Karnataka Assembly Election 2023: ಶಿವಮೊಗ್ಗ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಿನೇ ದಿನೆ ಆಕಾಂಕ್ಷಿಗಳ ಸಂಖ್ಯೆ, ಅವರ ಬೆಂಬಲಿಗರ ನಡುವಿನ ಮುಸುಕಿನ ಗುದ್ದಾಟ ಹೆಚ್ಚಾಗುತ್ತಿದೆ. ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಪೈಪೋಟಿಯಿದೆ.
ಉಳಿದಂತೆ ಜಿಲ್ಲೆಯಲ್ಲಿ ಆಮ್ ಅದ್ಮಿ ಪಕ್ಷ ಕಮಾಲ್ ಮಾಡಲು ಶತಪ್ರಯತ್ನ ಮಾಡುತ್ತಿದೆ. ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆಯಾದ್ದರಿಂದ ರಾಜಕೀಯವಾಗಿ ಪ್ರಬಲ ಕ್ಷೇತ್ರವಾಗಿದೆ. ಮೂರು ಪಕ್ಷಗಳಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಫಲಿತಾಂಶ ಮಟ್ಟಿಗೆ ಅತ್ಯಂತ ಪ್ರಮುಖದ್ದಾಗಿದೆ.
ಈ ಬಾರಿಯ ಚುನಾವಣೆ ಹಾಲಿ ಶಾಸಕರನ್ನು ಮಾಜಿ ಮಾಡುವ ಸಾಧ್ಯತೆ ಇದೆ. ಮಾಜಿಗಳಿಗೆ ಪಟ್ಟ ಸಿಗುವ ಸಂಭವವು ಇದೆ. ಇದರ ಜೊತೆಗೆ ಹಲವರ ರಾಜಕೀಯ ಭವಿಷ್ಯವನ್ನು ಅಂತ್ಯಗೊಳಿಸುವ ಚುನಾವಣೆಯು ಇದಾಗಿದೆ. ಹಾಗಾಗಿ ಈ ಭಾರಿ ಆಕಾಂಕ್ಷಿಗಳ ನಡುವೆ ಪ್ರಬಲ ಪೈಪೋಟಿ ಕಾಣಸಿಗುತ್ತಿದೆ.
ಯಡಿಯೂರಪ್ಪನವರ ವರ್ಚಸ್ಸು ಹೆಚ್ಚಾಗಿರುವ ಜಿಲ್ಲೆ ಇದಾಗಿದ್ದು, ಇಲ್ಲಿನ ಫಲಿತಾಂಶ ಬಿಎಸ್ವೈ ಅವರಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜಿಲ್ಲೆಯ ಅಸೆಂಬ್ಲಿ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಯಾರು ಎನ್ನುವುದನ್ನು ಸೈಡಿನಲ್ಲಿ ಮುಂದುವರಿಸಲಾಗಿದೆ:

ಶಿವಮೊಗ್ಗದಲ್ಲಿ ಯಾರು ಸ್ಪರ್ಧಾ ಕಣದಲ್ಲಿ?
ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಶಿವಮೊಗ್ಗ ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರು ಶಾಸಕರಾಗಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿಯಿಂದ ಅವರಿಗೆ ಟಿಕೆಟ್ ಸಿಗಲಿದೆಯೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ದರಿಂದ ಬಿಜೆಪಿಯಲ್ಲಿ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡ ಮಾಜಿ ಅಧ್ಯಕ್ಷ ಜ್ಯೋತಿ ಪ್ರಕಾಶ್, ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಸೇರಿದಂತೆ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪಾಲಿಕೆ ಸದಸ್ಯ ಮತ್ತು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್.ಸಿ.ಯೋಗೇಶ್ ಪ್ರಬಲ ಆಕಾಂಕ್ಷಿಗಳು. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಕುಗ್ಗಿದ್ದು, ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಅಭ್ಯರ್ಥಿಯಾಗಬಹುದು ಎನ್ನುವ ಮಾತುಗಳು ಕೇಳಿಬರುತ್ತಿದೆ.

ಕುತೂಹಲಕ್ಕೆ ಕಾರಣವಾದ ಭದ್ರಾವತಿ ವಿಧಾನಸಭಾ ಕ್ಷೇತ್ರ
ಭದ್ರಾವತಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೇರಾನೇರ ಹಣಾಹಣಿ ಇದೆ. ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರು ನಿಧನರಾಗಿದ್ದಾರೆ. ಅವರ ಪತ್ನಿ ಶಾರದಾ ಅಪ್ಪಾಜಿ ಅವರಿಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದೆ.
ಕಾಂಗ್ರೆಸ್ ಪಕ್ಷದಿಂದ ಶಾಸಕ ಬಿ.ಕೆ.ಸಂಗಮೇಶ್ವರ ಅವರೆ ಕಣಕ್ಕಿಳಿಯಲಿದ್ದಾರೆ. ಇನ್ನು ಬಿಜೆಪಿಯಿಂದ ಧರ್ಮಪ್ರಸಾದ್, ಮಂಗೋಟೆ ರುದ್ರೇಶ್ ಹೈಕಮಾಂಡ್ ಟಿಕೆಟ್ ನೀಡುವ ನಿರೀಕ್ಷೆಯಲ್ಲಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿನಿಧಿಸುವ ತೀರ್ಥಹಳ್ಳಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ. ಬಿಜೆಪಿಯಿಂದ ಆರಗ ಜ್ಞಾನೇಂದ್ರ ಮತ್ತೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನು ಜೆಡಿಎಸ್ ಪಕ್ಷದಿಂದ ಈಗಾಗಲೇ ಯಡೂರು ರಾಜಾರಾಂ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್
ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಪ್ರತಿ ಬಾರಿಯಂತೆ ಈ ಬಾರಿಯೂ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಇದೆ. ಬಿಜೆಪಿಯಿಂದ ಶಾಸಕ ಹಾಲಪ್ಪ ಪುನಃ ಸ್ಪರ್ಧಿಸುವ ಸಂಭವ ಹೆಚ್ಚಿದೆ.
ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಅವರ ಪುತ್ರಿ ಡಾ.ರಾಜನಂದಿನಿ ಕಾಗೋಡು, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಬಿಜೆಪಿಗೆ ಭಾರೀ ಪೈಪೋಟಿ ನೀಡಲು ಸಿದ್ಧತೆ ಆರಂಭಿಸಿದ್ದಾರೆ.

ಸೊರಬ ವಿಧಾನಸಭಾ ಕ್ಷೇತ್ರ ಕ್ಷೇತ್ರದಲ್ಲಿ ಯಾರಿಗೆ ಬಿಜೆಪಿ ಟಿಕೆಟ್
ಸೊರಬ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಸೊರಬ ಸಹೋದರರ ಸವಾಲ್ ನಿಂದಾಗಿ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಮಕ್ಕಳ ನಡುವೆ ಜಿದ್ದಾಜಿದ್ದಿಯ ಪೈಪೋಟಿ ಇದೆ.
ಶಾಸಕ ಕುಮಾರ್ ಬಂಗಾರಪ್ಪ ಅವರು ಬಿಜೆಪಿಯಿಂದ ಮತ್ತೆ ಸ್ಪರ್ಧಿಸುವ ಸಾಧ್ಯತೆ ಇದೆ. ಇನ್ನು ಕಾಂಗ್ರೆಸ್ ಪಕ್ಷದಿಂದ ಮಧು ಬಂಗಾರಪ್ಪ ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ನಡುವೆ ತೀವ್ರ ಹಣಾಹಣಿ ಏರ್ಪಡಲಿದೆ.

ಬಿಎಸ್ವೈಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಶಿಕಾರಿಪುರ ವಿಧಾನಸಭಾ ಕ್ಷೇತ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಶಿಕಾರಿಪುರ ಬಿಜೆಪಿ ಭದ್ರಕೋಟೆಯಾಗಿದ್ದು, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
ಒಂದು ವೇಳೆ ವಿಜಯೇಂದ್ರ ಬೇರೆ ಕ್ಷೇತ್ರದಲ್ಲಿ ಸ್ಫರ್ಧಿಸಿದರೆ, ಯಡಿಯೂರಪ್ಪ ಅವರ ಕುಟುಂಬದ ಬೇರೆ ಸದಸ್ಯರು ಬಿಜೆಪಿಯಿಂದ ಅಖಾಡಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಕಾಂಗ್ರೆಸ್ ಪಕ್ಷದಿಂದ ಗೋಣಿ ಮಾಲತೇಶ್ ಹಾಗೂ ಉಳ್ಳಿ ದರ್ಶನ್ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಶಿವಮೊಗ್ಗ ಗ್ರಾಮಾಂತರ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಜೆಡಿಎಸ್ ಪಕ್ಷದಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಹೆಸರು ಪ್ರಕಟಿಸಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಡಾ. ಶ್ರೀನಿವಾಸ ಕರಿಯಣ್ಣ, ರವಿಕುಮಾರ್ ಹಾಗೂ ಪಲ್ಲವಿ ಹೈಕಮಾಂಡ್ ಟಿಕೆಟ್ ನೀಡುವ ನಿರೀಕ್ಷೆಯಲ್ಲಿದ್ದಾರೆ. ಆಕಾಂಕ್ಷಿಗಳಾಗಿದ್ದಾರೆ.












Click it and Unblock the Notifications