ಅಂದು ಸರ್ಕಾರಿ ನೌಕರ, ಇಂದು ಸಚಿವ : ಎಚ್.ನಾಗೇಶ್ ಪರಿಚಯ!
ಬೆಂಗಳೂರು, ಜೂನ್ 14 : ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕಿದ್ದ ವ್ಯಕ್ತಿ ಈಗ ಇಲಾಖೆಯೊಂದರ ಸಚಿವರು. ಹೌದು, ಮಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಿದ್ದಾರೆ.
ಶುಕ್ರವಾರ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ನಡೆದಿದೆ. ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್, ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ಮುಳಬಾಗಿಲು ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಚ್.ನಾಗೇಶ್ ಜೆಡಿಎಸ್ ಕೋಟಾದಿಂದ ಸಚಿವರಾಗಿದ್ದಾರೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ್ದಕ್ಕೆ ಸಚಿವ ಸ್ಥಾನವನ್ನು ನೀಡಲಾಗಿದೆ.
'ಈ ಬಾರಿ ನನಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬೇಡ. ಸಚಿವ ಸ್ಥಾನವೇ ಬೇಕು' ಎಂದು ಪಟ್ಟು ಹಿಡಿದಿದ್ದ ಎಚ್.ನಾಗೇಶ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ....

ಸರ್ಕಾರಿ ನೌಕರರಾಗಿದ್ದರು
ಐಆರ್ಎಸ್ ಅಧಿಕಾರಿಯಾಗಿದ್ದ ಎಚ್.ನಾಗೇಶ್ 34 ವರ್ಷ ಸರ್ಕಾರಿ ಸೇವೆ ಮಾಡಿದ್ದಾರೆ. ಬೆಸ್ಕಾಂ ತಾಂತ್ರಿಕ ವಿಭಾಗದ ನಿರ್ದೇಶಕ, ಕೆಪಿಟಿಸಿಎಲ್ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ದಲಿತ ಚಳವಳಿಯಲ್ಲಿ ತೊಡಗಿಕೊಂಡ ಅವರು ನಂತರ ರಾಜಕೀಯಕ್ಕೆ ಬಂದರು.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
2018ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ನಾಗೇಶ್ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಮಂಜುನಾಥ್ ಅವರಿಗೆ ಟಿಕೆಟ್ ನೀಡಿತು. ಆದ್ದರಿಂದ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ನಕಲಿ ಜಾತಿ ಪ್ರಮಾಣ ಪತ್ರದ ಕಾರಣದಿಂದಾಗಿ ಮಂಜುನಾಥ್ ನಾಮಪತ್ರ ತಿರಸ್ಕಾರವಾಯಿತು. ಇದರಿಂದಾಗಿ ಎಚ್.ನಾಗೇಶ್ ಸುಲಭವಾಗಿ ಜಯಗಳಿಸಿ ಮೊದಲ ಬಾರಿಗೆ ಶಾಸಕರಾದರು.

ಡಿ.ಕೆ.ಶಿವಕುಮಾರ್ ಬೆಂಬಲಿಗರು
ಎಚ್.ನಾಗೇಶ್ ಜಲಸಂಪನ್ಮೂಲ ಸಚಿವ ಎಚ್.ನಾಗೇಶ ಬೆಂಬಲಿಗರು. ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಅವರು ಡಿ.ಕೆ.ಶಿವಕುಮಾರ್ ಜೊತೆ ಬೆಂಗಳೂರಿಗೆ ಆಗಮಿಸಿದರು. ಸಮ್ಮಿಶ್ರ ಸರ್ಕಾರ ರಚನೆಗೆ ಬೆಂಬಲ ನೀಡಿದರು. ಇದರಿಂದಾಗಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಶಿಕ್ಷಣ ಖಾತೆ ಸಿಗುವ ಸಾಧ್ಯತೆ
2018ರ ವಿಧಾನಸಭೆ ಚುನಾವಣೆಯಲ್ಲಿ 74,213 ಮತಗಳನ್ನು ಪಡೆದು ಗೆಲುವು ಸಾಧಿಸಿರುವ ಎಚ್.ನಾಗೇಶ್ ಅವರಿಗೆ ಶಿಕ್ಷಣ ಖಾತೆ ಸಿಗುವ ಸಾಧ್ಯತೆ ಇದೆ. 'ಸಚಿವರಾಗಿ ಸಂಪುಟ ಸೇರಿದ್ದರೂ ಯಾವುದೇ ಕಾರಣಕ್ಕೂ ಜೆಡಿಎಸ್ ಸೇರುವುದಿಲ್ಲ' ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications