Sharath bacchegowda profile: ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಎದುರಾಳಿ ಯಾರು?
ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮೇ 10ಕ್ಕೆ ನಡೆಯಲಿದೆ. ಇದರ ತಯಾರಿಯಲ್ಲಿರುವ ಪಕ್ಷಗಳು ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕೆಲ ಅಭ್ಯರ್ಥಿಗಳ ಪಟ್ಟಿಗಳನ್ನು ಬಿಡುಗಡೆ ಮಾಡಿವೆ. ಹೀಗೆ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದ ಪಕ್ಷಗಳಲ್ಲಿ ಕಾಂಗ್ರೆಸ್ ಕೂಡ ಒಂದು. ಕಾಂಗ್ರೆಸ್ ಪಕ್ಷ ಈ ಬಾರಿ ಯುವ ರಾಜಕಾರಣಿಗಳಿಗೂ ಮಣೆ ಹಾಕಿದೆ. 224 ಕ್ಷೇತ್ರಗಳ ಪೈಕಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪೈಕಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಕೂಡ ಒಬ್ಬರು.
ಹೊಸಕೋಟೆ ಕ್ಷೇತ್ರದಲ್ಲಿ ತಮ್ಮದೇ ಆದ ಯುವಪಡೆ ಕಟ್ಟಿಕೊಂಡು ಶರತ್ ಬಚ್ಚೇಗೌಡ ಪ್ರಭಾವಿ ಯುವ ರಾಜಕಾರಣಿ. ಶರತ್ ಬಚ್ಚೇಗೌಡ ಪಕ್ಷಾಂತರಗೊಂಡ ಅಭ್ಯರ್ಥಿ. ಆದರೂ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಶರತ್ ಬಚ್ಚೇಗೌಡಗೆ ಟಿಕೆಟ್ ನೀಡಿರುವುದರ ಹಿಂದೆ ಕಾಂಗ್ರೆಸ್ ದೊಡ್ಡ ಲೆಕ್ಕಾಚಾರವೇ ಇದೆ.

ಹೊಸಕೋಟೆಯನ್ನು ತನ್ನ ತೆಕ್ಕೆಗೆ ತಂದುಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ಶರತ್ ಬಚ್ಚೇಗೌಡಗೆ ಟಿಕೆಟ್ ನೀಡಿದೆ. ಆದರೆ ಈವರೆಗೂ ಬಿಜೆಪಿಯಾಗಲೀ ಅಥವಾ ಜೆಡಿಎಸ್, ಇತರ ಯಾವುದೇ ಪಕ್ಷಗಳಾಗಲಿ ಅವರ ವಿರುದ್ಧ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಬಿಜೆಪಿ ಈವರೆಗೂ ಯಾವ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿಲ್ಲ. ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ ಹೊಸಕೋಟೆಯಿಂದ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಬೇಕಿದೆ.
ಪಕ್ಷಗಳು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದನ್ನು ಗಮನಿಸಿದರೆ ಪಕ್ಷಗಳು ಹೊಸಕೋಟೆಯನ್ನು ಪ್ರಬಲ ಕ್ಷೇತ್ರ ಎಂದು ಪರಿಗಣಿಸಿದಂತೆ ಕಾಣಿಸುತ್ತಿದೆ. ಇದೇ ಕಾರಣಕ್ಕೆ ಹೊಸಕೋಟೆ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ.
ಶರತ್ ಬಚ್ಚೇಗೌಡ ಯಾರು?
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಅವರ ಮಗನಾದ ಶರತ್ ಬಚ್ಚೇಗೌಡ ಹೊಸಕೋಟೆಯ ಶಾಸಕರಾಗಿದ್ದಾರೆ. ಕಳೆದ 2018ರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಅವರ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕಲು ಮಾಜಿ ಸಿ.ಎಂ ಯಡಿಯೂರಪ್ಪ , ಶರತ್ ಬಚ್ಚೇಗೌಡ ಅವರನ್ನು ರಾಜಕೀಯಕ್ಕೆ ಕರೆತಂದರು. ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಶರತ್ 7,597 ಮತಗಳ ಅಂತರದಿಂದ ಸೋಲು ಕಂಡರು. ಆದರೆ ಅದಾಗಲೇ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದು ಯುವಕರನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ರಾಜ್ಯ ರಾಜಕೀಯದಲ್ಲಾದ ಬದಲಾವಣೆ ಶರತ್ ಬಚ್ಚೇಗೌಡ ಅವರ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿತ್ತು. ಕಾಂಗ್ರೆಸ್ ಬಳಿಕ ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆಯಾದರು. ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಬಂಡಾಯವೆದ್ದ ಶರತ್ ಬಚ್ಚೆಗೌಡ ಬಿಜೆಪಿ ಪಕ್ಷದಿಂದ ಹೊರಗುಳಿದು ಸ್ವತಂತ್ರ ಅಭ್ಯರ್ಥಿಯಾದರು. ಹೀಗಾಗಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯಿಂದ ನಿಂತ ಎಂಟಿಬಿ ನಾಗರಾಜ್ರನ್ನು ಸೋಲಿಸಿದರು.
ಕಮಲ ಬಿಟ್ಟು 'ಕೈ' ಹಿಡಿದ ಶರತ್ ಬಚ್ಚೇಗೌಡ
ಬಳಿಕ ಕಾಂಗ್ರೆಸ್ನತ್ತ ಒಲವು ತೋರಿದ ಶರತ್ ಬಚ್ಚೇಗೌಡ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದರು. ಸದ್ಯ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಆದರೆ ವಲಸೆ ಬಂದಿರುವ ಶರತ್ ಬಚ್ಚೇಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಹೊಸಕೋಟೆಯ ಮೂಲ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದರು.
ಶರತ್ ಬದಲಿಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಪ್ರಸಾದ್ ಅಥವಾ ಮುನಿಶಾಮಣ್ಣಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಈ ಹಿಂದೆ ಹೊಸಪೇಟೆ ಕ್ಷೇತ್ರದಲ್ಲಿ ಸಾಕಷ್ಟು ಗಲಾಟೆಗಳು ಸಹ ನಡೆದಿದ್ದು, ಬೆಂಬಲಿಗರು ಕೈ ಕೈ ಮಿಲಾಯಿಸುವ ಹಂತದಲ್ಲಿ ಗಲಾಟೆ ನಡೆಸಿದ್ದರು. ಆದರೆ ಕಾರ್ಯಕರ್ತರ ಅಸಮಾಧಾನದ ನಡುವೆಯೇ ಸದ್ಯ ಕಾಂಗ್ರೆಸ್ ಗೆಲ್ಲುವ ಕುದುರೆ ಎನ್ನುವ ಲೆಕ್ಕಾಚಾರದಲ್ಲಿ ಶರತ್ ಬಚ್ಚೇಗೌಡಗೆ ಟಿಕೆಟ್ ನೀಡಿದೆ.

ಹೊಸಕೋಟೆಯಲ್ಲಿ ಕಮಲ-ಕೈ ಕಾದಾಟ
2023ರ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರ ಮತ್ತೆ ಸದ್ದು ಮಾಡಲಿದ್ದು, ಶರತ್ ಬಚ್ಚೇಗೌಡ ವಿರುದ್ಧದ ಸೋಲಿನ ಪ್ರತಿಕಾರ ತೀರಿಸಿಕೊಳ್ಳಲು ಎಂಟಿಬಿ ನಾಗರಾಜ್ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದರೆ, ಹಾಲಿ ಸಚಿವರಾಗಿರುವ ಎಂಟಿಬಿ ನಾಗರಾಜ್ ಕ್ಷೇತ್ರವನ್ನು ಮತ್ತೆ ಪಡೆಯುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಮತ ಸೆಳೆಯಲು ಮುಂದಾಗಿದ್ದಾರೆ.
ಇನ್ನು ತಮ್ಮ ಕೈಯಲ್ಲಿರುವ ಹೊಸಕೋಟೆ ಕ್ಷೇತ್ರವನ್ನು ಭದ್ರಪಡಿಸಿಕೊಳ್ಳಲು ಶರತ್ ಬಚ್ಚೇಗೌಡ ಶತ ಪ್ರಯತ್ನ ನಡೆಸುತ್ತಿದ್ದಾರೆ. 2018ರ ಚುನಾವಣೆಗೂ ಹಾಗೂ 2023ರ ವಿಧಾನಸಭೆ ಚುನಾವಣೆಗೂ ಹೊಸಕೋಟೆಯಲ್ಲಿ ಅದೇ ಅಭ್ಯರ್ಥಿಗಳು ಮುಖಾಮುಖಿಯಾಗಲಿದ್ದು, ಅಭ್ಯರ್ಥಿಗಳ ಪಕ್ಷ ಮಾತ್ರ ಪರಸ್ಪರ ಬದಲಾವಣೆಯಾಗಿದೆ.
ಚುನಾವಣಾ ದಿನಾಂಕ ಘೋಷಣೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.












Click it and Unblock the Notifications