2017ರ ವರ್ಷದ ವ್ಯಕ್ತಿ : ಇಂಧನ ಸಚಿವ ಡಿ.ಕೆ.ಶಿವಕುಮಾರ್
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ರಾಜ್ಯದ ಪ್ರಭಾವಿ ಸಚಿವರು. ಈ ವರ್ಷ ರಾಷ್ಟ್ರ ಮಟ್ಟದಲ್ಲಿ ಅವರು ಸುದ್ದಿ ಮಾಡಿದರು. ಐಟಿ ದಾಳಿ, ರಾಜ್ಯಸಭೆ ಚುನಾವಣೆ, ಚನ್ನಪಟ್ಟಣದ ರಾಜಕೀಯ ಮುಂತಾದ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಭಾರೀ ಚರ್ಚೆ ನಡೆಯಿತು.
ಒಕ್ಕಲಿಗ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ನ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರು. 2018ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದ್ದು, ಡಿ.ಕೆ.ಶಿವಕುಮಾರ್ ಅವರ ಪಾತ್ರ ಬಹಳ ಮುಖ್ಯವಾಗಿದೆ.
ಗುಜರಾತ್ ರಾಜ್ಯಸಭೆ ಚುನಾವಣೆ ಸಮಯದಲ್ಲಿ ಅಲ್ಲಿನ ಕಾಂಗ್ರೆಸ್ ಶಾಸಕರು ಬೆಂಗಳಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ಈ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆಯಿತು. ಈ ದಾಳಿ ರಾಜ್ಯ ಮತ್ತು ದೇಶ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು.
ರಾಮನಗರ ಡಿ.ಕೆ.ಶಿವಕುಮಾರ್ ಅವರ ತವರು ಜಿಲ್ಲೆ. ಜಿಲ್ಲೆಯ ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎಂದು ಈಗಾಗಲೇ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಒನ್ ಇಂಡಿಯಾ ಕನ್ನಡ 2017ರ ವರ್ಷದ ವ್ಯಕ್ತಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿದೆ.