ ಕ್ಷೇತ್ರದಿಂದ ಆರಿಸಿ ಬಂದು ಜದೀಶ್ ಶೆಟ್ಟರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಜಿಲ್ಲೆಯಲ್ಲಿನ ಕ್ಷೇತ್ರಗಳ ಸಂಕ್ಷಿಪ್ತ ಅಂಕಿಅಂಶ ಮತ್ತು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಸ್ಲೈಡಿನಲ್ಲಿ ಮುಂದುವರಿಸಲಾಗಿದೆ:

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಅವರ ಹೆಸರು, ಜೆಡಿಎಸ್ನಿಂದ ರಾಜು ನಾಯಕವಾಡಿ ಹಾಗೂ ಕಾಂಗ್ರೆಸ್ನಿಂದ ಭಾರಿ ಪೈಪೋಟಿ ಏರ್ಪಟ್ಟಿದೆ.
ಕಾಂಗ್ರೆಸ್ನಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದವರ ಸಂಖ್ಯೆ 8 ಇದೆ. ಸದಾನಂದ ಡಂಗನವರ, ಗಿರೀಶ ಗದಿಗೆಪ್ಪಗೌಡರ, ಅನಿಲಕುಮಾರ ಪಾಟೀಲ, ರಜತ್ ಉಳ್ಳಾಗಡ್ಡಿಮಠ ಸೇರಿದಂತೆ 8 ಜನ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕುಂದಗೋಳ ಕ್ಷೇತ್ರ
ಕುಂದಗೋಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಹಾಲಿ ಶಾಸಕಿ ಇರುವ ಕಾಂಗ್ರೆಸ್ನ ಕುಸುಮಾವತಿ ಶಿವಳ್ಳಿ ಅವರ ಕ್ಷೇತ್ರದಲ್ಲಿ ಕೂಡ ಬಹಳ ಪೈಪೋಟಿ ಏರ್ಪಟ್ಟಿದೆ. ಕುಂದಗೋಳ ಕ್ಷೇತ್ರಕ್ಕೆ ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ, ಮುತ್ತಣ್ಣ ಶಿವಳ್ಳಿ, ಎಂ.ಎಸ್. ಅಕ್ಕಿ, ಅರವಿಂದ ಕಟಗಿ ಸೇರಿದಂತೆ ಬರೋಬ್ಬರಿ 14 ಜನ ಕಾಂಗ್ರೆಸ್ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಶಾಸಕಿಯಾಗಿದ್ದರೂ ಇಲ್ಲಿ ಹೆಚ್ಚಿನ ಅರ್ಜಿ ಸಲ್ಲಿಕೆಯಾಗಿರುವುದು ಅಚ್ಚರಿಯನ್ನುಂಟು ಮಾಡಿದೆ. ಇನ್ನು ಬಿಜೆಪಿಯಿಂದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ, ಎಂಆರ್ ಪಾಟೀಲ್ ಹಾಗೂ ಜೆಡಿಎಸ್ನಿಂದ ಎಂಆರ್ ಜೋಡಮನಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಬಿಜೆಪಿಯ ಹಾಲಿ ಶಾಸಕ ಅರವಿಂದ್ ಬೆಲ್ಲದ ಪ್ರತಿನಿಧಿಸುವ ಕ್ಷೇತ್ರಕ್ಕೂ ಕೂಡ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಲ್ಲಿ ಬಿಜೆಪಿಯಿಂದ ಯಾವುದೇ ಪೈಪೋಟಿ ಇಲ್ಲ. ಆದರೆ, ಕಾಂಗ್ರೆಸ್ನಿಂದ ದೀಪಕ ಚಿಂಚೋರೆ, ಪಿ.ಎಚ್. ನೀರಲಕೇರಿ, ಕೀರ್ತಿ ಮೋರೆ ಸೇರಿದಂತೆ 10 ಜನರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ಇಲ್ಲಿ ಜೆಡಿಎಸ್ದಿಂದ ಯಾರು ಕಣಕ್ಕೆ ಇಳಿಯುತ್ತಾರೆ ಅನ್ನೋದೆ ಗೊತ್ತಿಲ್ಲ. ಯಾಕೆಂದರೆ ಇಲ್ಲಿ ಜೆಡಿಎಸ್ ಅಸ್ತಿತ್ವವೇ ಇಲ್ಲ ಎನ್ನುವ ಮಾತು ಹುಬ್ಬಳ್ಳಿ ರಾಜಕೀಯ ವಲಯದಲ್ಲಿದೆ.

ನವಲಗುಂದ ಕ್ಷೇತ್ರ
ನವಲಗುಂದ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ಕ್ಷೇತ್ರ ನವಲಗುಂದ. ಇಲ್ಲಿ ಬಿಜೆಪಿಯಿಂದ ಹಾಲಿ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಇನ್ನು, ಕಾಂಗ್ರೆಸ್ಗೆ ಬಂದ ಎನ್.ಎಚ್. ಕೋನರಡ್ಡಿ, ವಿನೋದ ಅಸೂಟಿ, ಮಾಜಿ ಸಚಿವ ಕೆ.ಎನ್. ಗಡ್ಡಿ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ 8 ಜನರು ಕಾಂಗ್ರೆಸ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇಲ್ಲಿಯೂ ಕೂಡ ಜೆಡಿಎಸ್ಗೆ ಅಸ್ತಿತ್ವ ಇಲ್ಲದಂತಾಗಿದೆ. ಮಾಜಿ ಶಾಸಕ ಎನ್ಹೆಚ್ ಕೋನರೆಡ್ಡಿ ಅವರು ಜೆಡಿಎಸ್ನಲ್ಲಿ ಇದ್ದರು. ಅವರೀಗ ಕಾಂಗ್ರೆಸ್ಗೆ ಬಂದು ಅಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದ್ದರಿಂದ ನವಲಗುಂದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹುಡುಕಾಟ ನಡೆದಿದೆ.

ಕಲಘಟಗಿ ಕ್ಷೇತ್ರ
ಕಲಘಟಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಕಲಘಟಗಿ ಕ್ಷೇತ್ರದ ಮೇಲೆ ಮಾಜಿ ಸಚಿವ ಸಂತೋಷ ಲಾಡ್, ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಂಗಾರೇಶ ಹಿರೇಮಠ ಕಣ್ಣಿಟ್ಟು ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿ ಬಿಜೆಪಿ ಹಾಲಿ ಶಾಸಕ ಶಾಂತಪ್ಪ ನಿಂಬಣ್ಣವರ ಇದ್ದಾರೆ.
ಆಡಳಿತ ವಿರೋಧಿ ಅಲೆ ಇರುವುದರಿಂದ ಒಂದು ವೇಳೆ ಕಾಂಗ್ರೆಸ್ನಿಂದ ಸಂತೋಷ್ ಲಾಡ್ ಅವರಿಗೆ ಟಿಕೆಟ್ ನೀಡಿದರೆ ಗೆಲುವು ಖಂಡಿತ ಎನ್ನಲಾಗುತ್ತಿದೆ. ಅಭಿವೃದ್ಧಿ ಕೂಡ ಶೂನ್ಯ ಇರುವುದರಿದ ಬಿಜೆಪಿ ವಿರೋಧಿ ಅಲೆ ಹುಟ್ಟುಕೊಂಡಿದೆ.
ಇನ್ನು, ಇಲ್ಲೂ ಕೂಡಾ ಜೆಡಿಎಸ್ ಅಭ್ಯರ್ಥೀ ಯಾರು ಅಂತಾ ಇನ್ನೂ ಘೋಷಣೆ ಮಾಡಿಲ್ಲ. ಇಲ್ಲಿಯೂ ಜೆಡಿಎಸ್ ಪಕ್ಷ ಇನ್ನುವರೆಗೂ ಖಾತೆಯನ್ನು ತೆರೆದಿಲ್ಲ.

ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರ
ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಇರುವ ಪೂರ್ವ ಕ್ಷೇತ್ರದಲ್ಲಿ ಟಿಕೆಟ್ಗೆ ಈ ಸಲ ಫೈಟ್ ನಡೆಯುತ್ತಿದೆ. ಪ್ರಸಾದ ಅಬ್ಬಯ್ಯಗೆ ಟಿಕೆಟ್ ಬೇಡ ನಮಗೆ ಕೊಡಿ ಎಂದು ಪಾಲಿಕೆ ಮಾಜಿ ಸದಸ್ಯ ಮೋಹನ ಹಿರೇಮನಿ, ಹನುಮಂತ ಬಂಕಾಪುರ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಪ್ರಸಾದ ಅಬ್ಬಯ್ಯ ಸೇರಿದಂತೆ ಮೂವರ ನಡುವೆ ಟಿಕೆಟ್ಗೆ ಫೈಟ್ ನಡೆಯುತ್ತಿದೆ.
ಬಿಜೆಪಿಯಿಂದ ಚಂದ್ರಶೇಖರ್ ಗೋಕಾಕ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ಬಾರಿ ಪ್ರಸಾದ್ ಅಬ್ಬಯ್ಯ ವಿರುದ್ಧ ಕೇವಲ ಒಂದು ಸಾವಿರ ಓಟ್ನಿಂದ ಸೋಲನ್ನಭಿವಿಸಿದ್ದರು.

ಧಾರವಾಡ ಗ್ರಾಮೀಣ ಕ್ಷೇತ್ರ
ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಧಾರವಾಡ ಗ್ರಾಮೀಣ ಕ್ಷೇತ್ರ ಕೂಡ ಪ್ರತಿಷ್ಠಿತ ಕಣವಾಗಿದೆ. ಇಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಜಿಲ್ಲಾ ಪಂಚಾಯತ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಈ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಟಿಕೆಟ್ಗಾಗಿ ಕೂಡ ಅರ್ಜಿ ಸಲ್ಲಿಸಿದ್ದಾರೆ.
ಇನ್ನು, ಸಾಕ್ಷಿ ನಾಶ ಕುರಿತು ಕೋರ್ಟ್ ಜಿಲ್ಲೆಗೆ ಬರದಂತೆ ಜಾಮೀನು ನೀಡಿದೆ. ಆದರೂ ಕೂಡ ಕೋರ್ಟ್ನಿಂದ ಅನುಮತಿ ಪಡೆದು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಇನ್ನು, ಇಸ್ಮಾಯಿಲ್ ತಮಟಗಾರ ಕೂಡ ಕಾಂಗ್ರೆಸ್ನಿಂದ ಅರ್ಜಿ ಸಲ್ಲಿಸಿದ್ದಾರೆ.
ಹಾಲಿ ಬಿಜೆಪಿ ಶಾಸಕ ಅಮೃತ್ ದೇಸಾಯಿ, ಸಾಮಾಜಿಕ ಹೋರಾಟಗಾರ ಬಸವರಾಜ್ ಕೊರವರ ಹಾಗೂ ತವನಪ್ಪ ಅಷ್ಟಗಿ ಬಿಜೆಪಿ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದು, ಹಾಲಿ ಶಾಸಕ ಅಮೃತ್ ದೇಸಾಯಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಇಲ್ಲಿಯೂ ಕೂಡ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಆಗಿದೆ. ಕಳೆದ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಶ್ರೀಕಾಂತ್ ಜಿಮನಾಳ್ ಚೆಕ್ ಬೌನ್ಸ್ ಕೇಸ್ನಲ್ಲಿ ಜೈಲುಪಾಲಾಗಿದ್ದಾರೆ. ಹೀಗಾಗಿ ಜೆಡಿಎಸ್ ಟಿಕೆಟ್ ಯಾರ ಪಾಲಾಗಲಿದೆ ಎನ್ನುವುದನ್ನು ಕಾದು ನೋಡಬೇಕು.
ಧಾರವಾಡ ಗ್ರಾಮೀಣ, ಪಶ್ಚಿಮ, ಪೂರ್ವ, ಸೆಂಟ್ರಲ್, ಕುಂದಗೋಳ, ನವಲಗುಂದ, ಕಲಘಟಗಿ ಸೇರಿ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಿವೆ. ಇವುಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ವಿಶೇಷವಾಗಿದ್ದು, 2023ರ ವಿಧಾನಸಭಾ ಚುನಾವಣೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ.












Click it and Unblock the Notifications