ಸಂಸತ್, ವಿಧಾನಸಭೆಯಲ್ಲಿರುವ ಒಂದೇ ಕುಟುಂಬದವರ ಪಟ್ಟಿ!
ಬೆಂಗಳೂರು, ಮೇ 28 : 2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಚುನಾವಣೆಗೆ ಮೊದಲು ಕುಟುಂಬ ರಾಜಕಾರಣದ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಅದಕ್ಕೆ ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿದಿದ್ದು ಕಾರಣವಾಗಿತ್ತು.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ದೇವೇಗೌಡರ ಕುಟುಂಬದಿಂದ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಗೆದ್ದು ಸಂಸತ್ ಪ್ರವೇಶ ಮಾಡಿದ್ದಾರೆ. ಆದರೆ, ಬೇರೆ ಪಕ್ಷಗಳೂ ಕುಟುಂಬ ರಾಜಕೀಯದಿಂದ ದೂರವೇನಿಲ್ಲ.
ಅಪ್ಪ-ಮಗ, ಮಾವ-ಅಳಿಯ, ಅಣ್ಣ-ತಮ್ಮ, ಗಂಡ-ಹೆಂಡತಿ, ಚಿಕ್ಕಪ್ಪ-ಮಗ ಹೀಗೆ ಹಲವರು ಕುಟುಂಬ ರಾಜಕೀಯದಲ್ಲಿದ್ದಾರೆ. ಕುಟುಂಬ ರಾಜಕೀಯದ ವಿಚಾರದಲ್ಲಿ ಯಾವುದೇ ಪಕ್ಷದವರು ಎದುರಾಳಿಗಳನ್ನು ಟೀಕಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ.
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಲೋಕಸಭೆ, ವಿಧಾನಸಭೆಯಲ್ಲಿರುವ ಕುಟುಂಬದವರ ಪರಿಚಯ ಇಲ್ಲಿದೆ. ದೇಶದಲ್ಲಿ ಹಲವಾರು ರಾಜಕೀಯ ಪಕ್ಷಗಳೂ ಸಹ ಕುಟುಂಬ ರಾಜಕೀಯಕ್ಕೆ ಬೆಂಬಲ ನೀಡುತ್ತಿವೆ...

ಡಾ. ಉಮೇಶ್ ಜಾಧವ್, ಅವಿನಾಶ್ ಜಾಧವ್
ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದ ಡಾ.ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿದು ಜಯಗಳಿಸಿದ್ದಾರೆ. ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಅವರು ಬಿಜೆಪಿಯಿಂದ ಕಣಕ್ಕಿಳಿದು ಜಯಗಳಿಸಿದ್ದಾರೆ.

ಒಬ್ಬರು ಲೋಕಸಭೆ, ಮತ್ತೊಬ್ಬರು ವಿಧಾನಸಭೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಡಿ.ಕೆ.ಸುರೇಶ್ ಸಂಸತ್ ಪ್ರವೇಶ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಶಾಸಕರಾಗಿದ್ದು, ಕರ್ನಾಟಕದ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದಾರೆ.

ಮಾವ ಸಂಸದ ಅಳಿಯ ಶಾಸಕ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ಸಂಸತ್ ಪವೇಶ ಮಾಡಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರ ಅಳಿಯ ಬಿ.ಹರ್ಷವರ್ಧನ್ ಅವರು ನಂಜನಗೂಡು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಯಡಿಯೂರಪ್ಪ, ಬಿ.ವೈ.ರಾಘವೇಂದ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಬಿ.ವೈ.ರಾಘವೇಂದ್ರ ಸಂಸತ್ ಪವೇಶ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆಗೆ ಆರಿಸಿ ಬಂದಿದ್ದಾರೆ.

ಗಂಡ ಸಂಸದ, ಹೆಂಡತಿ ಶಾಸಕಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಪತ್ನಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.

ಅಪ್ಪ, ಮಕ್ಕಳು ಇಬ್ಬರು ಜನಪ್ರತಿನಿಧಿಗಳು
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರು ಚುನಾವಣೆಯಲ್ಲಿ ಜಯಗಳಿಸಿ ಸಂಸತ್ ಪ್ರವೇಶಿಸಿದ್ದಾರೆ. ಅವರ ಪುತ್ರ ಜ್ಯೋತಿ ಗಣೇಶ್ ಅವರು ತುಮಕೂರು ನಗರ ಕ್ಷೇತ್ರದ ಬಿಜೆಪಿ ಶಾಸಕರು.

ತೇಜಸ್ವಿ ಸೂರ್ಯ, ರವಿ ಸುಬ್ರಮಣ್ಯ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ತೇಜಸ್ವಿ ಸೂರ್ಯ ಗೆದ್ದು ಸಂಸತ್ ಪವೇಶಿಸಿದ್ದಾರೆ. ಅವರ ಚಿಕ್ಕಪ್ಪ ರವಿ ಸುಬ್ರಮಣ್ಯ ಅವರು ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕರು.

ಪ್ರಜ್ವಲ್ ರೇವಣ್ಣ, ಎಚ್.ಡಿ.ರೇವಣ್ಣ
ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದು ಪ್ರಜ್ವಲ್ ರೇವಣ್ಣ ಅವರು ಸಂಸತ್ ಪ್ರವೇಶ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಅವರು ಶಾಸಕರು, ಕರ್ನಾಟಕದ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾರೆ.












Click it and Unblock the Notifications