ಚುನಾವಣಾ ಚಿತ್ರಣ : ಬೆಂಗಳೂರು ಉತ್ತರದಲ್ಲಿ ಯಾವ ಗೌಡರಿಗೆ ಗೆಲುವು?
ಬೆಂಗಳೂರು, ಏಪ್ರಿಲ್ 10 : ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಕಣ ಕುತೂಹಲ ಮೂಡಿಸಿದೆ. ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಎದುರಾಳಿಯಾಗಿದ್ದಾರೆ. ಏಪ್ರಿಲ್ 18ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಒಕ್ಕಲಿಗ ಮತದಾರರು ನಿರ್ಣಾಯಕವಾಗಿರುವ ಕ್ಷೇತ್ರ ಬೆಂಗಳೂರು ಉತ್ತರ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖಾಮುಖಿಯಾಗಿದ್ದಾರೆ. ಡಿ.ವಿ.ಸದಾನಂದ ಗೌಡರು 2ನೇ ಗೆಲುವಿನ ಉತ್ಸಾಹದಲ್ಲಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಪುಟ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. 5 ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು 2 ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಶಾಸಕರಿದ್ದು, ಮೇಲ್ನೋಟಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಬಲ ಹೆಚ್ಚು ಕಾಣಿಸುತ್ತಿದೆ.
2009ರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಅಂತರ 59,665 ಆಗಿತ್ತು. 2014ರ ಚುನಾವಣೆಯಲ್ಲಿ 2,29,764ಕ್ಕೆ ಏರಿಕೆಯಾಗಿದೆ. ಈ ಬಾರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬುದು ಬಿಜೆಪಿ ಕಾರ್ಯಕರ್ತರ ವಿಶ್ವಾಸವಾಗಿದೆ....

ಹಿಂದಿನ ಚುನಾವಣೆಗಳ ಫಲಿತಾಂಶ
ಹಿಂದಿನ ಚುನಾವಣೆಗಳ ಫಲಿತಾಂಶ ಗಮನಿಸಿದರೆ ಬೆಂಗಳೂರು ಉತ್ತರ ಬಿಜೆಪಿ ಭದ್ರಕೋಟೆ. 2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಎಚ್.ಟಿ.ಸಾಂಗ್ಲಿಯಾ, 2009ರ ಚುನಾವಣೆಯಲ್ಲಿ ಡಿ.ಬಿ.ಚಂದ್ರೇಗೌಡ, 2014ರ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡರು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸ್ಥಿತಿ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 2009ರ ಚುನಾವಣೆಯಲ್ಲಿ ಕಾಂಗ್ರೆಸ್ನ ಸಿ.ಕೆ.ಜಾಫರ್ ಷರೀಫ್ 3,93,255 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಬಿಜೆಪಿಯ ಡಿ.ಬಿ.ಚಂದ್ರೇಗೌಡ 4,52,920 ಮತ ಪಡೆದು ಜಯಗಳಿಸಿದ್ದರು.
2014ರ ಚುನಾವಣೆಯಲ್ಲಿ ಕಾಂಗ್ರೆಸ್ನ ಸಿ.ನಾರಾಯಣ ಸ್ವಾಮಿ ಅವರು 4,88,562 ಮತ ಪಡೆದು ಸೋತಿದ್ದರು. ಬಿಜೆಪಿಯ ಡಿ.ವಿ.ಸದಾನಂದ ಗೌಡ ಅವರು 7,18,326 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಶಾಸಕರೇ ಹೆಚ್ಚು
ಬೆಂಗಳೂರು ಉತ್ತರ ಕ್ಷೇತ್ರದ ವಿಧಾನಸಭಾ ಬಲಾಬಲ ನೋಡಿದರೆ ಕಾಂಗ್ರೆಸ್ ಶಕ್ತಿ ಹೆಚ್ಚಿದೆ. 8 ವಿಧಾನಸಭಾ ಕ್ಷೇತ್ರಗಳ ಪೈಕಿ ಯಶವಂತಪುರ, ಕೆ.ಆರ್.ಪುರ, ಬ್ಯಾಟರಾಯನಪುರ, ಯಶವಂತಪುರ ಮತ್ತು ಹೆಬ್ಬಾಳ ಸೇರಿ 5 ಕಾಂಗ್ರೆಸ್ ಶಾಸಕರಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ಮತ್ತು ಪುಲಿಕೇಶಿ ನಗರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಮಲ್ಲೇಶ್ವರಂ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಚುನಾವಣೆಯಲ್ಲಿ ಸಹಕಾರಿಯಾಗುವ ಸಾಧ್ಯತೆ ಇದೆ.

ಜೆಡಿಎಸ್ಗೆ ಬಿಟ್ಟುಕೊಡಲಾಗಿತ್ತು
ಲೋಕಸಭಾ ಚುನಾವಣೆಯ ಮೈತ್ರಿ ಅನ್ವಯ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬೆಂಗಳೂರು ಉತ್ತರ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಆದರೆ, ಕೊನೆ ಕ್ಷಣದಲ್ಲಿ ಜೆಡಿಎಸ್ ಕಾಂಗ್ರೆಸ್ಗೆ ಕ್ಷೇತ್ರವನ್ನು ವಾಪಸ್ ನೀಡಿತು. ಕೃಷ್ಣ ಬೈರೇಗೌಡ ಅವರು ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಆದ್ದರಿಂದ, ಸದಾನಂದ ಗೌಡ ಮತ್ತು ಕೃಷ್ಣ ಬೈರೇಗೌಡ ಎದುರಾಳಿಗಳು.

ಈ ಬಾರಿ ಗೆಲುವು ಯಾರಿಗೆ?
2014ರಲ್ಲಿ ಗೆದ್ದ ಬಳಿಕ ಮಾಡಿದ ಕೆಲಸ, ನರೇಂದ್ರ ಮೋದಿ ಅವರ ಆಡಳಿತವನ್ನು ಮುಂದಿಟ್ಟುಕೊಂಡು ಡಿ.ವಿ.ಸದಾನಂದ ಗೌಡ ಅವರು ಮತ ಕೇಳುತ್ತಿದ್ದಾರೆ.
ಕೃಷ್ಣ ಬೈರೇಗೌಡರು ಉತ್ತರ ಕ್ಷೇತ್ರದ ವ್ಯಾಪ್ತಿಗೆ ಒಳ ಪಡುವ ಬ್ಯಾಟರಾಯನಪುರ ಕ್ಷೇತ್ರದ ಶಾಸಕರು. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಚುನಾವಣೆಯಲ್ಲಿ ಸಹಾಯಕವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.












Click it and Unblock the Notifications