ಪಕ್ಷ ನಿಷ್ಠೆ, ಜನಪರ ಕಾಳಜಿಯ ಕೋಟ ಶ್ರೀನಿವಾಸ ಪೂಜಾರಿ ಪರಿಚಯ
ಬೆಂಗಳೂರು, ಆಗಸ್ಟ್ 21 : ಕರಾವಳಿ ಭಾಗದ ಪ್ರಭಾವಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ. ವಿಧಾನ ಪರಿಷತ್ ಕೋಟಾದಿಂದ ಯಡಿಯೂರಪ್ಪ ಸಂಪುಟ ಸೇರಿದ ಏಕೈಕ ನಾಯಕರು ಇವರು.
ಹಿಂದುಳಿದ ಬಿಲ್ಲವ ಸಮುದಾಯಕ್ಕೆ ಸೇರಿದ 54 ವರ್ಷದ ಕೋಟ ಶ್ರೀನಿವಾಸ ಪೂಜಾರಿ ಪಕ್ಷದಲ್ಲಿ ತಳಮಟ್ಟದಿಂದ ಬೆಳೆದು ಬಂದವರು. ಪಕ್ಷ, ಸಂಘ ಪರಿವಾರಕ್ಕೆ ನಿಷ್ಠರು, ಅಪಾರವಾದ ಜನಪರ ಕಾಳಜಿ ಹೊಂದಿರುವ ಕೆಲವು ನಾಯಕರಲ್ಲಿ ಒಬ್ಬರು.
ಯಡಿಯೂರಪ್ಪ ಸಂಪುಟ ಸೇರಿ ಬಿ. ಡಿ. ಜತ್ತಿ ದಾಖಲೆ ಮುರಿದ ಶೆಟ್ಟರ್!
ಮೂರು ಬಾರಿ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಪರಿಷತ್ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಜರಾಯಿ, ಬಂದರು ಮತ್ತು ಒಳನಾಡು ಖಾತೆಯ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಯಡಿಯೂರಪ್ಪ ಸಂಪುಟ ಸೇರಿದ ಶಶಿಕಲಾ ಜೊಲ್ಲೆ ಪರಿಚಯ
7ನೇ ತರಗತಿ ಓದಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲ ವೃತ್ತಿ ಕೃಷಿ. ಉಡುಪಿ ಜಿಲ್ಲೆಯ ಕೋಟಾದ ಬಡ ಕುಟುಂಬದಲ್ಲಿ ಜನಿಸಿದ ಅವರು, ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಮುನ್ನ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ತಳಮಟ್ಟದಿಂದ ವಿವಿಧ ಹುದ್ದೆಗಳನ್ನು ಪಡೆದಿದ್ದಾರೆ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಚಿವ ಸ್ಥಾನ ಒಲಿದು ಬಂದಿದೆ.
ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭೆ ಚುನಾವಣಾ ಕಣಕ್ಕಿಳಿದು ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡರು. ಪಕ್ಷದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.