ಲೋಕಸಭಾ ಚುನಾವಣೆ : ಕರ್ನಾಟಕದಿಂದ ಮೊದಲ ಬಾರಿ ಗೆದ್ದ 10 ಸಂಸದರು
Recommended Video
ಬೆಂಗಳೂರು, ಮೇ 26 : 2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಹಲವು ಹಾಲಿ ಸಂಸದರು ಆಯ್ಕೆಯಾಗಿದ್ದಾರೆ. 10 ಜನ ಸಂಸದರು ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದಾರೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 25 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಜಯಗಳಿಸಿವೆ. ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ಮಂಡ್ಯದಿಂದ ಸುಮಲತಾ ಸೇರಿ ಇಬ್ಬರು ಮಹಿಳೆಯರು ಸಂಸತ್ ಪವೇಶಿಸಿದ್ದಾರೆ. ಬಿಜೆಪಿಯ ಹಲವು ಹಾಲಿ ಸಂಸದರು ಪುನರಾಯ್ಕೆಯಾಗಿದ್ದಾರೆ. ಕಾಂಗ್ರೆಸ್ನ ಡಿ.ಕೆ.ಸುರೇಶ್ ಬೆಂಗಳೂರು ಗ್ರಾಮಾಂತರದಿಂದ ಪುನಃ ಗೆಲುವು ಸಾಧಿಸಿದ್ದಾರೆ.
ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಸೋತ ಘಟಾನುಘಟಿ ನಾಯಕರು!
2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಅಣ್ಣಾ ಸಾಹೇಬ್ ಜೊಲ್ಲೆ ಮತ್ತು ನಾರಾಯಣಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಮೊದಲ ಬಾರಿಗೆ ಗೆದ್ದ ಸಂಸದರ ವಿವರ ಇಲ್ಲಿವೆ....
ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!
ಬಿಜೆಪಿಯ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 7,39,229 ಮತಗಳನ್ನು ಪಡೆದು ಬಿಜೆಪಿಯ ತೇಜಸ್ವಿ ಸೂರ್ಯ ಅವರು ಜಯಗಳಿಸಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದಾರೆ. 28 ವರ್ಷದ ತೇಜಸ್ವಿ ಸೂರ್ಯ ವಕೀಲರು, ಚುನಾವಣೆಯಲ್ಲಿ 3,31,192 ಮತಗಳಿಂದ ಕಾಂಗ್ರೆಸ್-ಜೆಡಿಎಸ್ನ ಬಿ.ಕೆ.ಹರಿಪ್ರಸಾದ್ ಅವರನ್ನು ಸೋಲಿಸಿದ್ದಾರೆ.
ಜೆಡಿಎಸ್ನ ಪ್ರಜ್ವಲ್ ರೇವಣ್ಣ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು 6,76,606 ಮತಗಳನ್ನು ಪಡೆಯುವ ಮೂಲಕ ಹಾಸನ ಕ್ಷೇತ್ರದಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ದಾರೆ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ಅವರು 1,41,324 ಮತಗಳ ಅಂತರದಿಂದ ಬಿಜೆಪಿಯ ಎ.ಮಂಜು ಅವರನ್ನು ಸೋಲಿಸಿದ್ದಾರೆ.
ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ
ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ 6,45,017 ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಸೋಲು ಕಂಡಿದ್ದ ಅವರು ಈಗ ಸಂಸತ್ ಸದಸ್ಯರು. ಮೈತ್ರಿಕೂಟದ ಪ್ರಕಾಶ್ ಹುಕ್ಕೇರಿ ಅವರನ್ನು 1,18,887 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಬಿಜೆಪಿಯ ಡಾ.ಉಮೇಶ್ ಜಾಧವ್
ಗುಲ್ಬರ್ಗ ಕ್ಷೇತ್ರದಿಂದ ಬಿಜೆಪಿಯ ಡಾ.ಉಮೇಶ್ ಜಾಧವ್ ಅವರು ಲೋಕಸಭೆ ಕಾಂಗ್ರೆಸ್ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು 95,452 ಮತಗಳಿಂದ ಸೋಲಿಸಿ ಮೊದಲ ಬಾರಿ ಸಂಸತ್ ಪ್ರವೇಶಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಸುಮಲತಾ ಅಂಬರೀಶ್
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 703660 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಮೊದಲ ಬಾರಿ ಸಂಸತ್ ಪ್ರವೇಶ ಮಾಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು 125876 ಮತಗಳಿಂದ ಅವರು ಸೋಲಿಸಿದ್ದಾರೆ.
ಇತಿಹಾಸ ನಿರ್ಮಿಸಿದ ಎಸ್.ಮುನಿಸ್ವಾಮಿ
ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಮುನಿಸ್ವಾಮಿ ಅವರು 709165 ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಕ್ಷೇತ್ರದ 6 ಬಾರಿಯ ಸಂಸದ ಕಾಂಗ್ರೆಸ್ನ ಕೆ.ಎಚ್.ಮುನಿಯಪ್ಪ ಅವರನ್ನು 210021 ಮತಗಳ ಅಂತರದಿಂದ ಅವರು ಸೋಲಿಸಿದ್ದಾರೆ. ಅಚ್ಚರಿ ಎಂದರೆ ಎಸ್.ಮುನಿಸ್ವಾಮಿ ಅವರು ಬಿಬಿಎಂಪಿಯ ಕಾಡಿಗೋಡಿ ವಾರ್ಡ್ ಸದಸ್ಯರಾಗಿದ್ದರು. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಬಿಎಂಪಿ ಸದಸ್ಯರೊಬ್ಬರು ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯ ಬಿ.ಎನ್.ಬಚ್ಚೇಗೌಡ
ಚಿಕ್ಕಬಳ್ಳಾಪುರ ಕ್ಷೇತ್ರದಿಂದ 745912 ಮತಗಳನ್ನು ಪಡೆದು ಗೆದ್ದ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಅವರು, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರನ್ನು 182110 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಬಿಜೆಪಿಯ ವೈ.ದೇವೇಂದ್ರಪ್ಪ
ಬಿಜೆಪಿಯ ವೈ.ದೇವೇಂದ್ರಪ್ಪ ಅವರು 616388 ಮತಗಳನ್ನು ಪಡೆದು ಬಳ್ಳಾರಿ ಕ್ಷೇತ್ರದಿಂದ ಆಯ್ಕೆಯಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಕ್ಷೇತ್ರದ ಹಾಲಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು 557707 ಮತಗಳಿಂದ ಸೋಲಿಸಿದ್ದಾರೆ.
ಎ.ನಾರಾಯಣಸ್ವಾಮಿ
ಬಿಜೆಪಿಯ ಎ.ನಾರಾಯಣಸ್ವಾಮಿ ಅವರು ಚಿತ್ರದುರ್ಗ ಕ್ಷೇತ್ರದಲ್ಲಿ 6,26,195 ಮತಗಳನ್ನು ಪಡೆದು ಜಯಗಳಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಆನೇಕಲ್ನ ನಾರಾಯಣಸ್ವಾಮಿ ಅವರು ಚಿತ್ರದುರ್ಗದಲ್ಲಿ ಚುನಾವಣೆಗೆ ನಿಂತು ಹಾಲಿ ಸಂಸದರಾಗಿದ್ದ ಬಿ.ಎನ್.ಚಂದ್ರಪ್ಪ ಅವರನ್ನು 80178 ಮತಗಳಿಂದ ಸೋಲಿಸಿದ್ದಾರೆ.
ಬಿಜೆಪಿಯ ರಾಜಾ ಅಮರೇಶ್ವರ ನಾಯಕ್
ಬಿಜೆಪಿಯ ರಾಜಾ ಅಮರೇಶ್ವರ ನಾಯಕ್ ಅವರು 5,98,337 ಮತಗಳನ್ನು ಪಡೆದು ಸಂಸತ್ಗೆ ಮೊದಲ ಬಾರಿಗೆ ಪ್ರವೇಶಿಸಿದ್ದಾರೆ. ಹಾಲಿ ಸಂಸದರಾಗಿದ್ದ ಕಾಂಗ್ರೆಸ್ನ ಬಿ.ವಿ.ನಾಯಕ್ ಅವರನ್ನು 1,17,716 ಮತಗಳಿಂದ ಸೋಲಿಸಿದ್ದಾರೆ.