ಸಿಎಂ ಕಾನೂನು ಸಲಹೆಗಾರ, ಶಾಸಕ ಎ. ಎಸ್. ಪೊನ್ನಣ್ಣ ಪರಿಚಯ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ. ಎಸ್. ಪೊನ್ನಣ್ಣ ನೇಮಕ ಮಾಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು 83,791 ಮತಗಳನ್ನು ಪಡೆದು ಬಿಜೆಪಿಯ ಕೆ. ಜಿ. ಬೋಪಯ್ಯ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಎ. ಎಸ್. ಪೊನ್ನಣ್ಣ ನೇಮಕದ ಕುರಿತು ಕರ್ನಾಟಕ ರಾಜ್ಯಪಾಲರ ಅದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ವಿ. ಸುನಂದಮ್ಮ, ಸರ್ಕಾರದ ಅಧೀನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಜುಲೈ 31ರಂದು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಎ. ಎಸ್. ಪೊನ್ನಣ್ಣ ಶಾಸಕರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಕಲ್ಲುಗುಂಡಿ ಎಸ್ಟೇಟ್, ಬೆಳ್ಳೂರು ಗ್ರಾಮ, ಹೈಸೂಡ್ಲೂರು ಅಂಚೆ, ಹುದಿಕೇರಿ, ಪೊನ್ನಂಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಎ. ಎಸ್. ಪೊನ್ನಣ್ಣ ಪರಿಚಯ; ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ. ಎಸ್. ಪೊನ್ನಣ್ಣ ಹಿರಿಯ ವಕೀಲರು. ಈ ಬಾರಿಯ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಕಣಕ್ಕಿಳಿಯಲು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.
ಕೊಡಗು ಜಿಲ್ಲೆಯ ಎರಡು ಸ್ಥಾನಗಳಲ್ಲಿಯೂ ಈ ಬಾರಿ ಕಾಂಗ್ರೆಸ್ ಜಯಗಳಿಸಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಎ. ಎಸ್. ಪೊನ್ನಣ್ಣ 83,791 ಮತಗಳನ್ನು ಪಡೆದು ತಮ್ಮ ಎದುರಾಳಿ ಬಿಜೆಪಿಯ ಕೆ. ಜಿ. ಬೋಪಯ್ಯ ಸೋಲಿಸಿ (79,500 ಮತಗಳು) ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಎ. ಎಸ್. ಪೊನ್ನಣ್ಣ ಕರ್ನಾಟಕ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾಗಿದ್ದ ಎ. ಕೆ. ಸುಬ್ಬಯ್ಯ ಅವರ ಪುತ್ರ. ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಿಂದ 1997ರಲ್ಲಿ ಪದವಿ ಪಡೆದಿದ್ದಾರೆ. ಜುಲೈ 10,2014 ರಿಂದ ಏಪ್ರಿಲ್ 29, 2019ರ ತನಕ ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಕೆಲಸ ಮಾಡಿದ್ದಾರೆ. ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದ ಅವರನ್ನು ಬಳಿಕ ಸರ್ಕಾರ ಎಎಜಿ-1 ಆಗಿ ನೇಮಕ ಮಾಡಿತ್ತು.
ಹಲವಾರು ಮಹತ್ವದ ಪ್ರಕರಣಗಳಲ್ಲಿ ಎ. ಎಸ್. ಪೊನ್ನಣ್ಣ ಕರ್ನಾಟಕ ಸರ್ಕಾರದ ಪರವಾಗಿ ಹೈಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪಕ್ಷ ಸೇರಿದ ಬಳಿಕ ಅವರು ಪಕ್ಷದ ಕಾನೂನು ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಎ. ಎಸ್. ಪೊನ್ನಣ್ಣ ಮತ್ತು ವೀಣಾ ಅಚ್ಚಯ್ಯ ಹೆಸರು ಕೇಳಿ ಬಂದಿತ್ತು. ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿ, ಯಾರಿಗೆ ಟಿಕೆಟ್ ನೀಡಬೇಕು? ಎಂದು ಅಭಿಪ್ರಾಯವನ್ನು ಸಹ ಸಂಗ್ರಹ ಮಾಡಿದ್ದರು.
ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿನ ಓಟಕ್ಕೆ ತಡೆ ಹಾಕಲು ಕೊಡವರೇ ಆದ ಎ. ಎಸ್. ಪೊನ್ನಣ್ಣಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಅಂತಿಮವಾಗಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಚುನಾವಣೆಯಲ್ಲಿಯೂ ಸಹ ಅವರು ಗೆದ್ದು ಬಂದರು.











Click it and Unblock the Notifications