Karnataka Assembly Election 2023: ರಾಮನಗರ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ಈಗಾಗಲೇ 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ರಂಗತಾಲೀಮು ಆರಂಭಿಸಿವೆ. ಕಾಂಗ್ರೆಸ್ ಪಕ್ಷ ಭಾರತ್ ಜೋಡೊ ಯಾತ್ರೆ ಮುಗಿಸಿ, ಬಸ್ ಯಾತ್ರೆ ಪಾರಂಭಿಸುವ ಚಿಂತನೆ ನಡೆಸಿದೆ. ಬಿಜೆಪಿ ಪಕ್ಷ ಕೂಡ ಜನ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಮತದಾರನ್ನು ಸೆಳೆಯುವ ಕೆಲಸಕ್ಕೆ ಮುಂದಾಗಿದೆ. ಹಾಗೆಯೇ ಪಂಚರತ್ನ ರಥಯಾತ್ರೆಯ ಮೂಲಕ ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ಯಾವ ರೀತಿ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಮತದಾರರಿಗೆ ಅರಿವು ಮೂಡಿಸುತ್ತಲೇ ಇದೆ.
ಇತ್ತ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ಸಿಗಬಹುದು, ಯಾರು ಟಿಕೆಟ್ನಿಂದ ವಂಚಿತರಾಗಬಹುದು ಎಂಬ ಬಿಸಿಬಿಸಿ ಚರ್ಚೆಯಲ್ಲಿ ಜನರು ತಲ್ಲೀನರಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಟಿಕೆಟ್ ಆಕಾಂಕ್ಷಿಗಳು ಮೂರು ಪಕ್ಷಗಳಲ್ಲಿನ ವರಿಷ್ಠರನ್ನು ಮನವೊಲಿಸಿ ಪಕ್ಷದ ಬಿ ಪಾರಂ ಪಡೆಯಲು ಪೈಪೋಟಿಗೆ ಬಿದ್ದಿವರಂತೆ ಕಸರತ್ತು ಆರಂಭಿಸಿದ್ದಾರೆ.
ಹಾಗೆಯೇ ರಾಮನಗರ ಜಿಲ್ಲೆಯಲ್ಲಿಯೂ ಚುನಾವಣೆ ಕಾವು ರಂಗೇರುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಇಲ್ಲಿ ಅಲ್ಲದೇ ಪ್ರಮುಖ ನಾಯಕರು ಸ್ಪರ್ಧೆ ಮಾಡುವ ಮೂಲಕ ಜಿಲ್ಲೆಯೂ ರಾಜ್ಯದ ಗಮನ ಸೆಳೆಯುತ್ತಿದೆ.
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉರುಳಿಸಿದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಇವರ ಸ್ಪರ್ಧೆಯಿಂದಾಗಿ ಇಡೀ ರಾಜ್ಯದ ಗಮನ ಸೆಳೆಯುತ್ತಿವೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಪೈಪೋಟಿ
ರೇಷ್ಮೆ ನಾಡು ಖ್ಯಾತಿಯ ರಾಮನಗರ ವಿಧಾನಸಭಾ ಕ್ಷೇತ್ರ ಮೊದಲಿನಿಂದಲೂ ರಾಜಕೀಯ ಕ್ಷೇತ್ರಕ್ಕೆ ಹಲವು ದಿಗ್ಗಜರನ್ನು ಕೊಡುಗೆ ನೀಡಿದ ಖ್ಯಾತಿಯನ್ನು ಪಡೆದಿದೆ. ವಿಧಾನಸೌಧ ಕಟ್ಟಿಸಿದ ಕೆಂಗಲ್ ಹನುಮಂತಯ್ಯ ದೇಶದ ಏಕೈಕ ಕನ್ನಡಿಗ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇವರೆಲ್ಲರನ್ನು ರಾಜಕೀಯ ರಂಗಕ್ಕೆ ಕೊಡುಗೆ ನೀಡಿದ ಕಿರ್ತಿ ಪಡೆದಿದೆ.
ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ತಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದ ನಂತರದಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷ ಭದ್ರಕೋಟೆ ಎಂದರೆ ತಪ್ಪಾಗಲಾರದು. ಹಾಗಾಗಿ ಕಳೆದ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಎರಡಲ್ಲೂ ಜಯಗಳಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಆಯ್ಕೆ ಮಾಡಿಕೊಂಡು ನಂತರ ನಡೆದ ಉಪ ಚುನಾವಣೆಯಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಯವರನ್ನು ಗೆಲ್ಲಿಸಿಕೊಂಡರು.
ಕ್ಷೇತ್ರದಲ್ಲಿ ಪತಿ ಎಚ್.ಡಿ.ಕುಮಾರಸ್ವಾಮಿ ಯಿಂದ ತೆರವಾದ ಸ್ಥಾನಕ್ಕೆ ಸ್ಪರ್ಧೆ ಮಾಡಿದ ಅನಿತಾ ಕುಮಾರಸ್ವಾಮಿ ಕ್ಷೇತ್ರದ ಪ್ರಥಮ ಮಹಿಳಾ ಶಾಸಕಿ ಹಾಗೂ ಇತಿಹಾಸದಲ್ಲೇ ಅತಿ ಹೆಚ್ಚು 1 ಲಕ್ಷಕ್ಕೂ ಹೆಚ್ಚು ಅಂತರದ ಮತ ಪಡೆದ ಜಯಗಳಿಸಿದರು. ಪತಿಯಿಂದ ಬಳುವಳಿಯಾಗಿ ಬಂದ ಕ್ಷೇತ್ರವನ್ನು ಇದೀಗ ಮಗ ನಿಖಿಲ್ ಕುಮಾರಸ್ವಾಮಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಾರೆ.
ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಸಮಯದಲ್ಲಿ, ಇನ್ನೂ ಪಕ್ಷದ ವತಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುನ್ನವೇ ಸ್ವತಃ ಶಾಸಕಿ ಅನಿತಾ ಕುಮಾರಸ್ವಾಮಿ ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ಅಧಿಕೃತ ಘೋಷಣೆ ಮಾಡಿದ್ದರು. ಹಾಗಾಗಿ ಜೆಡಿಎಸ್ ಪಕ್ಷದಿಂದ ರಾಜ್ಯ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದೆ.
ಇನ್ನು ಮುಖ್ಯಮಂತ್ರಿ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅದೃಷ್ಟದ ಕ್ಷೇತ್ರ ಎನ್ನುವ ಕಾರಣಕ್ಕೆ ರಾಮನಗರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ. ಅವರನ್ನು ಬಿಟ್ಟರೆ ಬಹುತೇಕ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಚ ಇಕ್ಬಾಲ್ ಹುಸೇನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವುದು ಖಚಿತ. ಇನ್ನೂ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಅನ್ನುವಂತಾಗಿದೆ.
ರೇಷ್ಮೆ ಮಂಡಳಿ ಅಧ್ಯಕ್ಷ ಗೌತಮ್ ಗೌಡ, ಕೆಆರ್ಡಿಎಲ್ ಅಧ್ಯಕ್ಷ ರುದ್ರೇಶ್ ಅಪ್ತ ಬಿಡದಿ ಸ್ಮಾರ್ಟ್ ಸಿಟಿ ಅಧ್ಯಕ್ಷ ವರದರಾಜಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅಪ್ತ ಗೋವಿಂದರಾಜು ಗೌಡ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಚಿಗಳಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಆಪ್ತರಾಗಿರುವ ಹಿನ್ನೆಲೆಯಲ್ಲಿ ಬಿಫಾರಂ ಗೌತಮ್ ಗೌಡಗೆ ಸಿಗುವ ನಿರೀಕ್ಷೆ ಇದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಟಿಕೆಟ್ ಫೈಟ್
ಬೊಂಬೆ ನಾಡು ಎಂಬ ಖ್ಯಾತಿ ಪಡೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಕಳೆದ ಬಾರಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕೊಡುಗೆ ನೀಡದ ಹೆಗ್ಗಳಿಕೆ ಪಡೆದಿದೆ. ಈ ಬಾರಿ ಮುಂದಿನ ಮುಖ್ಯಮಂತ್ರಿ ಬಿಂಬಿತರಾಗಿರುವ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಹಿಂದೆ ಇದ್ದ ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹಲವು ಬಾರಿ ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಟಿಕಿಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಇತರೆ ನಾಯಕರೊಂದಿಗೆ ಸಿಪಿವೈ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಅಚ್ಚರಿಯಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಹಾಗೆಯೇ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಹಲವರು ಕಸರತ್ತು ನಡೆಸಿದ್ದಾರೆ. ಪಕ್ಷದಲ್ಲಿ ತಳ ಮಟ್ಟದಿಂದ ದುಡಿದವರಿಗೆ ಟಿಕೆಟ್ ನೀಡಬೇಕು ಎಂಬ ನಿಯಮವಿದೆ. ಹಾಗಾಗಿ ತಮಗೆ ಟಿಕೆಟ್ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಯವರ ಸಂಬಂಧಿ ಶರತ್ ಚಂದ್ರ ಅವರು ಬಹಿರಂಗವಾಗಿಯೇ ಬೇಡಿಕೆ ಮುಂದಿಟ್ಟಿದ್ದಾರೆ. ಅಲ್ಲದೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿರುವ ಪಿ.ಪ್ರಸನ್ನ ಕೂಡ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.

ಕನಕಪುರ ವಿಧಾನಸಭಾ ಕೇತ್ರದಲ್ಲಿ "ಕೈ" ಕಾಳಗ
ರಿಪಬ್ಲಿಕ್ ಆಫ್ ಕನಕಪುರ ಎನ್ನಲಾಗವ ಈ ಕ್ಷೇತ್ರದಲ್ಲಿ ಡಿ.ಕೆ ಸಹೋದರ ಪಾರುಪತ್ಯವಿದೆ. ಸಂಸದ ಡಿ.ಕೆ.ಸುರೇಶ್ ಹಾಗೂ ಎಂ.ಎಲ್.ಸಿ ರವಿ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಿಂದ ಎಲ್ಲಾ ಚುನಾವಣೆಗಳನ್ನು ಪ್ರತಿಷ್ಠಿತವಾಗಿ ಪರಿಗಣಿಸಲಾಗಿದೆ. ಚುನಾವಣೆ ಎದುರಿಸುವ ತಂತ್ರಗಾರಿಕೆಯಿಂದಾಗಿ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಕೈ ಮೇಲಾಗಿದೆ.
ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಡಿ.ಕೆ. ಶಿವಕುಮಾರ್ ಬಿಟ್ಟರೆ ಯಾರು ಆಕಾಂಕ್ಷಿಗಳು ಇಲ್ಲ. ಈ ಮೂಲಕ ಕನಕಪುರ ಕಾಂಗ್ರೆಸ್ ಭದ್ರಕೋಟೆ ಎನ್ನಲಾಗಿದೆ. ಆದರೂ ಜೆಡಿಎಸ್ ಪಕ್ಷದಿಂದ ಸಮಾನ್ಯ ಕಾರ್ಯಕರ್ತರ ಸ್ಪರ್ಧೆ ಮಾಡಿದರೂ ಸುಮಾರು 60 ಸಾವಿರಕ್ಕೂ ಹೆಚ್ಚು ಮತ ಪಡೆಯುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಪ್ರತಿ ಬಾರಿ ಪ್ರಬಲ ಅಭ್ಯರ್ಥಿಯನ್ನು ಕಣಕಿಳಿಸಲು ಜೆಡಿಎಸ್ ವರಿಷ್ಠರು ಹಿಂದೇಟು ಹಾಕುತ್ತಾರೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.
ಮಾಜಿ ಸಚಿವ ಪಿ.ಜಿ.ಆರ್. ಸಿಂದ್ಯ ಹಾಗೂ ದೂಂತುರು ವಿಶ್ವನಾಥ್ ಜೆಡಿಎಸ್ ಪಾಳಯದಿಂದ ದೂರಾಗಿದ್ದಾರೆ. ಪ್ರಬಲ ಅಭ್ಯರ್ಥಿಗಾಗಿ ಜೆಡಿಎಸ್ ಹುಟುಕಾಟದಲ್ಲಿದೆ. ಬಹುತೇಕ ಬಾಲನರಸಿಂಹಯ್ಯ ಅಥವಾ ನಲ್ಲಹಳ್ಳಿ ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಅಭ್ಯರ್ಥಿ ಆಗಬಹುದ ಎನ್ನಲಾಗುತ್ತಿದೆ.
ಇನ್ನು ಬಿಜೆಪಿ ಪಕ್ಷದಿಂದ ಕಳೆದ ಬಾರಿ ಸ್ಪರ್ದೆ ಮಾಡಿದ್ದ ನಂದಿನಿ ಗೌಡ ಹಾಗೂ ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೆಸರು ಕೇಳಿ ಬರುತ್ತಿದೆ. ನಂದಿನಿ ಗೌಡ ಅವರಿಗೆ ಸ್ಥಳೀಯ ಮುಖಂಡರ ಬಾರಿ ವಿರೋದ್ಧ ಇದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಜಗನ್ನಾಥ್ ಅವರಿಗೆ ಬಿಜೆಪಿ ಬಿಫಾರಂ ಸಿಗಬಹುದು ಎನ್ನಲಾಗಿದೆ.

ಮಾಗಡಿಯಲ್ಲಿ ಜೆಡಿಎಸ್ನದ್ದೇ ದರ್ಬಾರ್
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ಕಾಲದ ಪರಮಾಪ್ತ ಗೆಳೆಯ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಕಳೆದ ಚುನಾವಣೆಯಲ್ಲಿ ಜೆಡಿಎಸ್ ತೊರೆದಿದ್ದರು. ಆಗ ಅವರು ಕಾಂಗ್ರೆಸ್ ಕೈ ಹಿಡಿದು ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಎದುರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಈ ಬಾರಿ ಮತ್ತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಎ.ಮಂಜುನಾಥ್ ಜೆಡಿಎಸ್ ಸೇರ್ಪಡೆಯಾಗಿ 50 ಸಾವಿರ ಮತಗಳ ಅಂತರದಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಕೂಡ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಘೋಷಣೆಯಾಗಿದೆ.
ಇನ್ನು ಜಿಲ್ಲಾ ಉಸ್ತುವಾರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗಾಗಿ ಹಲವು ಮುಖಂಡರು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ. ಪ್ರಮುಖವಾಗಿ ಬಿಜೆಪಿ ಮುಖಂಡ ಪ್ರಸಾದ್ ಗೌಡ, ಕೆಂಪೇಗೌಡ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ಸಮಾಜ ಸೇವಕ ರಂಗದಾಮಯ್ಯ ಪೈಪೋಟಿಯಲ್ಲಿದ್ದು, ಬಹುತೇಕ ಬಿಜೆಪಿ ಅಭ್ಯರ್ಥಿಯಾಗಿ ಪ್ರಸಾದ್ ಗೌಡ ಆಯ್ಕೆಯಾಗುವ ಸಂಭವ ಹೆಚ್ಚಿದೆ ಎನ್ನಲಾಗಿದೆ.












Click it and Unblock the Notifications